
ದರೋಡೆ ಮಾಡಿದ್ದ ತಮಿಳುನಾಡಿನ 6 ವಿದ್ಯಾರ್ಥಿಗಳ ಬಂಧಿಸಲಾಗಿದೆ.
ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದ ಕೊಯಮತ್ತೂರಿನ ಆರು ಕಾಲೇಜು ವಿದ್ಯಾರ್ಥಿಗಳ ಸೆರೆ
ಬೆಂಗಳೂರಿನ ಪವಮಾನ ನಗರದ ಮನೆಯೊಂದಕ್ಕೆ ನುಗ್ಗಿ ದರೋಡೆ ಮಾಡಿದ್ದ ತಮಿಳುನಾಡಿನ ಆರು ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಕೋಣನಕುಂಟೆ ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಮನೆವೊಂದಕ್ಕೆ ನುಗ್ಗಿ ದರೋಡೆ ಮಾಡಿದ್ದ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಆರು ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತರಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಎರಡು ದ್ವಿಚಕ್ರ ವಾಹನಗಳು, ನಾಲ್ಕು ಮೊಬೈಲ್ ಫೋನ್ಗಳು ಮತ್ತು ಎರಡು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ತಿಂಗಳ ಆರಂಭದಲ್ಲಿ ಆರೋಪಿಗಳು ನಗರದ ಮನೆಯೊಂದಕ್ಕೆ ಅಕ್ರಮವಾಗಿ ನುಗ್ಗಿ, ಮಾರಕಾಸ್ತ್ರಗಳಿಂದ ಅಲ್ಲಿನ ನಿವಾಸಿಗಳನ್ನು ಬೆದರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪವಮಾನ ನಗರದ ನಿವಾಸಿಯೊಬ್ಬರು ಏಪ್ರಿಲ್ 18 ರಂದು ಈ ಬಗ್ಗೆ ದೂರು ನೀಡಿದ್ದರು. ಕೇರಳ ಮೂಲದ ವಿದ್ಯಾರ್ಥಿಯಾಗಿದ್ದ ದೂರುದಾರರು, ತಮ್ಮ ಸಹಪಾಠಿಗಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಏಪ್ರಿಲ್ 17 ರ ತಡರಾತ್ರಿ 20 ರಿಂದ 25 ವರ್ಷ ವಯಸ್ಸಿನ ಆರು ಅಪರಿಚಿತ ವ್ಯಕ್ತಿಗಳು ಮನೆಗೆ ನುಗ್ಗಿ, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು. ಚಾಕುವಿನಿಂದ ಇರಿದು ಗಾಯಗೊಳಿಸಿದ್ದಲ್ಲದೆ, ಮನೆಯಲ್ಲಿದ್ದ 10,000 ರೂಪಾಯಿ ನಗದು, ಮೊಬೈಲ್ ಹಾಗೂ ಲ್ಯಾಪ್ಟಾಪ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಾಹಿತಿದಾರರ ನೆರವಿನಿಂದ ತನಿಖೆ ನಡೆಸಿ ಆರೋಪಿಗಳನ್ನು ಕೊಯಮತ್ತೂರಿನಲ್ಲಿ ಪತ್ತೆಹಚ್ಚಿದ್ದಾರೆ.
ವಿಚಾರಣೆಯ ವೇಳೆ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಕಳವು ಮಾಡಿದ್ದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸದ್ಯ ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

