ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಬಸ್ ಪಲ್ಟಿ; ಇಬ್ಬರು ಸಾವು
x

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಐಮಂಗಲ ಬಳಿ ರಸ್ತೆ ಬದಿಯ ಟ್ರೆಂಚ್‌ಗೆ ಉರುಳಿದೆ.

ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಬಸ್ ಪಲ್ಟಿ; ಇಬ್ಬರು ಸಾವು

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಐಮಂಗಲ ಬಳಿ ಭೀಕರ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.


Click the Play button to hear this message in audio format

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟು 20 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ಬಸ್‌ನಲ್ಲಿ ಒಟ್ಟು 53 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

20ಕ್ಕೂ ಹೆಚ್ಚು ಮಂದಿಗೆ ಗಾಯ

ಅಪಘಾತದಲ್ಲಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ರಕ್ಷಿಸಿ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆ ನೀಡುತ್ತಿದ್ದಾರೆ.

ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಐಮಂಗಲ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಬಸ್‌ನೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಬಳಿಕ ಕ್ರೇನ್‌ ಸಹಾಯದಿಂದ ಅಪಘಾತಕ್ಕೀಡಾದ ಬಸ್‌ನ್ನು ಸ್ಥಳದಿಂದ ತೆರವುಗೊಳಿಸಲಾಯಿತು.

ಅಪಘಾತಕ್ಕೆ ಕಾರಣದ ಬಗ್ಗೆ ತನಿಖೆ

ಬಸ್‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರೆಂಚ್‌ಗೆ ಬಿದ್ದಿರುವುದು ಪ್ರಾಥಮಿಕವಾಗಿ ತಿಳಿದುಬಂದಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಚಾಲಕನ ನಿಯಂತ್ರಣ ತಪ್ಪಿದ್ದೇ, ಅತಿವೇಗವೇ ಅಥವಾ ಮತ್ತಾವುದೇ ಕಾರಣವಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರ ಗುರುತು ಹಾಗೂ ಅಪಘಾತದ ಸಂಪೂರ್ಣ ವಿವರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದು, ಗಾಯಾಳುಗಳ ಹೇಳಿಕೆ ಮತ್ತು ಬಸ್‌ನ ಸ್ಥಿತಿಯನ್ನು ಆಧರಿಸಿ ತನಿಖೆ ಮುಂದುವರಿದಿದೆ.

Read More
Next Story