Protecting Farmers’ Interests and Pressuring the Centre Is Key Agenda, DK Shivakumar
x

ಡಿಸಿಎಂ ಡಿ.ಕೆ. ಶಿವಕುಮಾರ್‌

ರೈತರ ಹಿತರಕ್ಷಣೆ ಮತ್ತು ಕೇಂದ್ರದ ಮೇಲೆ ಒತ್ತಡ: ಬೆಳಗಾವಿ ಅಧಿವೇಶನದ ಪ್ರಮುಖ ಅಜೆಂಡಾ ಎಂದ ಡಿಸಿಎಂ

ರೈತರ ಸಮಸ್ಯೆಗಳಲ್ಲಿ ಕೇಂದ್ರ ಸರ್ಕಾರ ಏಕೆ ಭಾಗಿಯಾಗುತ್ತಿಲ್ಲ? ಪ್ರೋತ್ಸಾಹ ಧನ ಮತ್ತು ಬೆಂಬಲ ಬೆಲೆ ಹಣವನ್ನು ಏಕೆ ಬಿಡುಗಡೆ ಮಾಡುತ್ತಿಲ್ಲ? ಎಂದು ಡಿಸಿಎಂ ಇದೇ ವೇಳೆ ಪ್ರಶ್ನಿಸಿದರು.


Click the Play button to hear this message in audio format

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ರೈತರ ಜ್ವಲಂತ ಸಮಸ್ಯೆಗಳು ಮತ್ತು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಅನುದಾನ ಬಿಡುಗಡೆ ಕುರಿತು ಪ್ರಮುಖವಾಗಿ ಚರ್ಚಿಸಿ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಸೇರಿ ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸುವ ವಿಶ್ವಾಸ ವ್ಯಕ್ತಪಡಿಸಿದರು. ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಬಿಡುಗಡೆಗೆ ಒತ್ತಡ ಹೇರುವ ಬಗ್ಗೆಯೂ ಅಧಿವೇಶನದಲ್ಲಿ ಸಮಗ್ರ ಚರ್ಚೆ ನಡೆಯಲಿದೆ ಎಂದರು.

ಪ್ರೋತ್ಸಾಹ ಧನ ಯಾಕೆ ಕೊಡುತ್ತಿಲ್ಲ?

ಕೇಂದ್ರ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಪ್ರಶ್ನಿಸಿದ ಡಿಸಿಎಂ, "ರೈತರ ಸಮಸ್ಯೆಗಳಲ್ಲಿ ಕೇಂದ್ರ ಸರ್ಕಾರ ಏಕೆ ಭಾಗಿಯಾಗುತ್ತಿಲ್ಲ? ಪ್ರೋತ್ಸಾಹ ಧನ ಮತ್ತು ಬೆಂಬಲ ಬೆಲೆ ಹಣವನ್ನು ಏಕೆ ಬಿಡುಗಡೆ ಮಾಡುತ್ತಿಲ್ಲ?" ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಬೆಳೆಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿರುವುದನ್ನು ಮತ್ತು ಕಳೆದ ಹತ್ತು ವರ್ಷಗಳಿಂದ ಸಕ್ಕರೆ ಬೆಲೆ ಏರಿಕೆ ಮಾಡದಿರುವುದನ್ನು ಸದನದಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು. ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಪರವಾಗಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ದಿಟ್ಟ ನಿರ್ಧಾರಗಳನ್ನು ಸಮರ್ಥಿಸಿಕೊಂಡ ಅವರು, ಸಕ್ಕರೆ ಕಾರ್ಖಾನೆಗಳು ನಷ್ಟದ ಭೀತಿ ವ್ಯಕ್ತಪಡಿಸುತ್ತಿದ್ದರೂ, ರೈತರ ಹಿತದೃಷ್ಟಿಯಿಂದ ಸರ್ಕಾರ ಅವರ ಬೆನ್ನಿಗೆ ನಿಂತಿದೆ ಎಂದು ಪುನರುಚ್ಚರಿಸಿದರು.

ಇದೇ ವೇಳೆ, ಬಿಜೆಪಿ ನಾಯಕರು ರೈತರ ಪರವಾಗಿ ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ ಶಿವಕುಮಾರ್, "ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಇಂತಹ ರೈತಪರ ನಿರ್ಧಾರಗಳನ್ನು ತೆಗೆದುಕೊಂಡಿದ್ದರೇ?" ಎಂದು ಪ್ರಶ್ನಿಸಿದರು. ಬೆಳೆಗಳಿಗೆ ದರ ನಿಗದಿ ಮಾಡುವ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿದ್ದು, ರೈತರಿಗೆ ಅನ್ಯಾಯವಾಗುತ್ತಿದ್ದರೂ ಕೇಂದ್ರ ಮೌನವಾಗಿದೆ. ಆದ್ದರಿಂದ ಬಿಜೆಪಿ ನಾಯಕರು ಮಾತನಾಡಲು ವಿಷಯವಿಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಬದಲು, ರೈತರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

Read More
Next Story