SSLC Result 2026| SSLC ಫಲಿತಾಂಶ ಇಂದು ಪ್ರಕಟ: ರಿಸಲ್ಟ್ ನೋಡುವುದು ಹೇಗೆ?
x

ಕರ್ನಾಟಕ SSLC ಫಲಿತಾಂಶ ಇಂದು ಪ್ರಕಟ

SSLC Result 2026| SSLC ಫಲಿತಾಂಶ ಇಂದು ಪ್ರಕಟ: ರಿಸಲ್ಟ್ ನೋಡುವುದು ಹೇಗೆ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು ಮಧ್ಯಾಹ್ನ 12 ಗಂಟೆಗೆ 10ನೇ ತರಗತಿಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಿದೆ.


Click the Play button to hear this message in audio format

ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಿದೆ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಕುತೂಹಲದಿಂದ ಕಾಯುತ್ತಿರುವ ಈ ಫಲಿತಾಂಶವು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಲು karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ಗಳಿಗೆ ಭೇಟಿ ನೀಡಬಹುದು. ಅಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇಂಟರ್ನೆಟ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳಿಗಾಗಿ ಎಸ್‌ಎಂಎಸ್ ಮೂಲಕವೂ ಫಲಿತಾಂಶ ತಿಳಿಯುವ ವ್ಯವಸ್ಥೆ ಮಾಡಲಾಗಿದ್ದು, 'KAR10' ಎಂದು ಟೈಪ್ ಮಾಡಿ ಸ್ಪೇಸ್ ನೀಡಿ ತಮ್ಮ ರೋಲ್ ನಂಬರ್ ಬರೆದು 56263 ಸಂಖ್ಯೆಗೆ ಸಂದೇಶ ಕಳುಹಿಸಬೇಕಾಗುತ್ತದೆ.

ಡಿಜಿಟಲ್ ಇಂಡಿಯಾ ಅಭಿಯಾನದ ಭಾಗವಾಗಿ ಈ ವರ್ಷವೂ ಡಿಜಿಲಾಕರ್ ಮೂಲಕ ವಿದ್ಯಾರ್ಥಿಗಳು ತಮ್ಮ ಮೂಲ ಅಂಕಪಟ್ಟಿಯ ಡಿಜಿಟಲ್ ಪ್ರತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಡಿಜಿಟಲ್ ಅಂಕಪಟ್ಟಿಯು ಮುಂದಿನ ಉನ್ನತ ಶಿಕ್ಷಣದ ಪ್ರವೇಶಾತಿ ಪ್ರಕ್ರಿಯೆಗಳಿಗೆ ತಾತ್ಕಾಲಿಕವಾಗಿ ಮಾನ್ಯತೆ ಪಡೆಯಲಿದೆ. ಈ ಬಾರಿ ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಕಳೆದ ವರ್ಷ ಶೇಕಡಾ 66.14 ರಷ್ಟು ಫಲಿತಾಂಶ ದಾಖಲಾಗಿತ್ತು. ಈ ಬಾರಿ ಉತ್ತೀರ್ಣ ಪ್ರಮಾಣವು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮಂಡಳಿಯ ಮೂಲಗಳು ತಿಳಿಸಿವೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಮಹತ್ವದ ಪ್ರಕಟಣೆ ಹೊರಡಿಸಿದ್ದು, ಈ ವರ್ಷದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷಾ ಪತ್ರಿಕೆಗೆ ಗ್ರೇಡಿಂಗ್ ಬದಲಾಗಿ ಅಂಕಗಳನ್ನೇ ನೀಡುವ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಲಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವಿದ್ಯಾರ್ಥಿಗಳ ಹಿತರಕ್ಷಣೆಗೆ ಪೂರಕ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಈ ಬೆಳವಣಿಗೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನಡೆದಿದೆ. ಗ್ರೇಡಿಂಗ್ ವ್ಯವಸ್ಥೆಯ ನಿರೀಕ್ಷೆಯಲ್ಲಿದ್ದು ತೃತೀಯ ಭಾಷೆಯಲ್ಲಿ ಅನುತ್ತೀರ್ಣರಾಗುವ ಭೀತಿಯಲ್ಲಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲಾಗುವುದು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ರಾಜ್ಯದ ಶೈಕ್ಷಣಿಕ ಪ್ರಗತಿಯ ಬಗ್ಗೆಯೂ ಮಾಹಿತಿ ನೀಡಿದ ಅವರು, ಶಿಕ್ಷಕರು ಮತ್ತು ಅಧಿಕಾರಿಗಳ ನಿರಂತರ ಶ್ರಮದಿಂದಾಗಿ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More
Next Story