
ಸುರಂಗ ರಸ್ತೆ ಟೆಂಡರ್ ಬೆನ್ನಲ್ಲೇ ಸಿಎಂ ಡಿಕೆಶಿ ಭೇಟಿಯಾದ ಗೌತಮ್ ಅದಾನಿ
ಬೆಂಗಳೂರು ಸುರಂಗ ರಸ್ತೆ ಯೋಜನೆ ಟೆಂಡರ್ ಪ್ರಕ್ರಿಯೆ ಚರ್ಚೆಯಲ್ಲಿರುವ ನಡುವೆಯೇ ಗೌತಮ್ ಅದಾನಿ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಮಾರು 20 ನಿಮಿಷ ಮಾತುಕತೆ ನಡೆಸಿದರು.
ಅದಾನಿ ಸಮೂಹದ ಅಧ್ಯಕ್ಷ, ಉದ್ಯಮಿ ಗೌತಮ್ ಅದಾನಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಾನುವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಉದ್ದಿಮೆ ಹೂಡಿಕೆ ಮತ್ತು ಉದ್ಯಮ ಅವಕಾಶಗಳ ಕುರಿತು ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದರೂ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಭೇಟಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಗೌತಮ್ ಅದಾನಿ ಅವರು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬಳಿಕ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು ಎನ್ನಲಾಗಿದೆ. ಈ ವೇಳೆ ರಾಜ್ಯದ ವಿವಿಧ ಉದ್ಯಮ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಸುರಂಗ ರಸ್ತೆ ಟೆಂಡರ್ ಹಿನ್ನೆಲೆಯಲ್ಲಿ ಹೆಚ್ಚಿದ ಕುತೂಹಲ
ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ವರೆಗೆ ಸುಮಾರು 17 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣ ಯೋಜನೆಯನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ. ಈ ಯೋಜನೆಗೆ ಸರ್ಕಾರ ಆರಂಭದಲ್ಲಿ ಸುಮಾರು 17,698 ಕೋಟಿ ರೂಪಾಯಿ ವೆಚ್ಚವನ್ನು ಅಂದಾಜಿಸಿತ್ತು.
ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ 22,267 ಕೋಟಿ ರೂಪಾಯಿ ಮೊತ್ತದ ಪ್ರಸ್ತಾವ ಸಲ್ಲಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸಂಸ್ಥೆಗಳ ಪೈಕಿ ಕಡಿಮೆ ಮೊತ್ತದ ಬಿಡ್ ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಆದರೆ ಈ ಮೊತ್ತ ಸರ್ಕಾರದ ಮೂಲ ಅಂದಾಜಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ ಅಂತಿಮ ನಿರ್ಧಾರಕ್ಕೂ ಮುನ್ನ ವಿವಿಧ ಹಂತಗಳ ಪರಿಶೀಲನೆ ನಡೆಯಬೇಕಿದೆ.
ತಾಂತ್ರಿಕ ಸಮೀಕ್ಷೆ ಪೂರ್ಣಗೊಳಿಸಿರುವ ಸಂಸ್ಥೆ
ಟೆಂಡರ್ ಪ್ರಕ್ರಿಯೆ ಅಂತಿಮಗೊಳ್ಳುವ ಮುನ್ನವೇ ಸುರಂಗ ರಸ್ತೆ ಹಾದುಹೋಗುವ ಪ್ರದೇಶಗಳಲ್ಲಿ ಪ್ರಾಥಮಿಕ ಭೂ ಸಮೀಕ್ಷೆ, ಮಣ್ಣಿನ ಗುಣಮಟ್ಟ ಪರೀಕ್ಷೆ ಸೇರಿದಂತೆ ಕೆಲವು ತಾಂತ್ರಿಕ ಅಧ್ಯಯನಗಳನ್ನು ಅದಾನಿ ಸಂಸ್ಥೆ ನಡೆಸಿದೆ ಎಂದು ತಿಳಿದುಬಂದಿದೆ.
ಸುರಂಗ ರಸ್ತೆ ಕಾಮಗಾರಿಗೆ ಸಂಬಂಧಿಸಿದ ಗುತ್ತಿಗೆ ಪ್ರಸ್ತಾವ ಈಗಾಗಲೇ ಸರ್ಕಾರದ ಮುಂದಿದ್ದು, ವೆಚ್ಚ ಮತ್ತು ಇತರ ಷರತ್ತುಗಳ ಕುರಿತು ಪರಿಶೀಲನೆ ನಡೆಯುತ್ತಿದೆ. ಯೋಜನೆಯ ಹೆಚ್ಚುವರಿ ವೆಚ್ಚಕ್ಕೆ ಸಚಿವ ಸಂಪುಟದ ಅಂತಿಮ ಅನುಮೋದನೆಯೂ ಅಗತ್ಯವಾಗಿರುವುದರಿಂದ, ಈ ಹಂತದಲ್ಲಿ ಗೌತಮ್ ಅದಾನಿ ಅವರು ಮುಖ್ಯಮಂತ್ರಿಯನ್ನು ಭೇಟಿ ಮಾಡಿರುವುದು ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಗಮನ ಸೆಳೆದಿದೆ.
'ಸೌಜನ್ಯದ ಭೇಟಿ' ಎಂದ ಮುಖ್ಯಮಂತ್ರಿ
ಈ ಭೇಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೌತಮ್ ಅದಾನಿ ಅವರಿಗೆ ಕರ್ನಾಟಕದಲ್ಲಿ ಹಲವು ಉದ್ಯಮಗಳಿದ್ದು, ತಾವು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿರುವ ಹಿನ್ನೆಲೆಯಲ್ಲಿ ಸೌಜನ್ಯದ ಭೇಟಿಯಾಗಿ ಆಗಮಿಸಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹೊಸ ಹೂಡಿಕೆ, ಉದ್ಯಮ ವಿಸ್ತರಣೆ ಅಥವಾ ಬೆಂಗಳೂರು ಸುರಂಗ ರಸ್ತೆ ಯೋಜನೆ ಕುರಿತು ಯಾವುದೇ ನಿರ್ದಿಷ್ಟ ತೀರ್ಮಾನ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆ ಈ ಭೇಟಿಯ ನಂತರ ಅಧಿಕೃತವಾಗಿ ಹೆಚ್ಚಿನ ವಿವರಗಳು ಪ್ರಕಟವಾಗಿಲ್ಲ. ಆದರೆ ಸುರಂಗ ರಸ್ತೆ ಟೆಂಡರ್ಗೆ ಸಂಬಂಧಿಸಿದ ಪ್ರಕ್ರಿಯೆ ಅಂತಿಮ ಹಂತಕ್ಕೆ ಸಾಗುತ್ತಿರುವ ಸಂದರ್ಭದಲ್ಲಿ ನಡೆದ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ರಾಜಕೀಯವಾಗಿಯೂ ಮಹತ್ವದ ಭೇಟಿ
ಗೌತಮ್ ಅದಾನಿ ವಿರುದ್ಧ ಕಾಂಗ್ರೆಸ್ ನಾಯಕತ್ವವು ರಾಷ್ಟ್ರೀಯ ಮಟ್ಟದಲ್ಲಿ ಹಲವು ಬಾರಿ ಟೀಕೆಗಳನ್ನು ಮಾಡಿರುವ ಹಿನ್ನೆಲೆಯಲ್ಲೇ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಯನ್ನು ಅವರು ಭೇಟಿ ಮಾಡಿರುವುದು ವಿಶೇಷ ಗಮನ ಸೆಳೆದಿದೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದನ್ನು ಸೌಜನ್ಯದ ಭೇಟಿ ಎಂದೇ ಸ್ಪಷ್ಟಪಡಿಸಿದ್ದಾರೆ.

