
ಸಿದ್ದರಾಮಯ್ಯ ಬೆನ್ನಿಗೆ ನಿಂತ ತಮಿಳುನಾಡು ಸಿಎಂ ಸ್ಟಾಲಿನ್, ಸಂವಿಧಾನ ತಿದ್ದುಪಡಿಗೆ ಆಗ್ರಹ
ಕರ್ನಾಟಕದಲ್ಲಿ 'ಎಂಜಿಎನ್ಆರ್ಇಜಿಎ' ಬದಲಿಗೆ ತಂದಿರುವ ಹೊಸ ಕೇಂದ್ರೀಯ ಯೋಜನೆಯನ್ನು ವಿರೋಧಿಸಿ ಸಿದ್ದರಾಮಯ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಓದದೇ ಇರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ನಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆತಂಕಕ್ಕೆ ಕಾರಣವಾಗಿರುವ ಬೆನ್ನಲ್ಲೇ, ನೆರೆಯ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಧಾವಿಸಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಮಿತಿಮೀರುತ್ತಿದೆ ಎಂದು ಕಿಡಿಕಾರಿರುವ ಸ್ಟಾಲಿನ್, ರಾಜ್ಯಪಾಲರ ಭಾಷಣದ ಪದ್ಧತಿಯನ್ನೇ ರದ್ದುಗೊಳಿಸಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ರಾಷ್ಟ್ರಮಟ್ಟದಲ್ಲಿ ಹೊಸದೊಂದು ಕ್ರಾಂತಿಕಾರಿ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.
ಕರ್ನಾಟಕದ ವಿಧಾನಸಭೆಯಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ ಸಂವಿಧಾನ ಉಲ್ಲಂಘನೆ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ದನಿಗೂಡಿಸಿರುವ ಸ್ಟಾಲಿನ್, ಇದು ಕೇವಲ ಕರ್ನಾಟಕದ ಸಮಸ್ಯೆಯಲ್ಲ, ಬದಲಿಗೆ ಒಕ್ಕೂಟ ವ್ಯವಸ್ಥೆಯ ಮೇಲಿನ ಸಂಘಟಿತ ದಾಳಿ ಎಂದು ಬಣ್ಣಿಸಿದ್ದಾರೆ.
ದಕ್ಷಿಣದ ರಾಜ್ಯಗಳ ಮೇಲೆ ಕೇಂದ್ರದ 'ಪರೋಕ್ಷ ಯುದ್ಧ'?
ತಮಿಳುನಾಡು, ಕೇರಳ ಮತ್ತು ಈಗ ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಉಲ್ಲೇಖಿಸಿರುವ ಸ್ಟಾಲಿನ್, "ಬಿಜೆಪಿಯೇತರ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರುಗಳು ಸಮಾನಾಂತರ ಸರ್ಕಾರ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಜನರಿಂದ ಚುನಾಯಿತವಾದ ಸರ್ಕಾರದ ನೀತಿಗಳನ್ನು ಸದನದಲ್ಲಿ ಓದಲು ನಿರಾಕರಿಸುವ ಮೂಲಕ ಅವರು ಸಂವಿಧಾನಕ್ಕೆ ಅಪಮಾನ ಮಾಡುತ್ತಿದ್ದಾರೆ," ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ 'ಎಂಜಿಎನ್ಆರ್ಇಜಿಎ' ಬದಲಿಗೆ ತಂದಿರುವ ಹೊಸ ಕೇಂದ್ರೀಯ ಯೋಜನೆಯನ್ನು ವಿರೋಧಿಸಿ ಸಿದ್ದರಾಮಯ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ರಾಜ್ಯಪಾಲರು ಓದದೇ ಇರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.
ಸಂವಿಧಾನ ತಿದ್ದುಪಡಿಗೆ ಪಟ್ಟು
ರಾಜ್ಯಪಾಲರ ಈ ನಡೆಯನ್ನು ಶಾಶ್ವತವಾಗಿ ತಡೆಯಲು ಸಂವಿಧಾನಕ್ಕೆ ತಿದ್ದುಪಡಿ ತರುವುದೇ ಏಕೈಕ ಮಾರ್ಗ ಎಂದು ಸ್ಟಾಲಿನ್ ಪ್ರತಿಪಾದಿಸಿದ್ದಾರೆ. "ವರ್ಷದ ಆರಂಭದಲ್ಲಿ ರಾಜ್ಯಪಾಲರು ಸದನ ಉದ್ದೇಶಿಸಿ ಮಾತನಾಡುವುದು ಬ್ರಿಟಿಷರ ಕಾಲದ ವಸಾಹತುಶಾಹಿ ಪದ್ಧತಿ (Colonial Relic). ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಇದು ಪ್ರಜಾಪ್ರಭುತ್ವಕ್ಕೆ ಅಡ್ಡಿಯಾಗುತ್ತಿದೆ. ಆದ್ದರಿಂದ, ರಾಜ್ಯಪಾಲರ ಭಾಷಣದ ಕಡ್ಡಾಯವನ್ನು ತೆಗೆದುಹಾಕಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕು," ಎಂದು ಅವರು ಆಗ್ರಹಿಸಿದ್ದಾರೆ.
ಈ ನಿಟ್ಟಿನಲ್ಲಿ ಸಮಾನನಸ್ಕ ಪಕ್ಷಗಳನ್ನು ಒಗ್ಗೂಡಿಸಿ ಸಂಸತ್ತಿನಲ್ಲಿ ಹೋರಾಟ ನಡೆಸುವುದಾಗಿ ಸ್ಟಾಲಿನ್ ಘೋಷಿಸಿದ್ದಾರೆ. "ರಾಜ್ಯಪಾಲರು ಅಂಚೆ ಪೇದೆಯಂತೆ ವರ್ತಿಸುವುದನ್ನು ಬಿಟ್ಟು ಸಂವಿಧಾನದ ಮುಖ್ಯಸ್ಥರಂತೆ ವರ್ತಿಸಬೇಕು. ಇಲ್ಲದಿದ್ದರೆ ಆ ಹುದ್ದೆಯ ಅಗತ್ಯವಾದರೂ ಏನಿದೆ?" ಎಂದು ಅವರು ಪ್ರಶ್ನಿಸಿದ್ದಾರೆ.
ಕರ್ನಾಟಕದ ಜತೆ ತಮಿಳುನಾಡಿನ ಒಗ್ಗಟ್ಟು
ತಮಿಳುನಾಡಿನಲ್ಲೂ ರಾಜ್ಯಪಾಲ ಆರ್.ಎನ್. ರವಿ ಅವರು ಸರ್ಕಾರದ ಭಾಷಣ ಓದದೆ ಸಭಾತ್ಯಾಗ ಮಾಡಿದ ಘಟನೆ ನಡೆದಿದ್ದು, ಇದೀಗ ಕರ್ನಾಟಕದಲ್ಲೂ ಅದೇ ಪುನರಾವರ್ತನೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಕಾನೂನು ಹೋರಾಟ ಮತ್ತು ರಾಜಕೀಯ ನಿಲುವಿಗೆ ಡಿಎಂಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.

