
ಫಾರ್ಚೂನರ್ ಕಾರು, 1 ಕೋಟಿ ರೂ. ಕೊಟ್ರೂ ಮುಗಿಯದ ಆಸೆ; ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಆತ್ಮಹತ್ಯೆ!
ನೋಯ್ಡಾದ ಇಕೋಟೆಕ್-3 ವ್ಯಾಪ್ತಿಯಲ್ಲಿ 24 ವರ್ಷದ ದೀಪಿಕಾ ನಿರಂತರ ವರದಕ್ಷಿಣೆ ಕಿರುಕುಳದಿಂದಾಗಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಯುವತಿ ಬಲಿಯಾದ ಘಟನೆ ಮಾಸುವ ಮುನ್ನವೇ, ದೆಹಲಿ ಸಮೀಪದ ನೋಯ್ಡಾದಲ್ಲಿ ಮತ್ತೊಂದು ಭೀಕರ ವರದಕ್ಷಿಣೆ ಸಾವು ಸಂಭವಿಸಿದೆ. ನಿರಂತರ ವರದಕ್ಷಿಣೆ ಕಿರುಕುಳದಿಂದ ಬೇಸತ್ತ 24 ವರ್ಷದ ಯುವತಿಯೊಬ್ಬಳು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ನೋಯ್ಡಾದ ಇಕೋಟೆಕ್-3 ಪೊಲೀಸ್ ಠಾಣಾ ವ್ಯಾಪ್ತಿಯ ಜಲಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಯುವತಿಯನ್ನು ದೀಪಿಕಾ (24) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೃತರ ಪತಿ ಹಾಗೂ ಮಾವನನ್ನು ಈಗಾಗಲೇ ಬಂಧಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ದೀಪಿಕಾಗೆ ಹೃತಿಕ್ ಎಂಬಾತನೊಂದಿಗೆ ಕೇವಲ 14 ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ಮದುವೆ ಸಂದರ್ಭದಲ್ಲಿ ದೀಪಿಕಾ ಪೋಷಕರು ವರದಕ್ಷಿಣೆ ರೂಪದಲ್ಲಿ ಭಾರಿ ಬೆಲೆಯ ಫಾರ್ಚೂನರ್ ಎಸ್ಯುವಿ ಕಾರು ಮತ್ತು ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಹುಡುಗನ ಕಡೆಯವರಿಗೆ ನೀಡಿದ್ದರು.
ಆದರೆ, ಇಷ್ಟೆಲ್ಲಾ ಕೊಟ್ಟರೂ ತೃಪ್ತಿಯಾಗದ ಹೃತಿಕ್ ಮತ್ತು ಆತನ ಕುಟುಂಬಸ್ಥರು, ಮದುವೆಯಾದಾಗಿನಿಂದಲೂ ಹೆಚ್ಚುವರಿ ವರದಕ್ಷಿಣೆ ತರುವಂತೆ ದೀಪಿಕಾಗೆ ನಿರಂತರವಾಗಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ದೇಹದ ಮೇಲಿವೆ ತೀವ್ರ ಗಾಯದ ಗುರುತುಗಳು:
ಇನ್-ಲಾಸ್ ನೀಡುತ್ತಿದ್ದ ನಿರಂತರ ಕಿರುಕುಳ ಮತ್ತು ದೌರ್ಜನ್ಯದಿಂದ ಜಿಗುಪ್ಸೆಗೊಂಡ ದೀಪಿಕಾ, ಮೇ 17, 2026ರ ಭಾನುವಾರ ರಾತ್ರಿ ಮನೆಯ ಮೇಲ್ಛಾವಣಿಯಿಂದ ಕೆಳಗೆ ಜಿಗಿದು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಇಕೋಟೆಕ್-3 ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ. ಆದರೆ, ದೀಪಿಕಾ ಅವರ ದೇಹದ ಮೇಲೆ ತೀವ್ರವಾದ ಗಾಯದ ಗುರುತುಗಳು ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನವನ್ನು ಹುಟ್ಟುಹಾಕಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಪತಿ ಮತ್ತು ಮಾವನ ಬಂಧನ:
ಮಗಳ ನಿಗೂಢ ಸಾವಿನ ಕುರಿತು ದೀಪಿಕಾ ತಂದೆ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ದೀಪಿಕಾ ಪತಿ ಹೃತಿಕ್ ಮತ್ತು ಮಾವ ಮನೋಜ್ ಎಂಬುವವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಪೊಲೀಸರು ತಮ್ಮ ಅಧಿಕೃತ ಪ್ರಕಟಣೆಯಲ್ಲಿ, "ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಯುವತಿ ಮೇಲ್ಛಾವಣಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ಅಸಲಿ ಕಾರಣ ತಿಳಿಯಲಿದ್ದು, ಮುಂದಿನ ತನಿಖೆ ಮುಂದುವರಿದಿದೆ" ಎಂದು ತಿಳಿಸಿದ್ದಾರೆ.

