ಪೇಪರ್ ಲೀಕ್ ತಡೆ ಮಸೂದೆ- ಸಂಸತ್‌ನಲ್ಲಿ ಮುಂದುವರಿದ ಚರ್ಚೆ; ಸರ್ಕಾರದಿಂದ ಸಮರ್ಥನೆ
x

ಸಾರ್ವಜನಿಕ ಪರೀಕ್ಷೆಗಳು ತಿದ್ದುಪಡಿ ಮಸೂದೆ-2026 ಕುರಿತ ಚರ್ಚೆ ಇಂದು ಕೂಡ ಲೋಕಸಭೆಯಲ್ಲಿ ಮುಂದುವರಿಯಲಿದೆ.

ಪೇಪರ್ ಲೀಕ್ ತಡೆ ಮಸೂದೆ- ಸಂಸತ್‌ನಲ್ಲಿ ಮುಂದುವರಿದ ಚರ್ಚೆ; ಸರ್ಕಾರದಿಂದ ಸಮರ್ಥನೆ

ಲೋಕಸಭೆಯಲ್ಲಿ ಪೇಪರ್ ಲೀಕ್ ತಡೆ ತಿದ್ದುಪಡಿ ಮಸೂದೆ ಕುರಿತ ಚರ್ಚೆ ಇಂದು ಮುಂದುವರಿಯಲಿದೆ. ಕಾನೂನು ಕಠಿಣಗೊಳಿಸುವುದಾಗಿ ಸರ್ಕಾರ ಹೇಳಿದ್ದು, ಪ್ರತಿಪಕ್ಷ ಸಮಾಲೋಚನೆಗೆ ಒತ್ತಾಯಿಸಿದೆ.


Click the Play button to hear this message in audio format

ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ಮಂಡಿಸಿರುವ ಸಾರ್ವಜನಿಕ ಪರೀಕ್ಷೆಗಳು ತಿದ್ದುಪಡಿ ಮಸೂದೆ–2026 ಕುರಿತ ಚರ್ಚೆ ಇಂದು ಕೂಡ ಲೋಕಸಭೆಯಲ್ಲಿ ಮುಂದುವರಿಯಲಿದೆ. ಮಂಗಳವಾರ ಮಸೂದೆ ಕುರಿತು ಮಾತನಾಡಿದ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ವಿದ್ಯಾರ್ಥಿಗಳು ಮತ್ತು ಯುವಜನರ ಹಿತಾಸಕ್ತಿಯನ್ನು ಕಾಪಾಡುವ ಸರ್ಕಾರದ ಬದ್ಧತೆಯ ಪುನರುಚ್ಚಾರಣೆಯೇ ಈ ಮಸೂದೆ ಎಂದು ಹೇಳಿದರು. ಪರೀಕ್ಷಾ ಅಕ್ರಮಗಳನ್ನು ತಡೆಯಲು 2024ರಲ್ಲಿ ಕೇಂದ್ರ ಸರ್ಕಾರ ಕಾನೂನು ಜಾರಿಗೆ ತಂದಿದ್ದು, ಈಗ ಅದನ್ನು ಇನ್ನಷ್ಟು ಕಠಿಣಗೊಳಿಸಲು ತಿದ್ದುಪಡಿ ತರಲಾಗುತ್ತಿದೆ ಎಂದು ಅವರು ತಿಳಿಸಿದರು.

ದೇಶದ ವಿವಿಧ ರಾಜ್ಯಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಆಡಳಿತದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಲು ಈಗಿರುವ ಕಾನೂನನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಜಿತೇಂದ್ರ ಸಿಂಗ್ ಹೇಳಿದರು. ಈ ನಡುವೆ ಆರ್‌ಎಸ್‌ಪಿ ಸಂಸದ ಎನ್.ಕೆ. ಪ್ರೇಮಚಂದ್ರನ್, ಮಸೂದೆಯನ್ನು ವಿವಿಧ ಹಿತಾಸಕ್ತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲು ಡಿಸೆಂಬರ್ 1ರವರೆಗೆ ಮುಂದೂಡಬೇಕು ಎಂದು ಸಲಹೆ ನೀಡಿದರು. ವ್ಯಾಪಕ ಚರ್ಚೆಯ ಬಳಿಕ ಮಸೂದೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗಳ ಬಳಿಕ ಕೇಂದ್ರ ಸರ್ಕಾರ ಈ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಿತ್ತು. ಹೊಸ ತಿದ್ದುಪಡಿಯ ಪ್ರಕಾರ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾದವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50 ಲಕ್ಷ ರೂ.ವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.

ಮಸೂದೆ ಮಂಡನೆಯ ವೇಳೆ ಸಂಸತ್‌ಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮ ಕೈಗೊಂಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಪಕ್ಷ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಗದ್ದಲದ ನಡುವೆಯೇ ಜಿತೇಂದ್ರ ಸಿಂಗ್ ಮಸೂದೆಯನ್ನು ಸದನದಲ್ಲಿ ಮಂಡಿಸಿದರು.

Read More
Next Story