ಕೇರಳ ಸಿಎಂ ಆಯ್ಕೆ ಕಗ್ಗಂಟು: ಸತೀಶನ್, ವೇಣುಗೋಪಾಲ್ ಅಥವಾ ಚೆನ್ನಿತ್ತಲ? ಹೈಕಮಾಂಡ್ ಅಂಗಳಕ್ಕೆ ಚೆಂಡು
x

ಸತೀಶನ್, ವೇಣುಗೋಪಾಲ್ ಹಾಗೂ ಚೆನ್ನಿತ್ತಲ ನಡುವೆ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್ ಅಂತಿಮ ನಿರ್ಧಾರದ ಮೇಲೆ ಕುತೂಹಲ ಮೂಡಿದೆ.

ಕೇರಳ ಸಿಎಂ ಆಯ್ಕೆ ಕಗ್ಗಂಟು: ಸತೀಶನ್, ವೇಣುಗೋಪಾಲ್ ಅಥವಾ ಚೆನ್ನಿತ್ತಲ? ಹೈಕಮಾಂಡ್ ಅಂಗಳಕ್ಕೆ ಚೆಂಡು

ಕೇರಳ ಚುನಾವಣೆಯ ಬಳಿಕ ಸಿಎಂ ಆಯ್ಕೆ ಕಸರತ್ತು ತೀವ್ರಗೊಂಡಿದೆ. ಸತೀಶನ್, ವೇಣುಗೋಪಾಲ್ ಹಾಗೂ ಚೆನ್ನಿತ್ತಲ ನಡುವೆ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್ ಅಂತಿಮ ನಿರ್ಧಾರದ ಮೇಲೆ ಕುತೂಹಲ ಮೂಡಿದೆ.


Click the Play button to hear this message in audio format

ಕೇರಳ ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಪಾಳೆಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯ ಮಟ್ಟದಲ್ಲಿ ನಾಯಕತ್ವದ ಬಗ್ಗೆ ಒಮ್ಮತ ಮೂಡದ ಕಾರಣ, ಅಂತಿಮ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ವಹಿಸಲಾಗಿದೆ.

ವಿ.ಡಿ. ಸತೀಶನ್, ಕೆ.ಸಿ. ವೇಣುಗೋಪಾಲ್ ಹಾಗೂ ರಮೇಶ್ ಚೆನ್ನಿತ್ತಲ ಅವರಂತಹ ಘಟಾನುಘಟಿ ನಾಯಕರ ಹೆಸರುಗಳು ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿದ್ದು, ದೆಹಲಿ ನಾಯಕರ ಅಂತಿಮ ತೀರ್ಮಾನ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಹೈಕಮಾಂಡ್ ಅಂಗಳಕ್ಕೆ

ಕೇರಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ಪಕ್ಷಕ್ಕೆ, ತನ್ನ ನೂತನ ನಾಯಕನ ಆಯ್ಕೆಯೇ ಈಗ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕರ ನಡುವೆ ಸಹಮತ ಮೂಡದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಪರಮಾಧಿಕಾರವನ್ನು ಪಕ್ಷದ ರಾಷ್ಟ್ರೀಯ ವರಿಷ್ಠರಿಗೆ ಬಿಟ್ಟುಕೊಡುವ ನಿರ್ಣಯವನ್ನು ಅಂಗೀಕರಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಉನ್ನತ ಮಟ್ಟದ ನಾಯಕರು ಶೀಘ್ರದಲ್ಲೇ ಸಮಾಲೋಚನೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ.

ಮೂವರು ನಾಯಕರ ನಡುವೆ ತೀವ್ರ ಪೈಪೋಟಿ

ಮುಖ್ಯಮಂತ್ರಿ ರೇಸ್‌ನಲ್ಲಿ ಪ್ರಮುಖವಾಗಿ ಮೂವರು ನಾಯಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹಾಲಿ ವಿರೋಧ ಪಕ್ಷದ ನಾಯಕರಾಗಿ ಎಲ್‌ಡಿಎಫ್ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರಬಲ ಹೋರಾಟ ಸಂಘಟಿಸಿದ್ದ ವಿ.ಡಿ. ಸತೀಶನ್ ಅವರು ಸಹಜವಾಗಿಯೇ ಸಿಎಂ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ಇವರ ಜೊತೆಗೆ, ಗಾಂಧಿ ಕುಟುಂಬದ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಾಗೂ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿರುವ ಕೆ.ಸಿ. ವೇಣುಗೋಪಾಲ್ ಅವರ ಹೆಸರೂ ಬಲವಾಗಿ ಕೇಳಿಬರುತ್ತಿದೆ. ಮತ್ತೊಂದೆಡೆ, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ ಅವರು ಕೂಡ ತಮ್ಮ ಸುದೀರ್ಘ ರಾಜಕೀಯ ಅನುಭವ ಮತ್ತು ತಳಮಟ್ಟದ ಹಿಡಿತದ ಆಧಾರದ ಮೇಲೆ ಮುಖ್ಯಮಂತ್ರಿ ಗಾದಿಯ ಮೇಲೆ ಕಣ್ಣಿಟ್ಟಿದ್ದಾರೆ.

ದೆಹಲಿ ವರಿಷ್ಠರ ಜಾಗರೂಕ ಹೆಜ್ಜೆ

ಮೂವರೂ ನಾಯಕರು ರಾಜ್ಯ ಕಾಂಗ್ರೆಸ್‌ನಲ್ಲಿ ತಮ್ಮದೇ ಆದ ಪ್ರಬಲ ಬಣ ಹಾಗೂ ಅಪಾರ ಬೆಂಬಲಿಗರನ್ನು ಹೊಂದಿರುವುದರಿಂದ, ಹೈಕಮಾಂಡ್ ಪಾಲಿಗೆ ಈ ಆಯ್ಕೆ ಸುಲಭವಿಲ್ಲ. ಜಾತಿ ಸಮೀಕರಣ, ಶಾಸಕರ ಒಲವು ಹಾಗೂ ಮುಂಬರುವ ದಿನಗಳಲ್ಲಿ ಪಕ್ಷದ ಆಂತರಿಕ ಭದ್ರತೆಯ ಹಿತದೃಷ್ಟಿಯಿಂದ ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ದೆಹಲಿ ನಾಯಕರ ಮೇಲಿದೆ. ನಾಯಕತ್ವದ ವಿಚಾರದಲ್ಲಿ ಯಾವುದೇ ಭಿನ್ನಮತ ಸ್ಫೋಟಗೊಳ್ಳದಂತೆ ಎಚ್ಚರವಹಿಸಿರುವ ವರಿಷ್ಠರು, ರಾಜ್ಯಕ್ಕೆ ವೀಕ್ಷಕರನ್ನು ಕಳುಹಿಸಿ ಪ್ರತಿಯೊಬ್ಬ ಶಾಸಕರ ವೈಯಕ್ತಿಕ ಅಭಿಪ್ರಾಯವನ್ನು ಗೌಪ್ಯವಾಗಿ ಸಂಗ್ರಹಿಸಿದ ಬಳಿಕವೇ ನೂತನ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸುವ ಕಾರ್ಯತಂತ್ರ ರೂಪಿಸಿದ್ದಾರೆ.

Read More
Next Story