
ಬಿಹಾರದ ಸಸಾರಾಂ ನಿಲ್ದಾಣದಲ್ಲಿ ಪಟ್ನಾ ಪ್ಯಾಸೆಂಜರ್ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ರಾಜಧಾನಿ ಎಕ್ಸ್ಪ್ರೆಸ್ ದುರಂತದ ಬೆನ್ನಲ್ಲೇ ಮತ್ತೊಂದು ರೈಲಿನಲ್ಲಿಅಗ್ನಿ ಅವಘಡ
ಬಿಹಾರದ ಸಸಾರಾಂ ನಿಲ್ದಾಣದಲ್ಲಿ ಪಟ್ನಾ ಪ್ಯಾಸೆಂಜರ್ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಶಂಕೆ ವ್ಯಕ್ತವಾಗಿದೆ. ಯಾವುದೇ ಜೀವಹಾನಿ ಸಂಭವಿಸಿಲ್ಲ.
ಬಿಹಾರದ ಸಸಾರಾಂ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಮುಂಜಾನೆ ನಿಲ್ಲಿಸಲಾಗಿದ್ದ ಸಸಾರಾಂ-ಪಟ್ನಾ ವೇಗದ ಪ್ಯಾಸೆಂಜರ್ ರೈಲಿನ ಬೋಗಿಯೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿದ ಘಟನೆ ನಡೆದಿದೆ. ಮುಂಜಾನೆ ಸುಮಾರು 5:30 ರ ಸುಮಾರಿಗೆ ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 6 ರಲ್ಲಿ ಈ ಘಟನೆ ಸಂಭವಿಸಿದೆ. ರೈಲು ಹೊರಡುವ ಮುನ್ನವೇ ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ನಿಲ್ದಾಣದಲ್ಲಿದ್ದ ಪ್ರಯಾಣಿಕರಲ್ಲಿ ಕೆಲಕಾಲ ತೀವ್ರ ಆತಂಕ ಮತ್ತು ಭೀತಿಯ ವಾತಾವರಣ ನಿರ್ಮಾಣವಾಗಿತ್ತು.
ಪೂರ್ವ ಮಧ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್ಒ) ಸರಸ್ವತಿ ಚಂದ್ರ ಅವರು ಈ ಕುರಿತು ಮಾಹಿತಿ ನೀಡಿದ್ದು, ಘಟನೆ ನಡೆದ ಸಮಯದಲ್ಲಿ ಆ ಬೋಗಿಯಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಮತ್ತು ರೈಲು ಖಾಲಿಯಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಘಟನೆ ತಿಳಿದ ತಕ್ಷಣವೇ ಕಾರ್ಯಪ್ರವೃತ್ತರಾದ ರೈಲ್ವೆ ಸಿಬ್ಬಂದಿ ಮುಂಜಾನೆ 6 ಗಂಟೆಯ ಸುಮಾರಿಗೆ ಹೊಗೆ ಬರುತ್ತಿದ್ದ ಬೋಗಿಯನ್ನು ರೈಲಿನ ಉಳಿದ ಭಾಗಗಳಿಂದ ಯಶಸ್ವಿಯಾಗಿ ಪ್ರತ್ಯೇಕಿಸಿದರು. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಪ್ರಯತ್ನ ನಡೆಸಿ ಬೆಳಗ್ಗೆ 6:45 ರ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು.
ರೈಲ್ವೆ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ತ್ವರಿತ ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಯಾವುದೇ ಜೀವಹಾನಿ ಅಥವಾ ಯಾರಿಗೂ ಗಾಯಗಳಾದ ವರದಿಗಳಾಗಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇತ್ತೀಚೆಗಷ್ಟೇ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಈ ಘಟನೆ ನಡೆದಿರುವುದು ರೈಲ್ವೆ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ. ಸದ್ಯ ರೈಲ್ವೆ ಅಧಿಕಾರಿಗಳು ಘಟನೆಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಿದ್ದಾರೆ.
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಭೀಕರ ಅಗ್ನಿ ಅವಘಡ
ಭಾನುವಾರ ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ಪ್ರತಿಷ್ಠಿತ 'ರಾಜಧಾನಿ ಎಕ್ಸ್ಪ್ರೆಸ್' ರೈಲಿನಲ್ಲಿ ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿತ್ತು. ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ರೈಲಿನ ಎಸಿ ಕೋಚ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ರೈಲ್ವೆ ಸಿಬ್ಬಂದಿ ಮತ್ತು ಪ್ರಯಾಣಿಕರ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ರೈಲ್ವೆ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ರೈಲು ಸಂಖ್ಯೆ 12431 ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ಪ್ರೆಸ್ ರೈಲು ವೆಸ್ಟ್ ಸೆಂಟ್ರಲ್ ರೈಲ್ವೆಯ ಕೋಟಾ ವಿಭಾಗದ ಲೂನಿ ರಿಚ್ಛಾ ಮತ್ತು ವಿಕ್ರಮ್ಗಢ್ ಅಲೋಟ್ ನಿಲ್ದಾಣಗಳ ಮಧ್ಯೆ ಚಲಿಸುತ್ತಿದ್ದಾಗ ಈ ಘಟನೆ ನಡೆದಿತ್ತು. ಬೆಳಗಿನ ಜಾವ 5.15ರ ಸುಮಾರಿಗೆ ರೈಲಿನ ಹಿಂಭಾಗದಲ್ಲಿದ್ದ ಬಿ-1 ಎಸಿ ಕೋಚ್ನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಇಡೀ ಬೋಗಿಗೆ ಬೆಂಕಿ ವ್ಯಾಪಿಸಿತ್ತು.

