
ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಪಲ್ಟಿ
ಕೊರಟಗೆರೆ ಬಳಿ ಭೀಕರ ಬೈಕ್ ಅಪಘಾತ: ವಿದ್ಯಾರ್ಥಿ ಸಾವು
ಸ್ನೇಹಿತನನ್ನು ಭೇಟಿಯಾಗಿ ವಾಪಸ್ಸಾಗುತ್ತಿದ್ದ ವೇಳೆ ಕೊರಟಗೆರೆ ಬಳಿ ಬೈಕ್ ಮರದ ಬುಡಕ್ಕೆ ಡಿಕ್ಕಿಯಾಗಿ 17 ವರ್ಷದ ವಿದ್ಯಾರ್ಥಿ ಚೇತನ್ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸ್ನೇಹಿತನನ್ನು ಭೇಟಿಯಾಗಿ ಬೈಕ್ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 17 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಚೇತನ್ (17) ಎಂದು ಗುರುತಿಸಲಾಗಿದೆ. ಅವರು ಕೊರಟಗೆರೆ ಪಟ್ಟಣದ ವಸತಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಅಮರೀಶ್ (17) ಮತ್ತು ಯಶವಂತ್ (17) ಎಂದು ಗುರುತಿಸಲಾಗಿದ್ದು, ಇಬ್ಬರಿಗೂ ಗಂಭೀರ ಗಾಯಗಳಾಗಿವೆ.
ಮಾಹಿತಿಯ ಪ್ರಕಾರ, ಮೂವರು ವಿದ್ಯಾರ್ಥಿಗಳು ಸಿದ್ದರಬೆಟ್ಟದಲ್ಲಿ ಹಳೆಯ ಸ್ನೇಹಿತನನ್ನು ಭೇಟಿಯಾಗಿ ಬೈಕ್ನಲ್ಲಿ ವಾಪಸ್ಸಾಗುತ್ತಿದ್ದರು. ಅರಣ್ಯ ಇಲಾಖೆ ನರ್ಸರಿ ಸಮೀಪದ ತಿರುವಿನಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಯಲ್ಲಿದ್ದ ಮರದ ಬುಡಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚೇತನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ
ಅಪಘಾತ ಸಂಭವಿಸಿದ ವೇಳೆ ಅದೇ ಮಾರ್ಗದಲ್ಲಿ ತೆರಳುತ್ತಿದ್ದ ತೋವಿನಕೆರೆ ಮೂಲದ 108 ಆಂಬ್ಯುಲೆನ್ಸ್ ಸ್ಥಳಕ್ಕೆ ತಕ್ಷಣ ಧಾವಿಸಿದೆ. ಆಂಬ್ಯುಲೆನ್ಸ್ ಸಿಬ್ಬಂದಿ ಉಮಾದೇವಿ ಹಾಗೂ ಚಾಲಕ ಶಿವಕುಮಾರ್ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೊರಟಗೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರು ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಕೊರಟಗೆರೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

