After Ayodhya, allegations of irregularities in Badrinath temple donation: Investigation ordered
x

ಬದರಿನಾಥ ದೇವಾಲಯ 

ಅಯೋಧ್ಯೆ ಬೆನ್ನಲೇ ಬದರಿನಾಥ ದೇವಾಲಯದ ದೇಣಿಗೆಯಲ್ಲಿ ಅಕ್ರಮ ಆರೋಪ: ತನಿಖೆಗೆ ಆದೇಶ

ಪ್ರಕರಣದ ಸತ್ಯಾಸತ್ಯತೆ ಹೊರತರಲು ವಿಶೇಷ ತನಿಖಾ ಸಮಿತಿಯನ್ನು ರಚಿಸುವಂತೆ ಸೂಚಿಸಲಾಗಿದೆ ಎಂದು ಬಿಕೆಟಿಸಿ ಅಧ್ಯಕ್ಷ ಹೇಮಂತ್ ದ್ವಿವೇದಿ ತಿಳಿಸಿದ್ದಾರೆ.


Click the Play button to hear this message in audio format

ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗದ ಆರೋಪದ ಬೆನ್ನಲ್ಲೇ, ಇದೀಗ ಪ್ರಸಿದ್ಧ ಬದರಿನಾಥ ಧಾಮದ ದೇಣಿಗೆಯಲ್ಲೂ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವ್ಯಾಪಕ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (ಬಿಕೆಟಿಸಿ) ಈ ವಿಷಯದ ಕುರಿತು ಸಮಗ್ರ ತನಿಖೆಗೆ ಆದೇಶಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆರೋಪಗಳನ್ನು ದೇವಾಲಯ ಸಮಿತಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸತ್ಯಾಸತ್ಯತೆ ಹೊರತರಲು ವಿಶೇಷ ತನಿಖಾ ಸಮಿತಿಯನ್ನು ರಚಿಸುವಂತೆ ಸೂಚಿಸಲಾಗಿದೆ ಎಂದು ಬಿಕೆಟಿಸಿ ಅಧ್ಯಕ್ಷ ಹೇಮಂತ್ ದ್ವಿವೇದಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕಚೇರಿಯ ಉದ್ಯೋಗಿಗಳಿಂದ ವಿವರಣೆಯನ್ನು ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

‘ವೈಯಕ್ತಿಕ ಕಾರ್ಯದರ್ಶಿ’ ಅಲ್ಲ, ಸರ್ಕಾರಿ ನೌಕರ

ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಯೊಂದನ್ನು ಅಧ್ಯಕ್ಷ ಹೇಮಂತ್ ದ್ವಿವೇದಿ ತಳ್ಳಿಹಾಕಿದ್ದಾರೆ. ಆರೋಪ ಎದುರಿಸುತ್ತಿರುವ ನಿರ್ದಿಷ್ಟ ಉದ್ಯೋಗಿಯನ್ನು ತಮ್ಮ 'ವೈಯಕ್ತಿಕ ಕಾರ್ಯದರ್ಶಿ' ಎಂದು ಬಿಂಬಿಸಲಾಗುತ್ತಿದ್ದು, ಇದು ಸುಳ್ಳಾಗಿದೆ. ಆ ವ್ಯಕ್ತಿ ನನ್ನ ವೈಯಕ್ತಿಕ ಕಾರ್ಯದರ್ಶಿಯಲ್ಲ, ಬದಲಿಗೆ ಬಿಕೆಟಿಸಿಯ ಖಾಯಂ ಸರ್ಕಾರಿ ಉದ್ಯೋಗಿಯಾಗಿದ್ದಾರೆ ಎಂದು ದ್ವಿವೇದಿ ಸ್ಪಷ್ಟಪಡಿಸಿದ್ದಾರೆ. ತನಿಖೆಯಲ್ಲಿ ಒಂದು ವೇಳೆ ಆರೋಪಗಳು ಸಾಬೀತಾದರೆ, ತಪ್ಪಿತಸ್ಥರ ವಿರುದ್ಧ ಯಾವುದೇ ದಾಕ್ಷಿಣ್ಯವಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಸಿಸಿಟಿವಿ ಆಧಾರದ ಮೇಲೆ ತನಿಖೆ

ಬಿಕೆಟಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಹನ್ ಸಿಂಗ್ ರಂಗದ್ ಈ ಕುರಿತು ಮಾತನಾಡಿ, "ಲಭ್ಯವಿರುವ ಸಾಕ್ಷ್ಯಗಳು, ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ಹೇಳಿಕೆಗಳನ್ನು ಆಧರಿಸಿ ತನಿಖಾ ಸಮಿತಿಯು ವರದಿಯನ್ನು ಸಿದ್ಧಪಡಿಸಲಿದೆ. ತನಿಖೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ಬೆಳಕಿಗೆ ಬಂದಲ್ಲಿ, ‘ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಕಾಯ್ದೆ, 1939’ ಮತ್ತು ನೌಕರರ ನಡವಳಿಕೆ ನಿಯಮಗಳ ಅಡಿಯಲ್ಲಿ ಕಠಿಣ ಕಾನೂನು ಮತ್ತು ಇಲಾಖಾ ಕ್ರಮ ಜರುಗಿಸಲಾಗುವುದು" ಎಂದಿದ್ದಾರೆ.

ಸಾರ್ವಜನಿಕರಲ್ಲಿ ಮನವಿ

ದೇವಾಲಯದ ಪವಿತ್ರತೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆ ತರುವಂತಹ ಯಾವುದೇ ಅಪೂರ್ಣ ಅಥವಾ ದಾರಿತಪ್ಪಿಸುವ ಆರೋಪಗಳನ್ನು ತನಿಖೆ ಪೂರ್ಣಗೊಳ್ಳುವವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಮತ್ತು ಹರಡದಂತೆ ಬಿಕೆಟಿಸಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Read More
Next Story