ಮುಂದುವರಿದ ವಾಂಗ್ಚುಕ್ ಉಪವಾಸ ಸತ್ಯಾಗ್ರಹ- 118 ಪೊಲೀಸರಿಗೆ ಗಾಯ, 70 ಮಂದಿ ಬಂಧನ
ಯುವಜನರ ಮತ್ತು ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಮಂಡಿಯೂರಿರುವ ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಿದೆ.
ದೆಹಲಿಯ ಸಂಸದ್ ಭವನದ ಮುಂದೆ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮ ಖಂಡಿಸಿ ನಡೆದ ಬೃಹತ್ ಪ್ರತಿಭಟನೆ ಇಡೀ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ನೀಟ್ ಅಕ್ರಮ ತಡೆಯುವಲ್ಲಿ ಕೇಂದ್ರ ಶಿಕ್ಷಣ ಸಚಿವರು ವಿಫಲರಾಗಿದ್ದಾರೆ ಎಂದು ಆರೋಪಿಸಿ 'ಕಾಕ್ರೋಚ್ ಜನತಾ ಪಾರ್ಟಿ' ನೇತೃತ್ವದಲ್ಲಿ ಸಾವಿರಾರು ಯುವಜನರು ಬೀದಿಗೆ ಇಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮುಂಗಾರು ಅಧಿವೇಶನದ ಆರಂಭದ ದಿನವೇ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಾಟೀಚಾರ್ಜ್, ಅಶ್ರುವಾಯು ಹಾಗೂ ಜಲಫಿರಂಗಿ ಪ್ರಯೋಗ ಮಾಡಿದ್ದರಿಂದ ಆವರಣ ರಣಾಂಗಣವಾಗಿ ಮಾರ್ಪಟ್ಟಿತ್ತು. ಈ ಸಂಘರ್ಷದಲ್ಲಿ 120ಕ್ಕೂ ಹೆಚ್ಚು ಪೊಲೀಸರು ಹಾಗೂ ಹಲವು ಪ್ರತಿಭಟನಾಕಾರರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯುವಜನರ ಮತ್ತು ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಮಂಡಿಯೂರಿರುವ ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗಿದೆ. ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾ ನಿರತ ಪಕ್ಷದ ನಿಯೋಗದ ಸದಸ್ಯರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ಕರೆಸಿ ಚರ್ಚಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಹೋರಾಟಗಾರ ವಾಂಗ್ಚುಕ್ ಅವರ ಬಿಡುಗಡೆ, ನೀಟ್ ಅಕ್ರಮದ ಸಂಪೂರ್ಣ ಜವಾಬ್ದಾರಿ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಆತ್ಮಹತ್ಯೆ ಮಾಡಿಕೊಂಡ ನೀಟ್ ಅಭ್ಯರ್ಥಿಗಳ ಕುಟುಂಬಗಳಿಗೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪಟ್ಟು ಹಿಡಿದಿದ್ದಾರೆ.
ಮತ್ತೊಂದೆಡೆ, ಈ ಬಿಕ್ಕಟ್ಟನ್ನು ಶಮನಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಿಯೂಷ್ ಗೋಯಲ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಪ್ರಧಾನ್ ಅವರ ರಾಜೀನಾಮೆ ಪಡೆಯುವ ಬಗ್ಗೆ ಏನಾದರೂ ಸೂಚನೆ ನೀಡಲಾಗಿದೆಯೇ ಎಂಬ ಚರ್ಚೆಗಳು ತೀವ್ರಗೊಂಡಿವೆ. ಹೊರಗಡೆ ಪ್ರತಿಭಟನೆಯ ಕಾವು ಹೆಚ್ಚಿದ್ದರೆ, ಒಳಗಡೆ ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ನೀಟ್ ವಿಚಾರ ಧ್ವನಿಸಿ ಕಲಾಪ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಪೊಲೀಸರು ದೆಹಲಿಯ ಐದು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಿ, ಸಂಸತ್ತಿನ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಸರ್ಕಾರದ ನಡೆ ಹಾಗೂ ಇಂದಿನ ಸಂಸತ್ ಕಲಾಪದ ಬೆಳವಣಿಗೆಗಳ ಮೇಲೆ ಇಡೀ ದೇಶದ ಕಣ್ಣು ನೆಟ್ಟಿದೆ.

