
ಮೇಕೆದಾಟು ವಿವಾದ : ತಮಿಳುನಾಡಿನ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
2025 ರ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ತಮಿಳುನಾಡು ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ತಿರಸ್ಕರಿಸಿದೆ.
ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಯ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ದೊಡ್ಡ ಜಯ ಸಿಕ್ಕಂತಾಗಿದ್ದು, ಯೋಜನೆಯ ಮುಂದಿನ ಹಂತಗಳಿಗೆ ದಾರಿ ಸುಗಮವಾಗಿದೆ. 2025 ರ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ತಮಿಳುನಾಡು ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿತು. ಅಷ್ಟೇ ಅಲ್ಲದೆ, ಈ ಪ್ರಕರಣವನ್ನು ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕೆಂಬ ತಮಿಳುನಾಡಿನ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಸುಪ್ರೀಂ ಕೋರ್ಟ್ನ ನಿಯಮದಂತೆ, ಮರುಪರಿಶೀಲನಾ ಅರ್ಜಿಗಳನ್ನು ನ್ಯಾಯಾಧೀಶರು ತಮ್ಮ ಕೊಠಡಿಯಲ್ಲಿ ಕಡತಗಳ ಪರಿಶೀಲನೆ ಮೂಲಕವೇ ನಿರ್ಧರಿಸುತ್ತಾರೆ. ಅಲ್ಲಿ ವಕೀಲರ ಮೌಖಿಕ ವಾದಕ್ಕೆ ಅವಕಾಶವಿರುವುದಿಲ್ಲ. ಅರ್ಜಿಯನ್ನು ಪರಿಶೀಲಿಸಿದ ಪೀಠವು, ಮರುಪರಿಶೀಲನೆಗೆ ಯಾವುದೇ ಸಮರ್ಥನೀಯ ಕಾರಣಗಳು ಕಂಡುಬಂದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಮೇಕೆದಾಟು ಯೋಜನೆ ಹಾಗೂ ವಿವಾದ
ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶದ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಮತ್ತು ನೀರಿನ ಅಭಾವವನ್ನು ನೀಗಿಸಲು ಮೇಕೆದಾಟು ಯೋಜನೆ ಅತ್ಯಗತ್ಯ ಎಂದು ಕರ್ನಾಟಕ ಸರ್ಕಾರ ಪ್ರತಿಪಾದಿಸುತ್ತಿದೆ. ಆದರೆ, ಈ ಯೋಜನೆ ಜಾರಿಗೆ ಬಂದರೆ ಕಾವೇರಿ ನೀರನ್ನು ನಂಬಿರುವ ತಮಿಳುನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂಬುದು ತಮಿಳುನಾಡಿನ ವಾದವಾಗಿದೆ. ಹಿಂದೆ, ಅಂದಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠವು, ಕೇಂದ್ರ ಜಲ ಆಯೋಗವು ಯೋಜನೆಯ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಅಕಾಲಿಕ ಎಂದು ಕರೆದಿತ್ತು.
ನ್ಯಾಯಾಲಯದ ಮಹತ್ವದ ಅವಲೋಕನಗಳು
ಕೇಂದ್ರ ಜಲ ಆಯೋಗವು ಕೇವಲ ಡಿಪಿಆರ್ ಸಿದ್ಧಪಡಿಸಲು ಅನುಮತಿ ನೀಡಿದೆ. ಇದಕ್ಕೂ ಮುನ್ನ ತಮಿಳುನಾಡು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆಕ್ಷೇಪಣೆಗಳನ್ನು ಪರಿಗಣಿಸಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ. ಇಂತಹ ತಾಂತ್ರಿಕ ವಿಷಯಗಳಲ್ಲಿ ನ್ಯಾಯಾಲಯವು ತಜ್ಞರ ನಿರ್ಧಾರಗಳಿಗೆ ಮನ್ನಣೆ ನೀಡಬೇಕು ಮತ್ತು ಅನಗತ್ಯವಾಗಿ ಹಸ್ತಕ್ಷೇಪ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆಯೂ ಸ್ಪಷ್ಟಪಡಿಸಿದೆ. ಡಿಪಿಆರ್ ಸಿದ್ಧವಾದ ನಂತರ, ಒಂದು ವೇಳೆ ಅದರಲ್ಲಿ ತಮಿಳುನಾಡಿಗೆ ತೊಂದರೆಯಾಗುವ ಅಂಶಗಳಿದ್ದರೆ, ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ತಮಿಳುನಾಡಿಗೆ ಅವಕಾಶವಿದೆ ಎಂದು ನ್ಯಾಯಾಲಯ ಭರವಸೆ ನೀಡಿದೆ.
ಕರ್ನಾಟಕದ ವಾದವೇನು?
ಕರ್ನಾಟಕದ ಪರ ವಕೀಲರು ಸುಪ್ರೀಂ ಕೋರ್ಟ್ನ 2018 ರ ತೀರ್ಪನ್ನು ಉಲ್ಲೇಖಿಸಿದ್ದಾರೆ. ಅದರ ಪ್ರಕಾರ, ತಮಿಳುನಾಡಿಗೆ ನೀಡಬೇಕಾದ 177.25 ಟಿಎಂಸಿ ನೀರನ್ನು ಒದಗಿಸಲು ಕರ್ನಾಟಕ ಬದ್ಧವಾಗಿದೆ. ಈ ನೀರು ಹಂಚಿಕೆಗೆ ಧಕ್ಕೆಯಾಗದಂತೆ, ಕೇವಲ ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಕ್ಕಾಗಿ 4.75 ಟಿಎಂಸಿ ನೀರನ್ನು ಬಳಸಿಕೊಳ್ಳಲು ಮೇಕೆದಾಟು ಅಣೆಕಟ್ಟು ನಿರ್ಮಿಸುವುದು ಅನಿವಾರ್ಯವಾಗಿದೆ ಎಂದು ವಾದಿಸಲಾಗಿದೆ.
ಈ ಅರ್ಜಿ ವಜಾಗೊಂಡಿರುವುದು ರಾಜ್ಯ ಸರ್ಕಾರಕ್ಕೆ ಸಿಕ್ಕ ದೊಡ್ಡ ಗೆಲುವು. ಯೋಜನೆಗೆ ಪರಿಸರ ಅನುಮತಿ ಮತ್ತು ಇತರ ಅಗತ್ಯ ಸಮ್ಮತಿಗಳನ್ನು ಪಡೆಯುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ವೇಗಗೊಳಿಸಲು ಈಗ ದಾರಿ ಸುಗಮವಾಗಿದೆ. ತಮಿಳುನಾಡು ಕಾನೂನು ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ್ದರೂ, ಸದ್ಯದ ಮಟ್ಟಿಗೆ ಯೋಜನೆಯ ತಾಂತ್ರಿಕ ಪ್ರಕ್ರಿಯೆಗಳಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ.

