
ಸ್ಯಾಂಡಲ್ವುಡ್ ನಟಿ ಕ್ರಿಷಿ ತಾಪಂಡ ಅವರ ಆಪ್ತ ಗೆಳೆಯ ವೈಶಾಕ್, ನಟಿಯ ಅಪಾರ್ಟ್ಮೆಂಟ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಟಿ ಕೃಷಿ ತಾಪಂಡ ಫ್ಲಾಟ್ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ
ಬೆಂಗಳೂರಿನ ಆರ್ಆರ್ ನಗರದಲ್ಲಿ ನಟಿ ಕೃಷಿ ತಾಪಂಡ ಫ್ಲಾಟ್ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಹಳೇ ಕೇಸ್ ಹಿನ್ನೆಲೆ ಹೊಂದಿದ್ದ ಆತನ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸ್ಯಾಂಡಲ್ವುಡ್ ನಟಿ ಕ್ರಿಷಿ ತಾಪಂಡ ಅವರ ಆಪ್ತ ಗೆಳೆಯ ವೈಶಾಕ್, ನಟಿಯ ಅಪಾರ್ಟ್ಮೆಂಟ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಆರ್.ಆರ್. ನಗರದ ಪ್ರತಿಷ್ಠಿತ 'ಎಲಿಗಂಟ್ಸ್ ಅಪಾರ್ಟ್ಮೆಂಟ್' ನಲ್ಲಿ ಈ ದುರಂತ ಸಂಭವಿಸಿದೆ. ಲಭ್ಯವಿರುವ ಮಾಹಿತಿ ಪ್ರಕಾರ, ಬುಧವಾರ ರಾತ್ರಿ ನಟಿ ಕ್ರಿಷಿ ತಾಪಂಡ ಫ್ಲಾಟ್ಗೆ ಬಂದಿದ್ದ ವೈಶಾಕ್, ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ನಟಿ ಕ್ರಿಷಿ ತಾಪಂಡ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ
ವೈಶಾಕ್ ಸಾವಿನ ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್ಮೆಂಟ್ಗೆ ಧಾವಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಸದ್ಯ ವೈಶಾಕ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿಗೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಉದ್ಯಮಿಗೆ ಜೀವಬೆದರಿಕೆ ಹಾಕಿದ್ದ ವೈಶಾಕ್
ಮೃತ ವೈಶಾಕ್ ಹಿಂದೆ ಹಲವು ವಿಚಾರಗಳಲ್ಲಿ ವಿವಾದಕ್ಕೀಡಾಗಿದ್ದರು. ಪ್ರಖ್ಯಾತ ಉದ್ಯಮಿ ಅರವಿಂದ್ ರೆಡ್ಡಿ ಅವರಿಗೆ ಜೀವಬೆದರಿಕೆ ಹಾಕಿದ ಗಂಭೀರ ಪ್ರಕರಣದಲ್ಲಿ ವೈಶಾಕ್ ಈ ಹಿಂದೆ ಬಂಧಿತನಾಗಿದ್ದ. ಈ ಕುರಿತು ನಗರದ ಹೆಚ್.ಎ.ಎಲ್ (HAL) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಳೆಯ ವೈಷಮ್ಯ ಅಥವಾ ವೈಯಕ್ತಿಕ ಖಿನ್ನತೆ ಈ ಸಾವಿನ ಹಿಂದೆ ಇದೆಯೇ ಎಂಬ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

