
ತೆಲಂಗಾಣ ಬಸ್ ಅಪಘಾತ
ಬಸ್-ಲಾರಿ ಭೀಕರ ಅಪಘಾತ; ಆರು ಮಂದಿ ಬಲಿ
ಸೂರ್ಯಾಪೇಟೆಯ ದುರ್ಗಾಪುರಂ ಸ್ಟೇಜ್ ಬಳಿ ಬಸ್-ಲಾರಿ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿದ್ದಾರೆ. ಅಪಘಾತದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹೈದರಾಬಾದ್ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಾಪೇಟೆ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಕೊಡಾಡ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗಾಪುರಂ ಸ್ಟೇಜ್ ಬಳಿ ಬೆಳಗಿನ ಜಾವ ಸುಮಾರು 5.20ಕ್ಕೆ ಅಪಘಾತ ನಡೆದಿದೆ. ಬಸ್ನಲ್ಲಿ ಒಟ್ಟು 43 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಎಂ ಆಘಾತ
ಅಪಘಾತದ ಸುದ್ದಿ ತಿಳಿದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯವಿರುವ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್ ಕೂಡ ಘಟನೆಗೆ ವಿಷಾದ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ನಾಯಕ ವಿ. ಹನುಮಂತ ರಾವ್ ಅತಿವೇಗದಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಹೇಳಿದ್ದು, ಹೆದ್ದಾರಿಗಳಲ್ಲಿ ಸಂಚಾರ ಪೊಲೀಸರ ನಿಯೋಜನೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ. ಮುಂಜಾನೆ ವೇಳೆ ಚಾಲಕರ ಆಯಾಸ ಹಾಗೂ ಅತಿವೇಗದ ಮೇಲೆ ವಿಶೇಷ ನಿಗಾ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

