Violence erupts in PoK: Over 30 killed in security forces firing
x

ಸಾಂದರ್ಭಿಕ ಚಿತ್ರ

ಪಿಒಕೆಯಲ್ಲಿ ಭುಗಿಲೆದ್ದ ಹಿಂಸಾಚಾರ: ಭದ್ರತಾ ಪಡೆಗಳ ಗುಂಡಿನ ದಾಳಿಗೆ 30ಕ್ಕೂ ಹೆಚ್ಚು ಸಾವು

ಶುಕ್ರವಾರ ರಾತ್ರಿ ನಡೆದ ಗಲಾಟೆಯಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ವ್ಯಾಪಾರಿಯೊಬ್ಬರು ಬಲಿಯಾಗಿದ್ದರು. ಈ ಸಾವು ರಾವಲಕೋಟ್ ಪ್ರದೇಶದಲ್ಲಿ ಕಿಚ್ಚು ಹೊತ್ತಿಸಿದ್ದು, ಘರ್ಷಣೆಗಳು ಮತ್ತಷ್ಟು ತೀವ್ರಗೊಳ್ಳಲು ಕಾರಣವಾಗಿದೆ.


Click the Play button to hear this message in audio format

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಆರ್ಥಿಕ ಮತ್ತು ರಾಜಕೀಯ ಹಕ್ಕುಗಳಿಗಾಗಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಭೀಕರ ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಸುಮಾರು 200ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ಆರ್ಥಿಕ ಮತ್ತು ರಾಜಕೀಯ ಕುಂದುಕೊರತೆಗಳ ವಿರುದ್ಧ ಪ್ರತಿಭಟನೆಗಳ ನೇತೃತ್ವ ವಹಿಸಿದ್ದ ಪ್ರಮುಖ ನಾಗರಿಕ ಸಮಾಜದ ಒಕ್ಕೂಟವಾದ 'ಜಂಟಿ ಅವಾಮಿ ಕ್ರಿಯಾ ಸಮಿತಿ' (JAAC) ಅನ್ನು ಅಧಿಕಾರಿಗಳು ನಿಷೇಧಿಸಿದ ಬೆನ್ನಲ್ಲೇ ಈ ರಕ್ತಪಾತ ಸಂಭವಿಸಿದೆ.

ನಿಷೇಧದ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

ಸಾರ್ವಜನಿಕ ಸುವ್ಯವಸ್ಥೆ ಮತ್ತು ಭದ್ರತೆಯ ನೆಪವೊಡ್ಡಿ ಅಧಿಕಾರಿಗಳು ಕಳೆದ ಶುಕ್ರವಾರ (ಜೂ. 5) ಜೆಎಎಸಿ ಸಂಘಟನೆಯನ್ನು ನಿಷೇಧಿಸಿದ್ದರು. ಈ ನಿಷೇಧದ ಬೆನ್ನಲ್ಲೇ ಭದ್ರತಾ ಪಡೆಗಳು ಮತ್ತು ಸಾರ್ವಜನಿಕರ ನಡುವೆ ಸಂಘರ್ಷ ಆರಂಭವಾಗಿತ್ತು. ಶುಕ್ರವಾರ ರಾತ್ರಿ ನಡೆದ ಗಲಾಟೆಯಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ವ್ಯಾಪಾರಿಯೊಬ್ಬರು ಬಲಿಯಾಗಿದ್ದರು. ಈ ಸಾವು ರಾವಲಕೋಟ್ ಪ್ರದೇಶದಲ್ಲಿ ಕಿಚ್ಚು ಹೊತ್ತಿಸಿದ್ದು, ಘರ್ಷಣೆಗಳು ಮತ್ತಷ್ಟು ತೀವ್ರಗೊಳ್ಳಲು ಕಾರಣವಾಗಿದೆ.

ಆಸ್ಪತ್ರೆ ಎದುರು ಜಮಾಯಿಸಿದ ಜನ

ಪೊಲೀಸರ ಗುಂಡಿನ ದಾಳಿಗೆ ಮತ್ತೊಬ್ಬ ಪ್ರತಿಭಟನಾಕಾರ ಬಲಿಯಾದ ಹಿನ್ನೆಲೆಯಲ್ಲಿ, ಭಾನುವಾರ (ಜೂ. 7) ಜೆಎಎಸಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಆಸ್ಪತ್ರೆಯ ಶವಾಗಾರದ ಹೊರಗೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿ ಆಕ್ರೋಶ ಹೊರಹಾಕಿದರು. ಈ ವೇಳೆ ಪರಿಸ್ಥಿತಿ ಕೈಮೀರಿ ಹೋಗಿದೆ. "ಕಾನೂನು ಜಾರಿ ಅಧಿಕಾರಿಗಳು ನಡೆಸಿದ ಪ್ರತಿದಾಳಿಯ ಪರಿಣಾಮವಾಗಿ ಆರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ" ಎಂದು ಪೂಂಚ್ ವಲಯದ ಆಯುಕ್ತರಾದ ಸರ್ದಾರ್ ವಹೀದ್ ಖಾನ್ ಅವರು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.

ಸ್ವಯಂಚಾಲಿತ ರೈಫಲ್, ಪೆಟ್ರೋಲ್ ಬಾಂಬ್ ದಾಳಿ

ಮತ್ತೊಂದೆಡೆ, ಪ್ರತಿಭಟನಾಕಾರರನ್ನು ಚದುರಿಸಲು ತಾವು ಪ್ರಯತ್ನಿಸಿದಾಗ ಭದ್ರತಾ ಪಡೆಗಳ ಮೇಲೆಯೇ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾ ನಿರತ ಗುಂಪಿನಲ್ಲಿದ್ದ ದುಷ್ಕರ್ಮಿಗಳು ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಸ್ವಯಂಚಾಲಿತ ರೈಫಲ್‌ಗಳು, ಪೆಟ್ರೋಲ್ ಬಾಂಬ್‌ಗಳು ಮತ್ತು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಸದ್ಯ ಇಡೀ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

Read More
Next Story