NEET PROTEST LIVE| ಪ್ರಧಾನಿ ಪೋಸ್ಟ್‌ಗೆ My Name Is Nothing ಎಂದ ಸಿಜೆಪಿ
x

NEET PROTEST LIVE| ಪ್ರಧಾನಿ ಪೋಸ್ಟ್‌ಗೆ 'My Name Is Nothing' ಎಂದ ಸಿಜೆಪಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದೆ. ಜಂತರ್ ಮಂತರ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿರುವ ಆರೋಪದ ನಡುವೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿದಿದೆ.


Click the Play button to hear this message in audio format

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆ ಗುರುವಾರ (ಜುಲೈ 23) 34ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಬುಧವಾರ ರಾತ್ರಿ ಜಂತರ್ ಮಂತರ್ ಸುತ್ತಮುತ್ತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಜೆಪಿ ಆರೋಪಿಸಿದ್ದು, ಸರ್ಕಾರ ಮತ್ತೊಮ್ಮೆ ಪ್ರತಿಭಟನಾಕಾರರ ಮೇಲೆ ಪೊಲೀಸ್ ದಮನಕ್ಕೆ ಸಿದ್ಧತೆ ನಡೆಸುತ್ತಿದೆಯೇ ಎಂದು ಪ್ರಶ್ನಿಸಿದೆ.

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಜಂತರ್ ಮಂತರ್‌ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಸರ್ಕಾರ ಮತ್ತೊಮ್ಮೆ ಕ್ರೂರ ದಮನಕ್ಕೆ ಮುಂದಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ ಪ್ರತಿಭಟನಾ ಸ್ಥಳದಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಹಾಗೂ ಅರೆಸೈನಿಕ ಪಡೆಗಳಿಗೆ ಮನವಿ ಮಾಡಿದ ಅವರು, ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಅಕ್ರಮ ಆದೇಶಗಳನ್ನು ಪಾಲಿಸಬೇಡಿ. ಜನರ ಪರ ನಿಲ್ಲುತ್ತೀರಾ ಅಥವಾ ಸರ್ವಾಧಿಕಾರಿ ಧೋರಣೆಯ ಪರ ನಿಲ್ಲುತ್ತೀರಾ ಎಂಬುದು ನಿಮ್ಮ ಪರೀಕ್ಷೆಯಾಗಿದೆ ಎಂದು ಹೇಳಿದ್ದಾರೆ.

ಸಿಜೆಪಿ ವಕ್ತಾರ ಸೌರವ್ ದಾಸ್ ಕೂಡ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಶಾಂತಿಯುತ ಪ್ರತಿಭಟನಾಕಾರರ ಮೇಲೆ ದಮನ ನಡೆಸುವ ಅಪಾಯವನ್ನು ಸರ್ಕಾರ ಕೈಗೊಳ್ಳಬಾರದು. ಪ್ರತಿಭಟನೆಯನ್ನು ನಿರ್ಲಕ್ಷಿಸುವುದರಿಂದ ಸರ್ಕಾರವೇ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Live Updates

  • ಮೊಟ್ಟೆ ಎಸೆತ ಪ್ರಕರಣ: ಪೊಲೀಸ್‌ ಆಯುಕ್ತರಿಗೆ ಬಿಜೆಪಿ ದೂರು
    22 July 2026 6:02 PM IST

    ಮೊಟ್ಟೆ ಎಸೆತ ಪ್ರಕರಣ: ಪೊಲೀಸ್‌ ಆಯುಕ್ತರಿಗೆ ಬಿಜೆಪಿ ದೂರು

    ನೀಟ್ ಪರೀಕ್ಷಾ ಅಕ್ರಮ ಮತ್ತು ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಬೆಂಗಳೂರಿನ ಬೀದಿಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿವೆ. ಕೆಪಿಸಿಸಿ ರಾಜ್ಯ ಕಚೇರಿ ಬಳಿ ನಡೆದ ಪ್ರತಿಭಟನೆಯ ವೇಳೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಘಟನೆ ನಡೆದಿದೆ.

    ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಮುಖಂಡರು, ಕೂಡಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಅಧಿಕೃತ ದೂರು ನೀಡಿದ್ದಾರೆ. ದೂರಿನಲ್ಲಿ, ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಮೊಟ್ಟೆ ಎಸೆದು ಹಲ್ಲೆ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವದಲ್ಲಿ ಸಂಸದೀಯ ಮೌಲ್ಯಗಳಿಗೆ ವಿರುದ್ಧವಾದ ಕೃತ್ಯ ಎಂದು ಬಿಜೆಪಿ ನಾಯಕರು ಉಲ್ಲೇಖಿಸಿದ್ದಾರೆ. ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಆಯುಕ್ತರಲ್ಲಿ ಒತ್ತಾಯಿಸಲಾಗಿದೆ.

    ನೀಟ್ ಪರೀಕ್ಷಾ ಅವ್ಯವಹಾರಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಕಡೆಗಳಲ್ಲಿ ಪ್ರತಿಭಟನಾ ಮೆರವಣಿಗೆಗಳನ್ನು ಹಮ್ಮಿಕೊಂಡಿದ್ದರು. ಅದೇ ಸಮಯದಲ್ಲಿ, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನಗಳೂ ನಡೆದವು. ಈ ಉದ್ವಿಗ್ನ ಪರಿಸ್ಥಿತಿಯ ನಡುವೆ ಸ್ಥಳದಲ್ಲಿ ಹಾಜರಿದ್ದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರನ್ನು ಗುರಿಯಾಗಿಸಿಕೊಂಡು ಪ್ರತಿಭಟನಾಕಾರರು ಮೊಟ್ಟೆಗಳನ್ನು ಎಸೆದಿದ್ದಾರೆ. ಈ ಘಟನೆಯು ಸ್ಥಳದಲ್ಲಿ ಕೆಲಕಾಲ ಗೊಂದಲ ಮತ್ತು ಆಕ್ರೋಶದ ವಾತಾವರಣ ಸೃಷ್ಟಿಸಿತ್ತು.

  • 22 July 2026 5:55 PM IST

    10 ವರ್ಷದಲ್ಲಿ ದೇಶಾದ್ಯಂತ ಸುಮಾರು 152 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು

    ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿದರು.

    ಕಳೆದ ಒಂದು ದಶಕದಲ್ಲಿ ದೇಶಾದ್ಯಂತ ಸುಮಾರು 152 ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಈ ಅಕ್ರಮಗಳು ಸುಮಾರು 7.5 ಕೋಟಿ ವಿದ್ಯಾರ್ಥಿಗಳ ಮತ್ತು ಅವರ ಕುಟುಂಬಗಳ ಭವಿಷ್ಯದ ಮೇಲೆ ನೇರ ಪರಿಣಾಮ ಬೀರಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರವು ಈ ಹಗರಣಗಳಲ್ಲಿ ಭಾಗಿಯಾದವರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಅಥವಾ ಯಾರನ್ನೂ ಹೊಣೆಗಾರರನ್ನಾಗಿ ಮಾಡಿಲ್ಲ. ನೀಟ್ ಪರೀಕ್ಷಾ ಆಕಾಂಕ್ಷಿಗಳು ಮತ್ತು ಅವರ ಕುಟುಂಬಗಳು ಪ್ರತಿ ವರ್ಷ ಶಿಕ್ಷಣಕ್ಕಾಗಿ ಸುಮಾರು 1.32 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದ್ದಾರೆ. ಇದು ಕೇಂದ್ರ ಸರ್ಕಾರದ ಒಟ್ಟು ಶಿಕ್ಷಣ ಬಜೆಟ್ (1.4 ಲಕ್ಷ ಕೋಟಿ ರೂ.) ಗೆ ಬಹುತೇಕ ಸಮಾನವಾಗಿದೆ. ವಿದ್ಯಾರ್ಥಿಗಳ ಮೇಲೆ ಈ ಅಕ್ರಮಗಳು ತೀವ್ರ ಆರ್ಥಿಕ ಮತ್ತು ಮಾನಸಿಕ ಒತ್ತಡವನ್ನು ಹೇರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

  • ಇಂದು ವಾಂಗ್‌ಚುಕ್ ಭೇಟಿಯಾಗಲಿರುವ ಸಮಾಜವಾದಿ ಪಕ್ಷದ ನಿಯೋಗ
    22 July 2026 3:43 PM IST

    ಇಂದು ವಾಂಗ್‌ಚುಕ್ ಭೇಟಿಯಾಗಲಿರುವ ಸಮಾಜವಾದಿ ಪಕ್ಷದ ನಿಯೋಗ

    ಸಮಾಜವಾದಿ ಪಕ್ಷದ ನಿಯೋಗವು ಇಂದು ಸಂಜೆ ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್‌ಚುಕ್ ಅವರನ್ನು ಮೇದಾಂತಾ ಆಸ್ಪತ್ರೆಯಲ್ಲಿ ಭೇಟಿ ಮಾಡಲಿದೆ. ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್‌ಚುಕ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಎಸ್‌ಪಿ ನಾಯಕರು, ಅವರು ಉಪವಾಸವನ್ನು ಅಂತ್ಯಗೊಳಿಸುವಂತೆ ಮನವಿ ಮಾಡುವ ಸಾಧ್ಯತೆಯಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯ ನಡುವೆ ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಭೇಟಿ ಮಹತ್ವ ಪಡೆದಿದೆ.

  • ಮಹಿಳಾ ಸಂಸದರ ವಿರುದ್ಧ ಅನುಚಿತ ವರ್ತನೆ ಆರೋಪ; ಕಲ್ಯಾಣ್ ಬ್ಯಾನರ್ಜಿ ಅಮಾನತು
    22 July 2026 3:30 PM IST

    ಮಹಿಳಾ ಸಂಸದರ ವಿರುದ್ಧ ಅನುಚಿತ ವರ್ತನೆ ಆರೋಪ; ಕಲ್ಯಾಣ್ ಬ್ಯಾನರ್ಜಿ ಅಮಾನತು

    ತೃಣಮೂಲ ಕಾಂಗ್ರೆಸ್‌ನ ಕಲ್ಯಾಣ್‌ ಬ್ಯಾನರ್ಜಿ ಅವರನ್ನು ಲೋಕಸಭೆಯಿಂದ ಮಳೆಗಾಲ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ. ಬುಧವಾರ ಈ ಕ್ರಮ ಕೈಗೊಳ್ಳಲಾಗಿದ್ದು, ಟಿಎಂಸಿಯ ಬಂಡಾಯ ಸಂಸದೆಯರಾದ ಕಾಕೋಲಿ ಘೋಷ್ ದಸ್ತಿದಾರ್, ಮಿತಾಲಿ ಬಾಗ್ ಮತ್ತು ಶತಾಬ್ದಿ ರಾಯ್‌ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಕ್ರಮ ಜರುಗಿಸಲಾಗಿದೆ.

    ಮಹಿಳಾ ಸಂಸದರ ವಿರುದ್ಧ ಅನುಚಿತ ವರ್ತನೆ ನಡೆಸಿದ್ದು ಹಾಗೂ ಅಸಭ್ಯ ಭಾಷೆ ಬಳಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಲ್ಯಾಣ್ ಬ್ಯಾನರ್ಜಿ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿನ ಪರಿಶೀಲನೆಯ ಬಳಿಕ ಲೋಕಸಭೆ ಅವರನ್ನು ಮಳೆಗಾಲ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದೆ.

  • ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿ; ಸೋನಮ್‌ ವಾಂಗ್‌ಚುಕ್‌ಗೆ ಅಭಿಜಿತ್ ದೀಪ್ಕೆ ಮನವಿ
    22 July 2026 3:24 PM IST

    "ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿ; ಸೋನಮ್‌ ವಾಂಗ್‌ಚುಕ್‌ಗೆ ಅಭಿಜಿತ್ ದೀಪ್ಕೆ ಮನವಿ

    ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಮನವಿ ಮಾಡಿದ್ದಾರೆ.

    ತಮ್ಮ ಎಕ್ಸ್ (X) ಖಾತೆಯಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ದೀಪ್ಕೆ, ವಾಂಗ್‌ಚುಕ್ ಕಳೆದ 25 ದಿನಗಳಿಂದ ಉಪವಾಸ ನಡೆಸುತ್ತಿದ್ದು, ಅವರ ಜೀವಕ್ಕೆ ಯಾವುದೇ ಅಪಾಯ ಉಂಟಾಗುವುದನ್ನು ಸಿಜೆಪಿ ಬಯಸುವುದಿಲ್ಲ ಎಂದು ಹೇಳಿದ್ದಾರೆ.

    "ಸೋನಮ್‌ ವಾಂಗ್‌ಚುಕ್ ಅವರು ತಮ್ಮ ಉಪವಾಸವನ್ನು ಅಂತ್ಯಗೊಳಿಸಬೇಕು ಎಂದು ನಾವು ಮನವಿ ಮಾಡುತ್ತೇವೆ. ದೇಶಕ್ಕೆ ಅವರ ಅಗತ್ಯವಿದೆ. ಅವರ ಜೀವ ಅಮೂಲ್ಯ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆ ನಮ್ಮ ಬೇಡಿಕೆಗಳು ಈಡೇರುವವರೆಗೆ ಮುಂದುವರಿಯಲಿದೆ" ಎಂದು ದೀಪ್ಕೆ ಹೇಳಿದ್ದಾರೆ.

    ವಾಂಗ್‌ಚುಕ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಪ್ರತಿಭಟನೆ ನಿರಂತರವಾಗಿರಲಿದ್ದು, ಆದರೆ ಅವರ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

  • ಕೇರಳದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
    22 July 2026 3:18 PM IST

    ಕೇರಳದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

    ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಕಚೇರಿವರೆಗೆ ಮೆರವಣಿಗೆ ನಡೆಸಿದರು.

    ಮಂಗಳವಾರ ಪ್ರಧಾನಿ ನಿವಾಸದ ಎದುರು ಕಾಂಗ್ರೆಸ್ ನಡೆಸಿದ ಧರಣಿ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಪ್ರಯತ್ನಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

    ಈ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಪ್ರಧಾನಿ ನಿವಾಸದ ಮುಂದೆ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ನಡೆ ಖಂಡನೀಯವಾಗಿದ್ದು, ಪ್ರಜಾಪ್ರಭುತ್ವದ ಹೆಸರಿನಲ್ಲಿ ಹಿಂಸೆಗೆ ಉತ್ತೇಜನ ನೀಡಬಾರದು ಎಂದು ಬಿಜೆಪಿ ನಾಯಕರು ಆಗ್ರಹಿಸಿದರು.

  • 22 July 2026 3:02 PM IST

    ವಿದ್ಯಾರ್ಥಿಗಳನ್ನು ರಾಜಕೀಯದ ಸಾಧನವಾಗಿಸಬೇಡಿ: ಪ್ರತಿಪಕ್ಷದ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

    ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಪ್ರತಿಪಕ್ಷಗಳ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ಪರಿಹಾರ ಹುಡುಕುವ ಬದಲು ಬೀದಿಗಳಲ್ಲಿ ಸಮಸ್ಯೆಗೆ ಉತ್ತರ ಹುಡುಕುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.

    ವಿದ್ಯಾರ್ಥಿಗಳು ಮತ್ತು ಯುವಜನರನ್ನು ಕೆಲವರು ತಮ್ಮ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಆದರೆ ದೇಶದ ಯುವಕರು ಇಂತಹ ಪ್ರಯತ್ನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದು, ಅಭಿವೃದ್ಧಿ ಹಾಗೂ ರಾಷ್ಟ್ರ ನಿರ್ಮಾಣದ ಮಾರ್ಗವನ್ನೇ ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

    ಪ್ರತಿಪಕ್ಷಗಳ ನಡೆಯನ್ನು ಪರೋಕ್ಷವಾಗಿ ಟೀಕಿಸಿದ ರಾಜನಾಥ್ ಸಿಂಗ್, ವಿದ್ಯಾರ್ಥಿಗಳನ್ನು ರಾಜಕೀಯದ ಸಾಧನವಾಗಿಸುವ ಬದಲು ಅವರ ಭವಿಷ್ಯ ಮತ್ತು ದೇಶದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

  • 22 July 2026 2:48 PM IST

    ರಸ್ತೆ ಮಧ್ಯೆ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಆಘಾತಕಾರಿ; ಕೇಂದ್ರದ ವಿರುದ್ಧ ಶಶಿ ತರೂರ್ ಕಿಡಿ

    ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ ಅವರು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್‌ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನಾಕಾರ ವಿದ್ಯಾರ್ಥಿಗಳನ್ನು ರಸ್ತೆ ಮಧ್ಯೆಯೇ ಥಳಿಸಿರುವುದು ಆಘಾತಕಾರಿ ಎಂದು ಅವರು ಹೇಳಿದ್ದಾರೆ.

    ಮಂಗಳವಾರ ರಾತ್ರಿ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡಿ, 'ಸಂಸತ್ ಚಲೋ' ಮೆರವಣಿಗೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ತರೂರ್, ಅವರ ನೋವಿನ ಅನುಭವಗಳನ್ನು ಕೇಳಿ ತೀವ್ರ ಬೇಸರವಾಗಿದೆ ಎಂದು ಹೇಳಿದರು.

    ಪ್ರತಿಭಟನಾ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸುವ ಸಲುವಾಗಿ ಕಪ್ಪು ಬಣ್ಣದ ಉಡುಪು ಧರಿಸಿ ಸಂಸತ್ತಿಗೆ ಆಗಮಿಸಿದ ತರೂರ್, ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ದುಃಖ ವ್ಯಕ್ತಪಡಿಸಿದರು.

    ಈ ವಿಚಾರವನ್ನು ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸಂಸತ್ತಿನಲ್ಲಿ ವಿಷಯ ಪ್ರಸ್ತಾಪಿಸಲು ಅವಕಾಶ ಸಿಗದಾಗ ರಾಜಕೀಯ ಸಹಜವಾಗಿಯೇ ಪ್ರವೇಶಿಸುತ್ತದೆ ಎಂದರು.

    "ವಿದ್ಯಾರ್ಥಿಗಳೇ ದೇಶದ ಭವಿಷ್ಯ. ಅವರು ತಮ್ಮನ್ನು ವಂಚಿಸಲಾಗಿದೆ ಎಂದು ಭಾವಿಸುತ್ತಿದ್ದರೆ, ಸರ್ಕಾರ ಅವರೊಂದಿಗೆ ಸಂವಾದ ನಡೆಸಬೇಕಿತ್ತು. ಆದರೆ ಸರ್ಕಾರ ಹಿಂಸಾಚಾರ ಮತ್ತು ಲಾಠಿ ಪ್ರಹಾರದಿಂದ ಪ್ರತಿಕ್ರಿಯಿಸಿರುವುದು ಅತ್ಯಂತ ತಪ್ಪು. ವಿದ್ಯಾರ್ಥಿಗಳನ್ನು ರಸ್ತೆ ಮಧ್ಯೆ ಥಳಿಸಿರುವುದು ನಿಜಕ್ಕೂ ಆಘಾತಕಾರಿ" ಎಂದು ತರೂರ್ ಹೇಳಿದ್ದಾರೆ.

  • 22 July 2026 2:03 PM IST

    ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ, ಬಿಹಾರದಲ್ಲಿ ಲಾಠಿಚಾರ್ಜ್

    ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ನಡೆಸಿದ ಪ್ರತಿಭಟನೆಯ ವೇಳೆ ಬಿಹಾರದ ಪಟ್ನಾದಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

    ಸಿಪಿಐ ಲಿಬರೇಷನ್ ಅಂಗಸಂಸ್ಥೆ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (AISA) ನೇತೃತ್ವದಲ್ಲಿ 'ಲೋಕ್ ಭವನ ಮಾರ್ಚ್' ಹಮ್ಮಿಕೊಳ್ಳಲಾಗಿತ್ತು. ಗಾಂಧಿ ಮೈದಾನದಿಂದ ರಾಜ್ಯಪಾಲರ ನಿವಾಸದತ್ತ ಮೆರವಣಿಗೆ ಸಾಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್‌ಗೆ ಮೊರೆ ಹೋದರು. ಪ್ರತಿಭಟನೆಯ ನೇತೃತ್ವವನ್ನು ಸಿಪಿಐ ಲಿಬರೇಷನ್ ಶಾಸಕ ಹಾಗೂ ಎಐಎಸ್ಎ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಸೌರವ್ ವಹಿಸಿದ್ದರು.

    ಈ ವೇಳೆ ಮಾತನಾಡಿದ ಸಂದೀಪ್ ಸೌರವ್, "ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಮನಿಸಿದ ಕ್ರಮವನ್ನು ನಾವು ಖಂಡಿಸುತ್ತೇವೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಮಾತ್ರವಲ್ಲ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ರಾಜೀನಾಮೆ ನೀಡಬೇಕು. ದೆಹಲಿ ಪೊಲೀಸರು ಅವರ ನಿರ್ದೇಶನದಂತೆ ಕಾರ್ಯನಿರ್ವಹಿಸಿದ್ದಾರೆ" ಎಂದು ಆರೋಪಿಸಿದರು.

  • 22 July 2026 1:24 PM IST

    ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ; 'ಬಾಲಿಶ ರಾಜಕೀಯ' ಎಂದು ಟೀಕೆ

    ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಸಂವಿಧಾನಾತ್ಮಕ ಹುದ್ದೆಯಾದ ವಿಪಕ್ಷ ನಾಯಕನಿಗೆ ಇರುವ ವಿಶೇಷಾಧಿಕಾರಗಳನ್ನು ರಾಹುಲ್ ಗಾಂಧಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ನಾಯಕರು, ಪ್ರಧಾನಿ ನಿವಾಸದ ಎದುರು ನಡೆದ ಪ್ರತಿಭಟನೆ "ಬಾಲಿಶ ಮತ್ತು ದಿಕ್ಕುತೋಚದ ರಾಜಕೀಯ"ದ ಉದಾಹರಣೆಯಾಗಿದ್ದು, ದೇಶವನ್ನು ವಿಭಜಿಸುವ ರಾಜಕೀಯದ ಮೂಲಕ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.

    ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು, ಗಾಂಧಿ ಕುಟುಂಬವು ದೇಶವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದರು. ಜೊತೆಗೆ, ರಾಹುಲ್ ಗಾಂಧಿಯವರ ವಿದೇಶ ಪ್ರವಾಸಗಳ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Read More
Next Story