
ಸಂಸತ್ ಚಲೋ ಹಿಂಸಾಚಾರ: NIA ತನಿಖೆಗೆ ಕೋರಿ ಸಲ್ಲಿಕೆಯಾದ ಅರ್ಜಿ ವಜಾ
ಪ್ರತಿಭಟನೆ ವೇಳೆ ನಡೆದ ದೌರ್ಜನ್ಯ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಘಟನೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಈಗಾಗಲೇ ತರಲಾಗಿದೆ. ಕಾನೂನಿನ ಪ್ರಕಾರವೇ ಅವರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕೋರ್ಟ್ ಹೇಳಿದೆ.
NEET-UG ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಜುಲೈ 20ರಂದು ನಡೆದ 'ಸಂಸತ್ ಚಲೋ' ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರದ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಥವಾ ಯಾವುದೇ ವಿಶೇಷ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಪ್ರತಿಭಟನೆ ವೇಳೆ ನಡೆದ ದೌರ್ಜನ್ಯ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಘಟನೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಈಗಾಗಲೇ ತರಲಾಗಿದೆ. ಕಾನೂನಿನ ಪ್ರಕಾರವೇ ಅವರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪೀಠ ಸ್ಪಷ್ಟಪಡಿಸಿತು.
ಯಾವುದೇ ಪ್ರಕರಣವನ್ನು ತನಿಖೆಗಾಗಿ ಎನ್ಐಎಗೆ (NIA) ವಹಿಸುವುದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ವಿಚಾರವೇ ಹೊರತು ನ್ಯಾಯಾಲಯದ್ದು ಅಲ್ಲ ಎಂದು ಹೈಕೋರ್ಟ್ ಪೀಠ ಹೇಳಿತು. ನ್ಯಾಯಾಲಯದ ಈ ಕಠಿಣ ನಿಲುವನ್ನು ಗಮನಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿದಾರರ ಪರ ವಕೀಲರಿಗೆ ಅರ್ಜಿಯನ್ನು ಹಿಂಪಡೆಯುವಂತೆ ಸಲಹೆ ನೀಡಿದರು. ಅದರಂತೆ ಅರ್ಜಿದಾರರು ಕೋರಿಕೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶಿಸಿತು.
ಅರ್ಜಿದಾರರ ಆರೋಪವೇನಿತ್ತು?
ಅಖಿಲ ಭಾರತ ಹಿಂದೂ ಮಹಾಸಭಾದ ಮಾಜಿ ಉಪಾಧ್ಯಕ್ಷ ಸತೀಶ್ ಕುಮಾರ್ ಅಗರ್ವಾಲ್ ಈ ಪಿಐಎಲ್ ಸಲ್ಲಿಸಿದ್ದರು. ಜುಲೈ 20ರಂದು ನಡೆದ ಪ್ರತಿಭಟನೆಯಲ್ಲಿ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿದೇಶಿ ಅನುದಾನ ಪಡೆಯುವ ಸಂಸ್ಥೆಗಳು ಭಾಗಿಯಾಗಿದ್ದು, ದೇಶದ ಭದ್ರತೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಬಾಹ್ಯ ಶಕ್ತಿಗಳ ಕೈವಾಡವಿದೆಯೇ ಎಂಬುದರ ಕುರಿತು ಎಫ್ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಮನವಿ ಮಾಡಿದ್ದರು.
ಜುಲೈ 20ರಂದು ಜಂತರ್ ಮಂತರ್ನಲ್ಲಿ ಏನಾಗಿತ್ತು?
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ (CJP) ಜೂನ್ 20ರಿಂದ ಪ್ರತಿಭಟನೆ ನಡೆಸುತ್ತಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಜುಲೈ 20ರಂದು ಸಾವಿರಾರು ಪ್ರತಿಭಟನಾಕಾರರು ಜಂತರ್ ಮಂತರ್ನಲ್ಲಿ ನೆರೆದು ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದರು. ಈ ವೇಳೆ ತಡೆಯಲು ಯತ್ನಿಸಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಾಗ, ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿದ್ದರು. ಈ ಭೀಕರ ಸಂಘರ್ಷದಲ್ಲಿ ಹಲವು ಪೊಲೀಸರು ಹಾಗೂ ಪ್ರತಿಭಟನಾಕಾರರು ಗಾಯಗೊಂಡಿದ್ದರು.

