ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ: ಸಿಎಂ ವಿರುದ್ಧ ವಿಜಯೇಂದ್ರ ವಾಗ್ದಾಳಿ
x

ದೆಹಲಿ ಹೈಕಮಾಂಡ್ ಮೆಚ್ಚಿಸಲು ಹಾಗೂ ಡಿಎಲ್ಎಫ್‌ ಕಂಪನಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ವಿಜಯೇಂದ್ರ ಟೀಕಿಸಿದರು. 

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ: ಸಿಎಂ ವಿರುದ್ಧ ವಿಜಯೇಂದ್ರ ವಾಗ್ದಾಳಿ

ದೆಹಲಿ ಹೈಕಮಾಂಡ್ ಮೆಚ್ಚಿಸಲು ಹಾಗೂ ಡಿಎಲ್ಎಫ್‌ ಕಂಪನಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ವಿಜಯೇಂದ್ರ ಟೀಕಿಸಿದರು.


Click the Play button to hear this message in audio format

ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ ರೈತರ ಕೃಷಿ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಹಿತಾಸಕ್ತಿಗಿಂತ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. "ಮುಖ್ಯಮಂತ್ರಿಯಾದ ತಕ್ಷಣ ಅವರ ಆದ್ಯತೆ ಉತ್ತರ ಕರ್ನಾಟಕದ ಅಭಿವೃದ್ಧಿ ಆಗಿರಲಿಲ್ಲ. ಬದಲಾಗಿ, ಬಿಡದಿ ಟೌನ್‍ಶಿಪ್ ಹಾಗೂ ಕನಕಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಭೂಮಿ ನೀಡದ ರೈತರ ಮನೆಗಳಿಗೆ ರಾತ್ರೋರಾತ್ರಿ ಗೂಂಡಾಗಳನ್ನು ಕಳುಹಿಸಿ ಬೆದರಿಕೆ ಹಾಕಲಾಗುತ್ತಿದೆ" ಎಂದು ಅವರು ಗಂಭೀರ ಆರೋಪ ಮಾಡಿದರು.

ಹೈಕಮಾಂಡ್‌ ಒಲೈಕೆಗಾಗಿ ಯೋಜನೆ

ದೆಹಲಿ ಹೈಕಮಾಂಡ್ ಮೆಚ್ಚಿಸಲು ಹಾಗೂ ಡಿಎಲ್ಎಫ್‌ ಕಂಪನಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ವಿಜಯೇಂದ್ರ ಟೀಕಿಸಿದರು. "ಕಾಂಗ್ರೆಸ್ ಮುಖಂಡರು ಸಾವಿರಾರು ಎಕರೆ ಜಮೀನು ಇಟ್ಟುಕೊಳ್ಳಬಹುದು, ಆದರೆ ದೇಶಕ್ಕೆ ಅನ್ನ ನೀಡುವ ರೈತ ತುತ್ತಿಗಾಗಿ ನಾಲ್ಕೈದು ಎಕರೆ ಜಮೀನು ಇಟ್ಟುಕೊಳ್ಳಬಾರದೆ?" ಎಂದು ಅವರು ಪ್ರಶ್ನಿಸಿದರು. ಅಲ್ಲದೆ, ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲದಂತಾಗಿದ್ದು, ಮುಖ್ಯಮಂತ್ರಿಗಳು ರಿಯಲ್ ಎಸ್ಟೇಟ್ ಖಾತೆ ಸಚಿವರಂತೆ ವರ್ತಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ಆಗ್ರಹ

ಕೂಡಲೇ ಬಿಡದಿ ಟೌನ್‌ಶಿಪ್ ಯೋಜನೆಯಿಂದ ಸರ್ಕಾರ ಹಿಂದೆ ಸರಿಯಬೇಕು ಹಾಗೂ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದಾಖಲಿಸಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು. ರೈತರಿಗೆ ನ್ಯಾಯ ಸಿಗುವವರೆಗೂ ಸದನದ ಒಳಗೆ ಮತ್ತು ಹೊರಗೆ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ಈ ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೋರ್ ಕಮಿಟಿ ಸದಸ್ಯರು, ಕೇಂದ್ರ ಸಚಿವರು, ಸಂಸದರು, ಶಾಸಕರು ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Read More
Next Story