ಭಾರತಕ್ಕೆ ಮರಳಿದ ಕಾಕ್ರೋಚ್‌ ಜನತಾ ಪಾರ್ಟಿ ಮುಖ್ಯಸ್ಥ ಅಭಿಜಿತ್ ದಿಪ್ಕೆ
x

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಅಮೆರಿಕದಿಂದ ಭಾರತಕ್ಕೆ ವಾಪಸ್ ಪ್ರಯಾಣ ಬೆಳೆಸಿದ್ದಾರೆ.

ಭಾರತಕ್ಕೆ ಮರಳಿದ ಕಾಕ್ರೋಚ್‌ ಜನತಾ ಪಾರ್ಟಿ ಮುಖ್ಯಸ್ಥ ಅಭಿಜಿತ್ ದಿಪ್ಕೆ

ಅಮೆರಿಕದಿಂದ ಭಾರತಕ್ಕೆ ವಾಪಸ್ ಹೊರಟಿರುವ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ, ನನ್ನ ಭವಿಷ್ಯ ದೇಶದ ಸಂವಿಧಾನದ ಕೈಯಲ್ಲಿದೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.


Click the Play button to hear this message in audio format

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಅವರು ಅಮೆರಿಕದಿಂದ ಭಾರತಕ್ಕೆ ವಾಪಸ್ ಪ್ರಯಾಣ ಬೆಳೆಸಿದ್ದಾರೆ. ಭಾರತಕ್ಕೆ ಹೊರಡುವ ಮುನ್ನ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, "ನಾನು ಭಾರತಕ್ಕೆ ಮರಳುತ್ತಿದ್ದು, ನನ್ನ ಭವಿಷ್ಯವನ್ನು ದೇಶದ ಸಂವಿಧಾನದ ಕೈಗೆ ಒಪ್ಪಿಸುತ್ತಿದ್ದೇನೆ" ಎಂದು ಬರೆದುಕೊಂಡಿದ್ದಾರೆ.

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಸಿಜೆಪಿ ನಿರ್ಧರಿಸಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಅಭಿಜಿತ್‌ ದಿಪ್ಕೆ ಅವರು ಶನಿವಾರ ದೆಹಲಿಗೆ ತಲುಪಲಿದ್ದಾರೆ. ಜಂತರ್ ಮಂತರ್‌ನಲ್ಲಿ ಧರಣಿ ನಡೆಸಲು ಈಗಾಗಲೇ ಅನುಮತಿ ಕೋರಲಾಗಿದ್ದು, ಈ ಪ್ರತಿಭಟನೆಯಲ್ಲಿ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಕೂಡ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಮ್ಮನ್ನು ಬಂಧಿಸುವ ಸಾಧ್ಯತೆಗಳ ಬಗ್ಗೆ ಮಾತನಾಡಿರುವ ದಿಪ್ಕೆ, ತಾವು ಶಾಶ್ವತವಾಗಿ ಭಾರತಕ್ಕೆ ಮರಳುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಅಧಿಕಾರಿಗಳು ತಮ್ಮನ್ನು ಬಂಧಿಸಲು ಬಯಸಿದರೆ ಅದಕ್ಕೆ ತಾವು ಸಿದ್ಧರಾಗಿರುವುದಾಗಿ ಅವರು ಹೇಳಿದ್ದಾರೆ. ಭಾರತದ ಸಂವಿಧಾನ ತಮಗೆ ನೀಡಿರುವ ಮೂಲಭೂತ ಹಕ್ಕನ್ನು ಚಲಾಯಿಸಲು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಧ್ವನಿಯನ್ನು ಎತ್ತಿಹಿಡಿಯಲು ತಾವು ದೇಶಕ್ಕೆ ಮರಳುತ್ತಿರುವುದಾಗಿ ತಿಳಿಸಿರುವ ಅವರು, ಈ ಚಳವಳಿಯನ್ನು ಶಾಂತಿ ಮತ್ತು ಪ್ರೀತಿಯಿಂದ ಮುನ್ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ಅಭಿಜೀತ್, ತಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಮ್ಮನ್ನು ಸ್ವಾಗತಿಸಲು ಯಾರೂ ಬರಬಾರದು ಎಂದು ಅವರು ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ. ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಮಗೆ ಭಾರಿ ಜನಪ್ರಿಯತೆ ಸಿಕ್ಕ ನಂತರ ವಿದೇಶಗಳಿಂದ ಹಲವು ಉದ್ಯೋಗಾವಕಾಶಗಳು ಬಂದಿದ್ದರೂ, ದೇಶದ ಈ ಹೋರಾಟವನ್ನು ಅರ್ಧಕ್ಕೆ ಕೈಬಿಡಲು ಸಾಧ್ಯವಿಲ್ಲದ ಕಾರಣ ತಾವು ಭಾರತಕ್ಕೆ ಮರಳುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

Read More
Next Story