
ಧರ್ಮೇಂದ್ರ ಪ್ರಧಾನ ರಾಜೀನಾಮೆ ಬಳಿಕ ದಿಪ್ಕೆ ಸಂದೇಶ
"ಇದು ಆರಂಭ ಮಾತ್ರ"- ಬೆಳ್ಳಂ ಬೆಳಗ್ಗೆ ಹೊಸ ವಿಡಿಯೋ ರಿಲೀಸ್ ಮಾಡಿದ ಅಭಿಜೀತ್ ದಿಪ್ಕೆ
ಧರ್ಮೇಂದ್ರ ಪ್ರಧಾನ ರಾಜೀನಾಮೆ ಹಾಗೂ ಬೇಡಿಕೆಗಳು ಈಡೇರಿದ ಬಳಿಕ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಹೋರಾಟದ ಅನುಭವ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದು, ಕೇಂದ್ರ ಸರ್ಕಾರ ಸಿಜೆಪಿಯ ಇತರ ಪ್ರಮುಖ ಬೇಡಿಕೆಗಳನ್ನೂ ಒಪ್ಪಿಕೊಂಡ ನಂತರ, 37 ದಿನಗಳ ಪ್ರತಿಭಟನೆಗೆ ಅಂತ್ಯ ಹಾಡಲಾಗಿದೆ. ಈ ಬೆಳವಣಿಗೆಯ ಬಳಿಕ ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಇದೀಗ ವಿಶ್ರಾಂತಿಯತ್ತ ಮುಖ ಮಾಡಿದ್ದಾರೆ.
ತಮ್ಮ ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೊ ಸಂದೇಶದಲ್ಲಿ ಮಾತನಾಡಿದ 30 ವರ್ಷದ ಅಭಿಜೀತ್ ದಿಪ್ಕೆ, ಕಳೆದ 37 ದಿನಗಳು ತಮ್ಮ ಜೀವನದ ಅತ್ಯಂತ ಕಠಿಣ ದಿನಗಳಾಗಿದ್ದವು ಎಂದು ಹೇಳಿದ್ದಾರೆ. "ಈಗ ಯಾವುದೇ ಆತಂಕವಿಲ್ಲ. ಬೆಳಿಗ್ಗೆ ಎದ್ದು ದಿನವಿಡೀ ಏನು ಮಾಡಬೇಕು ಎಂಬ ಒತ್ತಡವೂ ಇಲ್ಲ. ನನ್ನ ಮನೆಯಲ್ಲಿ ನೆಮ್ಮದಿಯಾಗಿ ನಿದ್ರೆ ಮಾಡಬಹುದು" ಎಂದು ಅವರು ಹೇಳಿದ್ದಾರೆ.
ಇದು ಆರಂಭ ಮಾತ್ರ
ಪ್ರತಿಭಟನೆ ಮುಗಿದಿದ್ದರೂ ಸಿಜೆಪಿಯ ಪಯಣ ಈಗಷ್ಟೇ ಆರಂಭವಾಗಿದೆ ಎಂದು ಅಭಿಜೀತ್ ದಿಪ್ಕೆ ಹೇಳಿದ್ದಾರೆ. "ಇದು ಕೇವಲ ಆರಂಭ ಮಾತ್ರ. ಕಾಕ್ರೋಚ್ ಜನತಾ ಪಾರ್ಟಿಗೆ ಇನ್ನೂ ಬಹಳ ದೂರ ಸಾಗಬೇಕಿದೆ," ಎಂದು ತಮ್ಮ ಬೆಂಬಲಿಗರಿಗೆ ಸಂದೇಶ ನೀಡಿದ್ದಾರೆ.
ಮುಖ್ಯ ನ್ಯಾಯಮೂರ್ತಿಯೊಬ್ಬರ ಹೇಳಿಕೆಗೆ ವ್ಯಂಗ್ಯವಾಗಿ ಮೇ ತಿಂಗಳಲ್ಲಿ ಅಭಿಜೀತ್ ದಿಪ್ಕೆ ಸಿಜೆಪಿಯನ್ನು ಆರಂಭಿಸಿದ್ದರು. ಆದರೆ ನಂತರ ಅದು ರಾಷ್ಟ್ರವ್ಯಾಪಿ ವಿದ್ಯಾರ್ಥಿ ಚಳವಳಿಯಾಗಿ ಬೆಳೆಯಿತು. ಸಾವಿರಾರು ಯುವಕರು 'ಕಾಕ್ರೋಚ್' ಎಂದು ತಮ್ಮನ್ನು ಕರೆದುಕೊಂಡು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಹೊಣೆಗಾರರನ್ನಾಗಿ ಮಾಡಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಬೆಂಬಲಿಗರಿಗೆ ಧನ್ಯವಾದ, ಟೀಕಾಕಾರರಿಗೂ ಕೃತಜ್ಞತೆ
ಪ್ರತಿಭಟನೆ ಅಂತ್ಯಗೊಂಡ ಬಳಿಕ ಬೆಂಬಲಿಗರಿಗೆ ಧನ್ಯವಾದ ಸಲ್ಲಿಸಿದ ದಿಪ್ಕೆ, ಅನಾರೋಗ್ಯದ ಕಾರಣದಿಂದ ಜಂತರ್ ಮಂತರ್ನಲ್ಲಿ ಎಲ್ಲರನ್ನೂ ವೈಯಕ್ತಿಕವಾಗಿ ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಟೈಫಾಯ್ಡ್ನಿಂದ ಬಳಲುತ್ತಿದ್ದ ಕಾರಣ ಜ್ವರದ ನಡುವೆಯೂ ಹೋರಾಟ ಮುಂದುವರಿಸಿದ್ದಾಗಿ ತಿಳಿಸಿದ್ದಾರೆ.
"37 ದಿನಗಳ ಕಾಲ ಜಂತರ್ ಮಂತರ್ನಲ್ಲಿ ನಮ್ಮೊಂದಿಗೆ ನಿಂತ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳು. ನೀವು ದೇಶಕ್ಕಾಗಿ ಮಾಡಿದ ತ್ಯಾಗವನ್ನು ನಾನು ಎಂದಿಗೂ ಮರೆಯುವುದಿಲ್ಲ," ಎಂದು ಅವರು ಹೇಳಿದ್ದಾರೆ. ಟೀಕಿಸಿದವರಿಗೂ ಧನ್ಯವಾದ ಹೇಳಿದ ದಿಪ್ಕೆ, ಅವರ ಪ್ರಶ್ನೆಗಳು ಮತ್ತು ಟೀಕೆಗಳು ತಮ್ಮನ್ನು ಮತ್ತಷ್ಟು ಉತ್ತಮವಾಗಿ ಕೆಲಸ ಮಾಡಲು ಪ್ರೇರೇಪಿಸಿದವು" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
Live Updates
- 26 July 2026 3:56 PM IST
ಕೋಲ್ಕತ್ತಾ ನೀಟ್ ಪ್ರತಿಭಟನೆ ಹಿಂಸಾಚಾರಕ್ಕೆ ಇಸ್ಲಾಮಿಕ್ ಮೂಲಭೂತವಾದಿಗಳ ಕೈವಾಡ: ಸುವೇಂದು ಅಧಿಕಾರಿ ಆರೋಪ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು, ಕೋಲ್ಕತ್ತಾದಲ್ಲಿ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದ ಹಿಂದೆ ಇಸ್ಲಾಮಿಕ್ ಮೂಲಭೂತವಾದಿಗಳು ಹಾಗೂ ವಿದೇಶಿ ಶಕ್ತಿಗಳ ಬೆಂಬಲ ಇರಬಹುದೆಂದು ಆರೋಪಿಸಿದ್ದಾರೆ.
ಜುಲೈ 24ರಂದು ನಡೆದ ಪ್ರತಿಭಟನೆಯಲ್ಲಿ ಎಡಪಂಥೀಯ ಸಂಘಟನೆಗಳ ಬೆಂಬಲಿತ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿ, ಕಣ್ಣೀರಿನ ಅನಿಲ ಸಿಡಿಸಿದ್ದರು.
ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ರಾಜ್ಯ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಗೂಂಡಾ ನಿಗ್ರಹ ಕಾಯ್ದೆಯಡಿ ಕ್ರಮ ಕೈಗೊಂಡಿದೆ. ತಪ್ಪಿತಸ್ಥರಿಗೆ "ಅವರ ಮುಂದಿನ ಮೂರು ತಲೆಮಾರುಗಳು ನೆನಪಿಡುವಂತಹ ಶಿಕ್ಷೆ" ವಿಧಿಸಲಾಗುವುದು ಎಂದು ಸುವೇಂದು ಅಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ವಿಧಾನಸಭೆಯಲ್ಲೂ ಮಾತನಾಡಿದ್ದ ಅವರು, ಪ್ರತಿಭಟನೆಯಲ್ಲಿ ಗುರುತಿಸಲಾದ ಸುಮಾರು 70 ಮಂದಿ ವಿದ್ಯಾರ್ಥಿಗಳಲ್ಲ ಮತ್ತು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಹೋರಾಟದೊಂದಿಗೆ ಅವರಿಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದರು. ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಮ್ಮ ಆರೋಪವನ್ನು ಮತ್ತೊಮ್ಮೆ ಪುನರುಚ್ಚರಿಸಿದರು.
- 26 July 2026 3:49 PM IST
ಧರ್ಮೇಂದ್ರ ಪ್ರಧಾನ ವಿರುದ್ಧ ಅವಹೇಳನಕಾರಿ ರೀಲ್; ಸೋಷಿಯಲ್ ಮೀಡಿಯಾ ಇನ್ಫ್ಲುವೆನ್ಸರ್ ವಿರುದ್ಧ ಎಫ್ಐಆರ್
ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಸೋಷಿಯಲ್ ಮೀಡಿಯಾ ಇನ್ಫ್ಲುವೆನ್ಸರ್ ವಿರುದ್ಧ ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಅವಹೇಳನಕಾರಿ ಪದಗಳಿಂದ ನಿಂದಿಸಿ ಇನ್ಸ್ಟಾಗ್ರಾಂನಲ್ಲಿ ರೀಲ್ ಪೋಸ್ಟ್ ಮಾಡಿದ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸ್ಥಳೀಯ ಬಿಜೆಪಿ ಮುಖಂಡ ಕಮಲೇಶ್ ಚೌರಾಸಿಯಾ ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 296(ಎ) (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಕೃತ್ಯ) ಹಾಗೂ ಸೆಕ್ಷನ್ 352 (ಶಾಂತಿ ಭಂಗಕ್ಕೆ ಪ್ರಚೋದಿಸುವ ಉದ್ದೇಶದ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ನಿವಾರಿ ಉಪವಿಭಾಗೀಯ ಪೊಲೀಸ್ ಅಧಿಕಾರಿ ಕೆ.ಕೆ. ಪಾಂಡೆ, ಇನ್ಫ್ಲುವೆನ್ಸರ್ ಯಶ್ಪಾಲ್ ಸೋನಿ ಅವರು ಧರ್ಮೇಂದ್ರ ಪ್ರಧಾನ ಹಾಗೂ ದೆಹಲಿ ಪೊಲೀಸರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಇನ್ಸ್ಟಾಗ್ರಾಂನಲ್ಲಿ ವಿಡಿಯೊ ಪ್ರಕಟಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪ ಹಾಗೂ ಪ್ರತಿಭಟನಾಕಾರರ ವಿರುದ್ಧ ದೆಹಲಿ ಪೊಲೀಸರು ಕೈಗೊಂಡ ಕ್ರಮದ ಹಿನ್ನೆಲೆಯಲ್ಲಿ ಕಳೆದ ಕೆಲವು ವಾರಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ಟೀಕಿಸುವ ಮೀಮ್ಸ್, ಪೋಸ್ಟ್ಗಳು ಮತ್ತು ವಿಡಿಯೊಗಳು ವ್ಯಾಪಕವಾಗಿ ಹರಿದಾಡುತ್ತಿವೆ.
- 26 July 2026 3:16 PM IST
ಪ್ರಧಾನ್ ರಾಜೀನಾಮೆ ರಾಹುಲ್ ಗಾಂಧಿ, ಯುವಕರ ಹೋರಾಟದ ಗೆಲುವು: ಕಾಂಗ್ರೆಸ್ ಸಂಸದ ಸುಖದೇವ್ ಭಗತ್
ಕೇಂದ್ರದ ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರತಿಭಟನೆಯಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಭಾಗಿಯಾಗಿದ್ದ ದೇಶದ ಯುವಕರ ಗೆಲುವು ಎಂದು ಕಾಂಗ್ರೆಸ್ ಸಂಸದ ಸುಖದೇವ್ ಭಗತ್ ಹೇಳಿದ್ದಾರೆ.
ಸುದ್ದಿಸಂಸ್ಥೆ ಎಎನ್ಐಗೆ ಪ್ರತಿಕ್ರಿಯಿಸಿದ ಅವರು, "ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಅಹಂಕಾರಿ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ರಾಹುಲ್ ಗಾಂಧಿ ಅವರು ಈ ಸಂಬಂಧ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಇದು ಕೇವಲ ಮೊದಲ ಮೈಲಿಗಲ್ಲು ಮಾತ್ರ. ಸಾರ್ವಜನಿಕರ ಭಾರೀ ಒತ್ತಡದಿಂದಲೇ ಪ್ರಧಾನ ರಾಜೀನಾಮೆ ನೀಡಿದ್ದಾರೆ. ಆದರೆ ಸರ್ಕಾರದ ಉದ್ದೇಶದಲ್ಲಿ ಇನ್ನೂ ನೈಜ ಪ್ರಾಮಾಣಿಕತೆ ಕಾಣುತ್ತಿಲ್ಲ," ಎಂದು ಹೇಳಿದ್ದಾರೆ.
ಇದೇ ವೇಳೆ, "ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಜವಾಬ್ದಾರಿಯನ್ನು ನಿಗದಿಪಡಿಸಿ ವ್ಯವಸ್ಥೆಯನ್ನು ಸುಧಾರಿಸಬೇಕು ಎಂದು ರಾಹುಲ್ ಗಾಂಧಿ ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಸಚಿವ ಸಂಪುಟವು ಸಾಮೂಹಿಕ ಜವಾಬ್ದಾರಿಯ ತತ್ವದ ಮೇಲೆ ಕಾರ್ಯನಿರ್ವಹಿಸುವುದರಿಂದ ಒಬ್ಬ ವ್ಯಕ್ತಿಯನ್ನು ಬದಲಿಸುವುದು ಮಾತ್ರ ಸಾಕಾಗುವುದಿಲ್ಲ. ಇಡೀ ವ್ಯವಸ್ಥೆಯಲ್ಲೇ ಬದಲಾವಣೆ ಆಗಬೇಕು," ಎಂದು ಜಾರ್ಖಂಡ್ನ ಕಾಂಗ್ರೆಸ್ ಸಂಸದ ಸುಖದೇವ್ ಭಗತ್ ಅಭಿಪ್ರಾಯಪಟ್ಟಿದ್ದಾರೆ.
- 26 July 2026 3:08 PM IST
ವಿದ್ಯಾರ್ಥಿಗಳು ಪ್ರಜಾಪ್ರಭುತ್ವವನ್ನು ಮರಳಿ ಪಡೆದಿದ್ದಾರೆ; ಹಿಂದೂ-ಮುಸ್ಲಿಂ ದ್ವೇಷಕ್ಕೆ ತೆರೆ ಎಳೆದಿದ್ದಾರೆ: ಪರ್ರಾ
ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆಯ ಫಲಿತಾಂಶವನ್ನು ಜಮ್ಮು-ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಶಾಸಕ ವಹೀದ್-ಉರ್-ರೆಹ್ಮಾನ್ ಪರ್ರಾ ಸ್ವಾಗತಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವು ಮತ್ತು ದೇಶದ ಯುವಜನತೆಯ ವಿಜಯ ಎಂದು ಅವರು ಬಣ್ಣಿಸಿದ್ದಾರೆ. "ಇಲ್ಲಿನ ಯುವಕರು ತಮ್ಮ ಪ್ರಜಾಪ್ರಭುತ್ವವನ್ನು ಮರಳಿ ಪಡೆದಿರುವುದಷ್ಟೇ ಅಲ್ಲ, ಒಂದು ರೀತಿಯಲ್ಲಿ ಹಿಂದೂ-ಮುಸ್ಲಿಂ ದ್ವೇಷಕ್ಕೂ ತೆರೆ ಎಳೆದಿದ್ದಾರೆ. ಪರಸ್ಪರ ಗೌರವದಿಂದ ಒಗ್ಗಟ್ಟಾಗಿ ನಿಂತು ತಮ್ಮ ಭವಿಷ್ಯ, ಪರೀಕ್ಷೆಗಳು, ಉದ್ಯೋಗಗಳು ಮತ್ತು ಶಿಕ್ಷಣಕ್ಕಾಗಿ ಧ್ವನಿ ಎತ್ತಿದ್ದಾರೆ," ಎಂದು ಪರ್ರಾ ಹೇಳಿದ್ದಾರೆ.
ವಿದ್ಯಾರ್ಥಿಗಳ ಹೋರಾಟವು ದೇಶದ ಯುವಜನರ ಐಕ್ಯತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತೊಮ್ಮೆ ಎತ್ತಿ ಹಿಡಿದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
- 26 July 2026 12:12 PM IST
ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮಕ್ಕೆ ಮೋದಿ ಕ್ಷಮೆ ಕೇಳಬೇಕು; ಸಂಸತ್ನಲ್ಲಿ ವಿಚಾರ ಪ್ರಸ್ತಾಪ: ಕೆ.ಸಿ. ವೇಣುಗೋಪಾಲ್
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಕೈಗೊಂಡ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆಗ್ರಹಿಸಿದ್ದಾರೆ. ಈ ವಿಚಾರವನ್ನು ಜುಲೈ 27ರಂದು ಸಂಸತ್ನಲ್ಲಿ ಪ್ರಸ್ತಾಪಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ಕೇರಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ ಅಧಿವೇಶನದ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಬೆಳಿಗ್ಗೆ ಪ್ರತಿಪಕ್ಷಗಳ ಸಭೆಯನ್ನು ಕರೆದಿದ್ದಾರೆ ಎಂದು ಹೇಳಿದರು.
ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಭದ್ರಗೊಳಿಸುವ ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಸ್ತಾವಿತ ಮಸೂದೆಯನ್ನು ಸುತ್ತೋಲೆ ರೂಪದಲ್ಲಿ ಕಳುಹಿಸಿದೆ. ಈ ಮಸೂದೆಯ ಕುರಿತು ಪ್ರತಿಪಕ್ಷಗಳ ಸಭೆಯಲ್ಲಿ ಚರ್ಚಿಸಿ, ಸಂಸತ್ನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರವನ್ನು ಒಮ್ಮತದಿಂದ ನಿರ್ಧರಿಸಲಾಗುವುದು ಎಂದು ವೇಣುಗೋಪಾಲ್ ತಿಳಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಕೈಗೊಂಡ ಕ್ರಮದ ಬಗ್ಗೆ ಇನ್ನೂ ಹಲವು ಪ್ರಶ್ನೆಗಳು ಉತ್ತರಿಸದೇ ಉಳಿದಿವೆ ಎಂದು ಅವರು ಆರೋಪಿಸಿದರು. "ವಿದ್ಯಾರ್ಥಿಗಳ ವಿರುದ್ಧ ಸಿಆರ್ಪಿಎಫ್ ಸೇರಿದಂತೆ ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಯಿತು. ಪೆಲೆಟ್ ಬಾಲ್ಗಳನ್ನು ಏಕೆ ಬಳಸಲಾಯಿತು? ಯಾವ ರೀತಿಯ ಶಸ್ತ್ರಾಸ್ತ್ರಗಳನ್ನು ಬಳಸಲು ಅನುಮತಿ ನೀಡಲಾಗಿತ್ತು? ಯಾರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಯಿತು? ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಿತ್ತೇ?" ಎಂದು ಅವರು ಪ್ರಶ್ನಿಸಿದರು.
ಈ ಎಲ್ಲ ಪ್ರಶ್ನೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ನಲ್ಲಿ ಉತ್ತರ ನೀಡುವ ಜವಾಬ್ದಾರಿ ಹೊಂದಿದ್ದಾರೆ ಎಂದು ಕೆ.ಸಿ. ವೇಣುಗೋಪಾಲ್ ಒತ್ತಾಯಿಸಿದರು.
- 26 July 2026 12:04 PM IST
ಉದ್ಧವ್-ರಾಜ್ ಠಾಕ್ರೆ ಜಂಟಿ ಸಮಾವೇಶಕ್ಕೆ ಮುನ್ನ ಮುಂಬೈನಲ್ಲಿ ಬಿಗಿ ಭದ್ರತೆ
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಭಾನುವಾರ ನಡೆಸಲಿರುವ ಜಂಟಿ ಸಾರ್ವಜನಿಕ ಸಮಾವೇಶದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆಯಿರುವುದರಿಂದ ನಗರದ ಪ್ರಮುಖ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾವನ್ನು ಮತ್ತಷ್ಟು ಬಲಪಡಿಸಲಾಗಿದೆ.
ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ನಗರದ ಹಲವು ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆಗಳನ್ನು ಜಾರಿಗೆ ತರಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿರುವ ಈ ಜಂಟಿ ಸಮಾವೇಶಕ್ಕೆ ರಾಜಕೀಯ ವಲಯದಲ್ಲಿ ಸಾಕಷ್ಟು ಮಹತ್ವ ಸಿಕ್ಕಿದ್ದು, ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
- 26 July 2026 12:01 PM IST
ಪ್ರಜಾಪ್ರಭುತ್ವ ಮತ್ತು ಸಂವಾದವೇ ಪರಿಹಾರದ ದಾರಿ: ವಿದ್ಯಾರ್ಥಿ ಹೋರಾಟದ ಬಳಿಕ ಅಣ್ಣಾ ಹಜಾರೆ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೊಂದಿಗೆ ವಿದ್ಯಾರ್ಥಿಗಳ ಹೋರಾಟ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಸಮಸ್ಯೆಗಳಿಗೆ ಶಾಂತಿಯುತ ಪ್ರತಿಭಟನೆ, ಪ್ರಜಾಪ್ರಭುತ್ವ ಮತ್ತು ಸಂವಾದವೇ ಶಾಶ್ವತ ಪರಿಹಾರದ ಮಾರ್ಗ ಎಂದು ಅವರು ಹೇಳಿದ್ದಾರೆ.
ಶನಿವಾರ ಅಹಿಲ್ಯಾನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾ ಹಜಾರೆ, "ಇದು ಪ್ರಜಾಪ್ರಭುತ್ವದ ದೇಶ. ಆದೇಶ ಅಥವಾ ಬಲವಂತದ ಆಡಳಿತದಿಂದ ಸಮಸ್ಯೆಗಳು ಬಗೆಹರಿಯುವುದಿಲ್ಲ. ಯಾವಾಗಲೂ ಪ್ರಜಾಪ್ರಭುತ್ವದ ಮಾರ್ಗವನ್ನೇ ಅನುಸರಿಸಬೇಕು" ಎಂದು ತಿಳಿಸಿದರು.
ತಮ್ಮ ಹೋರಾಟಗಳ ಅನುಭವವನ್ನು ಉಲ್ಲೇಖಿಸಿದ ಅವರು, ಯಾವುದೇ ಸಮಸ್ಯೆಗೆ ಸಂವಾದವೇ ಸೂಕ್ತ ಪರಿಹಾರ ತರುತ್ತದೆ ಎಂದು ಹೇಳಿದರು. "ಸಂವಾದದಿಂದಲೇ ಪರಿಹಾರ ಸಿಗುತ್ತದೆ. ಉದ್ವಿಗ್ನತೆ ಸೃಷ್ಟಿಸುವುದು ಅಥವಾ ತಪ್ಪು ದಾರಿ ಹಿಡಿಯುವುದರಿಂದ ಸಮಸ್ಯೆಗಳು ಬಗೆಹರಿಯುವುದಿಲ್ಲ" ಎಂದು ಅಣ್ಣಾ ಹಜಾರೆ ಅಭಿಪ್ರಾಯಪಟ್ಟರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ನಂತರ ವಿದ್ಯಾರ್ಥಿಗಳ ಪ್ರತಿಭಟನೆ ಅಂತ್ಯಗೊಂಡಿರುವ ಸಂದರ್ಭದಲ್ಲಿ ಅಣ್ಣಾ ಹಜಾರೆ ನೀಡಿರುವ ಈ ಹೇಳಿಕೆ ಗಮನ ಸೆಳೆದಿದೆ.
- 26 July 2026 11:01 AM IST
ವಿದ್ಯಾರ್ಥಿಗಳು ಯಾವುದೇ ಹುದ್ದೆಗಿಂತ ಮುಖ್ಯ; ಧರ್ಮೇಂದ್ರ ಪ್ರಧಾನ ರಾಜೀನಾಮೆ ಬಳಿಕ ಅಮಿತ್ ಶಾ ಹೇಳಿಕೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ದೇಶ, ಯುವಜನತೆ ಮತ್ತು ವಿದ್ಯಾರ್ಥಿಗಳು ಯಾವುದೇ ಹುದ್ದೆಗಿಂತಲೂ ಭಾರತೀಯ ಜನತಾ ಪಕ್ಷಕ್ಕೆ ಹೆಚ್ಚು ಮಹತ್ವದವರು ಎಂದು ಅವರು ಹೇಳಿದ್ದಾರೆ.
ಶನಿವಾರ ರಾತ್ರಿ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, "ಮೋದಿ ಸರ್ಕಾರ ದೇಶದ ಯುವಕರ ಭಾವನೆಗಳನ್ನು ಗೌರವಿಸುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ" ಎಂದು ತಿಳಿಸಿದ್ದಾರೆ.
"ಬಿಜೆಪಿಗೆ ರಾಷ್ಟ್ರ, ಯುವಜನತೆ ಮತ್ತು ವಿದ್ಯಾರ್ಥಿಗಳು ಯಾವುದೇ ಹುದ್ದೆಗಿಂತಲೂ ಮುಖ್ಯ. ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಇದೇ ತತ್ವವನ್ನು ಪ್ರತಿಬಿಂಬಿಸುತ್ತದೆ" ಎಂದು ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಉದ್ದೇಶದಿಂದ ಕೈಗೊಂಡಿರುವ ಕ್ರಮಗಳು ಶ್ಲಾಘನೀಯವಾಗಿವೆ ಎಂದು ಅಮಿತ್ ಶಾ ಹೇಳಿದ್ದಾರೆ.
"ಈ ಕ್ರಮಗಳಿಂದ ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳಿಗೆ ಸಂಪೂರ್ಣ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ನನಗಿದೆ" ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ.
- 26 July 2026 10:57 AM IST
ಯುವಕರ ಹೋರಾಟ ಪ್ರಜಾಪ್ರಭುತ್ವಕ್ಕೆ ಆಮ್ಲಜನಕ; ಸರ್ಕಾರ-ವಿಪಕ್ಷ ಎರಡೂ ವಿಫಲ: ಉದ್ಧವ್ ಠಾಕ್ರೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಪದಚ್ಯುತಿಗೊಳಿಸುವಂತೆ ಯುವಕರು ನಡೆಸಿದ ಪ್ರತಿಭಟನೆಯನ್ನು "ಪ್ರಜಾಪ್ರಭುತ್ವಕ್ಕೆ ಆಮ್ಲಜನಕ" ಎಂದು ಬಣ್ಣಿಸಿದ್ದಾರೆ. ಅಲ್ಲದೆ, ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಹೋರಾಟವು ಆಡಳಿತ ಪಕ್ಷದಷ್ಟೇ ಅಲ್ಲ, ಪ್ರತಿಪಕ್ಷದ ವೈಫಲ್ಯವನ್ನೂ ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಪಕ್ಷದ ಮುಖಪತ್ರ ಸಾಮ್ನಾ ಕಾರ್ಯನಿರ್ವಾಹಕ ಸಂಪಾದಕರೂ ಆಗಿರುವ ಸಂಸದ ಸಂಜಯ್ ರಾವತ್ ಅವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಜೈಲು ಅಥವಾ ಗುಂಡಿನ ಭಯವಿಲ್ಲದೆ ಯುವಕರು ಬೀದಿಗಿಳಿದಿರುವುದು ಶ್ಲಾಘನೀಯ ಬೆಳವಣಿಗೆ ಎಂದು ಹೇಳಿದ್ದಾರೆ. "ಈ ಪ್ರತಿಭಟನೆಗಳು ಸಾಯುವ ಹಂತದಲ್ಲಿದ್ದ ಪ್ರಜಾಪ್ರಭುತ್ವಕ್ಕೆ ಆಮ್ಲಜನಕ ನೀಡಿವೆ. ಇದು ಆಡಳಿತ ಪಕ್ಷಕ್ಕೆ ಅಪಾಯಕಾರಿ ಬೆಳವಣಿಗೆಯಾಗಿದೆ" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸಿಜೆಪಿ ಪ್ರತಿಭಟನೆ ಆಡಳಿತ ಪಕ್ಷದಷ್ಟೇ ಅಲ್ಲ, ಪ್ರತಿಪಕ್ಷದ ವೈಫಲ್ಯವನ್ನೂ ಬಯಲು ಮಾಡಿದೆ ಎಂದು ಅವರು ಹೇಳಿದ್ದಾರೆ. "ದೇಶದ ಜನರು ರಾಜಕಾರಣಿಗಳ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಇದನ್ನು ನಾನು ಈ ಹಿಂದೆಯೇ ಹೇಳಿದ್ದೆ" ಎಂದು ಉದ್ಧವ್ ಠಾಕ್ರೆ ತಿಳಿಸಿದ್ದಾರೆ.
ಯುವಕರ ಈ ಆಕ್ರೋಶವು ಕೇವಲ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರಕ್ಕೆ ಸೀಮಿತವಾಗಿಲ್ಲ. ಕಳೆದ 12 ವರ್ಷಗಳಿಂದ ಜನರಲ್ಲಿ ಮೂಡಿರುವ ಅಸಮಾಧಾನ ಮತ್ತು ವಂಚನೆಯ ಭಾವನೆಯ ಸ್ಫೋಟ ಇದಾಗಿದೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉದ್ಧವ್ ಠಾಕ್ರೆ, "ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ದೇಶವನ್ನು ಸಂಪೂರ್ಣವಾಗಿ ಹಾಳು ಮಾಡಿದೆ" ಎಂದು ಆರೋಪಿಸಿದ್ದಾರೆ.
ಅಲ್ಲದೆ, ಈ ಪ್ರತಿಭಟನೆಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಭಾಗವಹಿಸದಿರುವುದನ್ನೂ ಅವರು ಪ್ರಶ್ನಿಸಿದ್ದಾರೆ.




