
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆ.
ನಟ ದರ್ಶನ್ಗೆ ಜಾಮೀನು ಇಲ್ಲ... ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಅವರ ನೇತೃತ್ವದ ಪೀಠವು ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದ್ದು, ದರ್ಶನ್ ಸದ್ಯಕ್ಕೆ ಜೈಲಿನಲ್ಲಿಯೇ ಮುಂದುವರಿಯುವುದು ಅನಿವಾರ್ಯವಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯವು, ವಿಚಾರಣಾ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. ವಿಚಾರಣೆಯನ್ನು ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಒಂದು ವರ್ಷದ ಗಡುವು ವಿಧಿಸಿರುವ ಸುಪ್ರೀಂ ಕೋರ್ಟ್, ಈ ಅವಧಿಯೊಳಗೆ ಪ್ರಕ್ರಿಯೆ ಮುಗಿಯದಿದ್ದಲ್ಲಿ ಮಾತ್ರ ಜಾಮೀನು ಕೋರಿ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಿದೆ. ಸಾಕ್ಷಿಗಳ ವಿಚಾರಣೆಯನ್ನು ಪದೇ ಪದೆ ನಡೆಸಿ ಸಮಯ ವ್ಯರ್ಥ ಮಾಡಬಾರದು ಮತ್ತು ವಿಚಾರಣೆ ಶೀಘ್ರವಾಗಿ ನಡೆಯಬೇಕು ಎಂದು ಪೀಠವು ನಿರ್ದೇಶಿಸಿದೆ.
ವಿಚಾರಣೆ ವೇಳೆ ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹ್ಟಗಿ ಅವರು, ಪ್ರಕರಣದಲ್ಲಿ 272ಕ್ಕೂ ಹೆಚ್ಚು ಸಾಕ್ಷಿಗಳಿದ್ದು, ಈವರೆಗೆ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಕನಿಷ್ಠ ಮುಖ್ಯ ಸಾಕ್ಷಿಗಳ ವಿಚಾರಣೆಯನ್ನಾದರೂ ಬೇಗ ಮುಗಿಸುವಂತೆ ಮನವಿ ಮಾಡಿದರು. ಆದರೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿದ್ದಾರ್ಥ್ ಲೂತ್ರಾ ಅವರು, ಆರೋಪಿಗಳು ಸಾಕ್ಷಿಗಳ ಮೇಲೆ ಬೀರಿರುವ ಪ್ರಭಾವದ ಬಗ್ಗೆ ಉಲ್ಲೇಖಿಸಿ ಜಾಮೀನು ನೀಡದಂತೆ ವಾದಿಸಿದರು. ಅಂತಿಮವಾಗಿ ನ್ಯಾಯಾಲಯವು ದರ್ಶನ್ ಅವರ ಜೈಲುವಾಸವನ್ನು ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದು, ಇನ್ನು ಕನಿಷ್ಠ ಒಂದು ವರ್ಷದವರೆಗೆ ಅವರು ಜೈಲಿನಲ್ಲಿಯೇ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

