
ಕೇರಳ ಸಿಎಂ ವಿ.ಡಿ. ಸತೀಶನ್
ಕೇರಳ ಸಿಎಂ ವಿ.ಡಿ. ಸತೀಶನ್ ಕೊಲೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ!
ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮದ್ಯದ ಅಮಲಿನಲ್ಲಿ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಸದ್ಯ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಅವರ ಕುಟುಂಬಸ್ಥರನ್ನು ಕೊಲೆ ಮಾಡುವುದಾಗಿ ಫೋನ್ ಕರೆ ಮೂಲಕ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತನನ್ನು ಅತ್ತಿಂಗಲ್ ಮೂಲದ ಸೋನಿ ಥಾಮಸ್ ಎಂದು ಗುರುತಿಸಲಾಗಿದೆ.
ಶುಕ್ರವಾರ (ಜೂ.12) ಸಂಜೆ 6.50ರ ಸುಮಾರಿಗೆ ತಿರುವನಂತಪುರಂ ನಗರ ಜಿಲ್ಲಾ ಪೊಲೀಸ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಕ್ಕೆ (DPCC) ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ, ಮುಖ್ಯಮಂತ್ರಿ ಹಾಗೂ ಅವರ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಈ ವೇಳೆ ನಿಯಂತ್ರಣ ಕೇಂದ್ರದಲ್ಲಿದ್ದ ಪೊಲೀಸ್ ಅಧಿಕಾರಿಗಳು ಕಾರಣ ಕೇಳಿದಾಗ, "ನನಗೆ ಸತೀಶನ್ ಕಂಡರೆ ಇಷ್ಟವಿಲ್ಲ, ಅದಕ್ಕೇ ಕೊಲ್ಲುತ್ತೇನೆ" ಎಂದು ಹೇಳಿ ಫೋನ್ ಕಟ್ ಮಾಡಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಅಷ್ಟಕ್ಕೇ ನಿಲ್ಲದ ಆರೋಪಿ, ಕೇವಲ ಮೂರು ನಿಮಿಷಗಳ ಬಳಿಕ (ಸಂಜೆ 6.53ಕ್ಕೆ) ಮತ್ತೊಮ್ಮೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ವೇಳೆ ಕರೆ ಸ್ವೀಕರಿಸಿದ ಪೊಲೀಸ್ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆತ, "ಮುಖ್ಯಮಂತ್ರಿಗೆ ಸರಿಯಾದ ಭದ್ರತೆ ನೀಡಲಾಗಿದೆಯೇ?" ಎಂದು ಉದ್ಧಟತನದಿಂದ ಪ್ರಶ್ನಿಸಿದ್ದಾನೆ.
ಪೊಲೀಸ್ ಕಾರ್ಯಾಚರಣೆ
ಬೆದರಿಕೆ ಕರೆ ಬರುತ್ತಿದ್ದಂತೆ ಅಲರ್ಟ್ ಆದ ಕಂಟೋನ್ಮೆಂಟ್ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು, ಮೊಬೈಲ್ ನಂಬರ್ ಆಧರಿಸಿ ತನಿಖೆ ಆರಂಭಿಸಿದ್ದರು. ಶನಿವಾರ (ಜೂ.13) ಮುಂಜಾನೆ ಅತ್ತಿಂಗಲ್ನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಸೋನಿ ಥಾಮಸ್ನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮದ್ಯದ ಅಮಲಿನಲ್ಲಿ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಸದ್ಯ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ತಳಿಪರಂಬ ಶಾಸಕರಿಗೂ ಜೀವ ಬೆದರಿಕೆ!
ಮತ್ತೊಂದೆಡೆ, ಶುಕ್ರವಾರವೇ ಕಣ್ಣೂರಿನ ತಳಿಪರಂಬ ಕ್ಷೇತ್ರದ ಶಾಸಕ ಟಿ.ಕೆ. ಗೋವಿಂದನ್ ಅವರಿಗೂ ಕೊಲೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಮಯ್ಯಿಲ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಶಾಸಕ ಗೋವಿಂದನ್ ಅವರಿಗೆ ಕರೆ ಮಾಡಿದ್ದ ಅಪರಿಚಿತನೊಬ್ಬ, ಅಶ್ಲೀಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಒಡ್ಡಿದ್ದಾನೆ. ಈಗಾಗಲೇ ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಗುರುತಿಸಿದ್ದು, ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಮಯ್ಯಿಲ್ ಪೊಲೀಸರು ತಿಳಿಸಿದ್ದಾರೆ. ಸಿಪಿಐ(ಎಂ) ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಟಿ.ಕೆ. ಗೋವಿಂದನ್ ಅವರು ಇತ್ತೀಚಿನ ಚುನಾವಣೆಯಲ್ಲಿ ಯುಡಿಎಫ್ (UDF) ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದ್ದರು.

