
ಖರ್ಗೆ ರ್ಯಾಲಿ ನಡೆದ ಸ್ಥಳದಲ್ಲಿ ಶುದ್ಧೀಕರಣ: ರಾಜ್ಯಸಭೆಯಲ್ಲಿ ಭಾರಿ ಗದ್ದಲ; ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ
ಆಗಸ್ಟ್ 8ರಂದು ಅದೇ ಸ್ಥಳದಲ್ಲಿ ಖರ್ಗೆ ಸಾರ್ವಜನಿಕ ರ್ಯಾಲಿ ನಡೆಸಿದ್ದರು. ಎರಡು ದಿನಗಳ ಬಳಿಕ ಬಲಪಂಥೀಯ ಸಂಘಟನೆಯೊಂದು ಅಲ್ಲಿ ಹವನ ನಡೆಸಿ ಸ್ಥಳವನ್ನು ‘ಶುದ್ಧೀಕರಣ’ ಮಾಡಿತ್ತು ಎನ್ನಲಾಗಿದೆ.
ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರ್ಯಾಲಿ ನಡೆಸಿದ ಸ್ಥಳದಲ್ಲಿ ‘ಶುದ್ಧೀಕರಣ’ ಕಾರ್ಯಕ್ರಮ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸ್ವತಃ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಬೆನ್ನಲ್ಲೇ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು. ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಜೆ.ಪಿ. ನಡ್ಡಾ, ಈ ಘಟನೆ ದುರದೃಷ್ಟಕರ ಎಂದು ಹೇಳಿದ್ದು, ಇಂತಹ ಚಟುವಟಿಕೆಗಳನ್ನು ಬಿಜೆಪಿ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ಈ ‘ಶುದ್ಧೀಕರಣ’ ಕಾರ್ಯಕ್ರಮ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಆಗಸ್ಟ್ 8ರಂದು ಅದೇ ಸ್ಥಳದಲ್ಲಿ ಖರ್ಗೆ ಸಾರ್ವಜನಿಕ ರ್ಯಾಲಿ ನಡೆಸಿದ್ದರು. ಎರಡು ದಿನಗಳ ಬಳಿಕ ಬಲಪಂಥೀಯ ಸಂಘಟನೆಯೊಂದು ಅಲ್ಲಿ ಹವನ ನಡೆಸಿ ಸ್ಥಳವನ್ನು ‘ಶುದ್ಧೀಕರಣ’ ಮಾಡಿತ್ತು ಎನ್ನಲಾಗಿದೆ.
ರಾಜ್ಯಸಭೆಯಲ್ಲಿ ಖರ್ಗೆ ಹೇಳಿದ್ದೇನು?
ಮುಂಗಾರು ಅಧಿವೇಶನದ ಕೊನೆಯ ದಿನವಾದ ಗುರುವಾರ ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಆಗಸ್ಟ್ 8ರಂದು ತಾವು ರ್ಯಾಲಿ ನಡೆಸಿದ ವೇದಿಕೆಯನ್ನು ಬಿಜೆಪಿ ಕಾರ್ಯಕರ್ತರು ಹವನ ನಡೆಸಿ ಶುದ್ಧೀಕರಿಸಿದ್ದಾರೆ ಎಂದು ಆರೋಪಿಸಿದರು.
“ಅಂದು ಲಕ್ಷಾಂತರ ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ನಾನು ಯಾವುದೇ ಸಮುದಾಯ ಅಥವಾ ಧರ್ಮದ ಹೆಸರನ್ನು ಉಲ್ಲೇಖಿಸಿರಲಿಲ್ಲ. ಅಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡಿದ್ದೆ. ಆದರೆ ನನ್ನ ಭಾಷಣದ ಬಳಿಕ ಬಿಜೆಪಿ ಕಾರ್ಯಕರ್ತರು ಹವನ ನಡೆಸಿದರು” ಎಂದು ಖರ್ಗೆ ಹೇಳಿದರು.
“ಇದು ಪ್ರಜಾಪ್ರಭುತ್ವದಲ್ಲಿ ನಡೆಯಬೇಕಾದ ರೀತಿಯೇ? ಸಂವಿಧಾನವನ್ನು ನೀವು ಹೇಗೆ ರಕ್ಷಿಸುತ್ತೀರಿ? ನಾನು ವಿರೋಧ ಪಕ್ಷದ ನಾಯಕ. ಇಂತಹ ವಿಚಾರಗಳನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ” ಎಂದು ಅವರು ಹೇಳಿದರು. ಖರ್ಗೆ ಅವರ ಮಾತಿನ ವೇಳೆ ಕಾಂಗ್ರೆಸ್ ಸಂಸದರು ಘೋಷಣೆಗಳನ್ನು ಕೂಗಿದ್ದರಿಂದ ರಾಜ್ಯಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.
‘ಅಸ್ಪೃಶ್ಯತೆಗಿಂತ ದೊಡ್ಡ ಪಾಪವಿಲ್ಲ’ ಎಂದ ಸಭಾಪತಿ
ಘಟನೆಗೆ ಪ್ರತಿಕ್ರಿಯಿಸಿದ ರಾಜ್ಯಸಭಾ ಸಭಾಪತಿ, ಅಸ್ಪೃಶ್ಯತೆಗಿಂತ ದೊಡ್ಡ ಪಾಪ ಜಗತ್ತಿನಲ್ಲಿ ಮತ್ತೊಂದಿಲ್ಲ ಎಂದು ಹೇಳಿದರು. “ಇದನ್ನು ಖಂಡಿಸಬೇಕು. ಇದನ್ನು ಮಾಡಿದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ” ಎಂದು ಅವರು ತಿಳಿಸಿದರು.
‘ಬಿಜೆಪಿ ಇಂತಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ’ ಎಂದ ನಡ್ಡಾ
ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಘಟನೆಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲು ಪ್ರಯತ್ನಿಸಿದರು. “ದಯವಿಟ್ಟು ಪದೇಪದೇ ಬಿಜೆಪಿಯೇ ಇದನ್ನು ಮಾಡಿದೆ ಎಂದು ಹೇಳಬೇಡಿ. ಬಿಜೆಪಿ ಇಂತಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ” ಎಂದು ನಡ್ಡಾ ಹೇಳಿದರು.
ಘಟನೆ ಕುರಿತು ತನಿಖೆ ನಡೆಸಲಾಗುವುದು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಈ ವಿಚಾರವನ್ನು ಪರಿಶೀಲಿಸಲಿದ್ದಾರೆ. ಖರ್ಗೆ ಅವರ ಭಾವನೆಗಳಿಗೆ ನೋವುಂಟಾಗಿರುವುದು ಎಲ್ಲರಿಗೂ ವಿಷಾದದ ವಿಷಯ ಎಂದು ಅವರು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ತಾವು ಯಾರ ಮೇಲೂ ನೇರವಾಗಿ ಆರೋಪ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. “ಪ್ರಕರಣ ದಾಖಲಿಸಿ, ತಪ್ಪಿತಸ್ಥರನ್ನು ಬಂಧಿಸಿ. ನಮ್ಮ ಬೇಡಿಕೆ ಇಷ್ಟೇ” ಎಂದು ಖರ್ಗೆ ಹೇಳಿದರು.
ಅಸಲಿ ವಿವಾದವೇನು?
ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ಶುದ್ಧೀಕರಣ’ ಕಾರ್ಯಕ್ರಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಪುರೋಹಿತರೊಬ್ಬರು ವೈದಿಕ ಮಂತ್ರಗಳ ಪಠಣದ ನಡುವೆ ಹವನ ನಡೆಸುತ್ತಿರುವ ದೃಶ್ಯ ಕಂಡುಬರುತ್ತದೆ.
ಮತ್ತೊಂದು ವಿಡಿಯೋದಲ್ಲಿ ಕಾರ್ಯಕ್ರಮದ ಆಯೋಜಕರೊಬ್ಬರು ರಾಮಲೀಲಾ ಮೈದಾನ ಧಾರ್ಮಿಕ ಮಹತ್ವ ಹೊಂದಿರುವ ಸ್ಥಳವಾಗಿದ್ದು, ಇಲ್ಲಿ ರಾಜಕೀಯ ಕಾರ್ಯಕ್ರಮಗಳ ಬದಲು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡಬೇಕು ಎಂದು ಹೇಳುತ್ತಿರುವುದು ಕಂಡುಬಂದಿದೆ.
ಕಾಂಗ್ರೆಸ್-ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪ
ಉತ್ತರಾಖಂಡ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಗೋಡಿಯಾಲ್, ಈ ಶುದ್ಧೀಕರಣ ಕಾರ್ಯಕ್ರಮವನ್ನು ಶ್ರೀರಾಮ ಸೇನೆ ಸಂಘಟನೆ ನಡೆಸಿದೆ ಎಂದು ಆರೋಪಿಸಿದ್ದಾರೆ. ಈ ಸಂಘಟನೆ ಬಿಜೆಪಿಯೊಂದಿಗೆ ಸಂಪರ್ಕ ಹೊಂದಿದೆ ಎಂದೂ ಅವರು ದೂರಿದ್ದಾರೆ. ಆದರೆ ಬಿಜೆಪಿ ಈ ಆರೋಪವನ್ನು ತಳ್ಳಿಹಾಕಿದೆ.
ಖರ್ಗೆ ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದಲೇ ಶುದ್ಧೀಕರಣ ಕಾರ್ಯಕ್ರಮ ನಡೆಸಲಾಗಿದೆ ಎಂದು ಗೋಡಿಯಾಲ್ ಆರೋಪಿಸಿದ್ದು, ಬಿಜೆಪಿ ಸಮಾಜದಲ್ಲಿ ಜಾತಿ ವಿಭಜನೆಗೆ ಕಾರಣವಾಗುತ್ತಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ಹೇಳುವುದೇನು?
ಶುದ್ಧೀಕರಣ ಕಾರ್ಯಕ್ರಮ ಆಯೋಜಕರೊಂದಿಗೆ ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಆದರೆ ಉತ್ತರಾಖಂಡ ಸಚಿವ ಹಾಗೂ ಬಿಜೆಪಿ ವಕ್ತಾರ ಖಜನ್ ದಾಸ್, ಖರ್ಗೆ ಅವರ ರ್ಯಾಲಿಯಲ್ಲಿ ಕೇಳಿಬಂದ ಕೆಲವು ಘೋಷಣೆಗಳು ಸನಾತನ ಸಮುದಾಯದ ಭಾವನೆಗಳಿಗೆ ನೋವುಂಟುಮಾಡಿರಬಹುದು ಎಂದು ಹೇಳಿದ್ದಾರೆ.

