
ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಳ್ಳಾಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ರಸ್ತೆ ಯೋಜನೆಯ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದೆ.
ವಯನಾಡ್ನಲ್ಲಿ ಮತ್ತೆ ಸರಣಿ ಭೂಕುಸಿತ- 14ಜನ ನಾಪತ್ತೆ: ದೇವರನಾಡಿನಲ್ಲಿ ಹೆಚ್ಚಿದ ಆತಂಕ
ಕೇರಳಂನ ವಯನಾಡ್ ಸುರಂಗ ಮಾರ್ಗ ನಿರ್ಮಾಣ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಕಲ್ಲು-ಮಣ್ಣುಗಳ ಅಡಿಯಲ್ಲಿ ಹಲವರು ಸಿಲುಕಿರುವ ಆತಂಕ ಎದುರಾಗಿದೆ. ಪ್ರಸ್ತುತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದ್ದು, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ನಿರ್ಮಾಣ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವಯನಾಡ್ನ ಮೇಪ್ಪಾಡಿ ಸಮೀಪದ ಕಳ್ಳಾಡಿ ಎಂಬಲ್ಲಿರುವ ಮೀನಾಕ್ಷಿ ಸೇತುವೆಯ ಬಳಿ ಈ ದುರಂತ ಸಂಭವಿಸಿದ್ದು, ಕಲ್ಲು-ಮಣ್ಣುಗಳ ಅವಶೇಷಗಳ ಅಡಿಯಲ್ಲಿ 14 ಕಾರ್ಮಿಕರು ಕಣ್ಮರೆಯಾಗಿದ್ದಾರೆ.
ಧಾರಾಕಾರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪೈಲಿಂಗ್ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಟ್ಟದ ಒಂದು ಭಾಗ ಕುಸಿದು ಬಿದ್ದಿದೆ ಎನ್ನಲಾಗಿದೆ. ಘಟನೆಯ ಬೆನ್ನಲ್ಲೇ ಸ್ಥಳೀಯ ನಿವಾಸಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಕೆಸರಿನಲ್ಲಿ ಹೂತುಹೋಗಿದ್ದ ಮೂವರು ಕಾರ್ಮಿಕರನ್ನು ರಕ್ಷಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರಂಗ ಮಾರ್ಗದ ನೌಕರರನ್ನು ಕರೆದೊಯ್ಯಲು ಬಳಸುತ್ತಿದ್ದ ಕೆಲವು ವಾಹನಗಳು ಕೂಡ ಭೂಕುಸಿತಕ್ಕೆ ಸಿಲುಕಿ ಜಖಂಗೊಂಡಿವೆ.
ದುರಂತ ಸಂಭವಿಸಿದ ಸ್ಥಳದಲ್ಲಿ ಕಾರ್ಮಿಕರು ತಂಗಿದ್ದ ತಾತ್ಕಾಲಿಕ ನಿವಾಸಗಳು, ಕೆಲವು ಮನೆಗಳು ಮತ್ತು ಹೋಂ ಸ್ಟೇಗಳು ಇದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕಲ್ಪೆಟ್ಟಾದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಸಚಿವ ಟಿ. ಸಿದ್ದಿಕ್ ಮತ್ತು ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆದರೆ ಸ್ಥಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯು ರಕ್ಷಣಾ ಕಾರ್ಯಕ್ಕೆ ತೀವ್ರ ಅಡ್ಡಿಪಡಿಸುತ್ತಿದೆ.

