
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಬಿಡದಿ ಟೌನ್ಶಿಪ್; ಸರ್ವೇ ಅಧಿಕಾರಿಗಳ ಮೇಲೆ ರೈತ ಮಹಿಳೆಯರ ದಾಳಿ, ಸರ್ಕಾರದ ವಿರುದ್ಧ ಎಚ್ಡಿಕೆ ಕಿಡಿ
ಬೈರಮಂಗಲ ಸುತ್ತಮುತ್ತಲ ಗ್ರಾಮಗಳಲ್ಲಿ ಭೂ ಸರ್ವೇ ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಗಳ ವಿರುದ್ಧ ಸ್ಥಳೀಯ ರೈತ ಮಹಿಳೆಯರು ಪೊರಕೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮ ಈಗ ತೀವ್ರ ಸ್ವರೂಪದ ಸಂಘರ್ಷಕ್ಕೆ ಕಾರಣವಾಗಿದೆ. ಕಳೆದ 470 ದಿನಗಳಿಂದ ಶಾಂತಿಯುತ ಸತ್ಯಾಗ್ರಹ ನಡೆಸುತ್ತಿದ್ದ ರೈತರನ್ನು ಜಂಟಿ ಸರ್ವೇ ಕಾರ್ಯದ ಮೂಲಕ ಸರ್ಕಾರವೇ ಕೆರಳಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೈರಮಂಗಲ ಸುತ್ತಮುತ್ತಲ ಗ್ರಾಮಗಳಲ್ಲಿ ಭೂ ಸರ್ವೇ ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಗಳ ವಿರುದ್ಧ ಸ್ಥಳೀಯ ರೈತ ಮಹಿಳೆಯರು ಪೊರಕೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆಗೆ ಸಂಬಂಧಿಸಿದಂತೆ ಸಚಿವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಸುಮಾರು 470 ದಿನಗಳಿಂದ ಒಕ್ಕೊರಲಿನಿಂದ ಭೂಸ್ವಾಧೀನ ವಿರೋಧಿಸಿ ಅನ್ನದಾತರು ಪ್ರತಿಭಟಿಸುತ್ತಿದ್ದಾರೆ. ಅವರ ತಾಳ್ಮೆ ಪರೀಕ್ಷಿಸಲು ಹೋದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ರೈತ ಮಹಿಳೆಯರು ಕೈಗೆ ಪೊರಕೆ ತೆಗೆದುಕೊಳ್ಳುವಂತೆ ಮಾಡಿದ ಹೆಗ್ಗಳಿಕೆ ಈ ರಾಜ್ಯ ಸರ್ಕಾರಕ್ಕೆ ಸಲ್ಲಬೇಕು. ಅಧಿಕಾರಿಗಳನ್ನು ಮುಂದಿಟ್ಟುಕೊಂಡು ರೈತರನ್ನು ಹತ್ತಿಕ್ಕುವ ಮತ್ತು ಅವರ ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್ ದಂಧೆಗೆ ಬಳಸಿಕೊಳ್ಳುವ ಸರ್ಕಾರದ ಹಠಮಾರಿತನವೇ ಇಂದಿನ ಅಹಿತಕರ ಘಟನೆಗೆ ನೇರ ಕಾರಣ" ಎಂದು ಎಚ್ಡಿಕೆ ಕಿಡಿಕಾರಿದ್ದಾರೆ.
ಕಾನೂನು ಹೋರಾಟಕ್ಕೆ ನಾವು ಸಿದ್ಧ
ಯೋಜನೆಯಿಂದ ಬಾಧಿತರಾಗುತ್ತಿರುವ 26ಕ್ಕೂ ಹೆಚ್ಚು ಹಳ್ಳಿಗಳ ರೈತರಿಗೆ ಧೈರ್ಯ ತುಂಬಿರುವ ಕುಮಾರಸ್ವಾಮಿ, "ಯಾವುದೇ ಕಾರಣಕ್ಕೂ ರೈತರು ಧೃತಿಗೆಡಬೇಕಾಗಿಲ್ಲ. ನಿಮ್ಮ ಜಮೀನನ್ನು ರಕ್ಷಿಸಲು ಬದ್ಧರಾಗಿದ್ದೇವೆ. ನಿಮ್ಮ ಪರವಾಗಿ ನ್ಯಾಯಾಲಯದಲ್ಲಿ ಕಾನೂನಾತ್ಮಕ ಹೋರಾಟ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಆದರೆ, ಪ್ರತಿಭಟನೆಯ ಹಾದಿ ತಪ್ಪದಂತೆ ಎಚ್ಚರ ವಹಿಸಿ. ಯಾವುದೇ ಅಹಿತಕರ ಘಟನೆ ಮತ್ತು ಹಿಂಸಾಚಾರಕ್ಕೆ ಅವಕಾಶ ನೀಡದಂತೆ ಶಾಂತಿಯುತವಾಗಿ ನಿಮ್ಮ ಹಕ್ಕೊತ್ತಾಯ ಮುಂದುವರಿಸಿ" ಎಂದು ಮನವಿ ಮಾಡಿದ್ದಾರೆ.
“ನ್ಯಾಯಸಮ್ಮತವಾಗಿ ಹೋರಾಡುತ್ತಿರುವವರ ಮೇಲೆ ಪೊಲೀಸರನ್ನು ಬಳಸಿ ದರ್ಪ ತೋರುತ್ತಿರುವುದನ್ನು ಖಂಡಿಸಿದ ಅವರು, "ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಸುಮ್ಮನಿರುವುದಿಲ್ಲ. ಅನ್ನ ಕೊಡುವ ರೈತನಿಗೆ ಮರಣಶಾಸನ ಬರೆಯಲು ಹೊರಟಿರುವ ಈ ಜನವಿರೋಧಿ ನೀತಿಯನ್ನು ತಕ್ಷಣವೇ ಕೈಬಿಡಬೇಕು ಮತ್ತು ಸರ್ವೇ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು" ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

