
ಬೆಂಗಳೂರು ಶಿವಾಜಿನಗರದಲ್ಲಿ ಫುಟ್ಪಾತ್ ಅತಿಕ್ರಮಣ ತೆರವು ವೇಳೆ ಉದ್ವಿಗ್ನತೆ ಉಂಟಾಯಿತು
ಫುಟ್ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಶಿವಾಜಿನಗರದಲ್ಲಿ ಇಂಜಿನಿಯರ್ ಮಾಧವ ರಾವ್ ಅವರ ಜೊತೆ ಫುಟ್ಪಾತ್ ತೆರವು ಕಾರ್ಯಕ್ಕೆ ಬಂದಿದ್ದ ಮಹಿಳಾ ಸಿಬ್ಬಂದಿ ಮೇಲೆ ಈ ವ್ಯಾಪಾರಿಗಳು ಪೆಪ್ಪರ್ ಸ್ಪ್ರೇ ಹಾಕಿದ್ದಾರೆ ಎನ್ನಲಾಗುತ್ತಿದೆ.
ನಗರದ ಶಿವಾಜಿನಗರದಲ್ಲಿ ಫುಟ್ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಮಂಗಳವಾರ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪಾಲಿಕೆ ಅಧಿಕಾರಿಗಳು ಜೆಸಿಬಿ ಯಂತ್ರದ ಸಹಾಯದಿಂದ ಅತಿಕ್ರಮಣ ತೆರವುಗೊಳಿಸಲು ಮುಂದಾದ ಸಂದರ್ಭದಲ್ಲಿ ಸ್ಥಳೀಯ ಸಂಘಟನೆಗಳ ಕೆಲ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಸ್ಥಳದಲ್ಲಿದ್ದ ಜಿಬಿಎ ಸಿಬ್ಬಂದಿ ಮತ್ತು ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಕಾರ್ಯಾಚರಣೆಯ ವೇಳೆ ಪಾಲಿಕೆ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಘಟನೆಯ ವೇಳೆ ಒಬ್ಬ ಸಿಬ್ಬಂದಿಯ ಮೇಲೆ ಹೆಲ್ಮೆಟ್ನಿಂದ ಹಲ್ಲೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ. ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಬಳಸಲಾಗಿದೆ ಎಂಬ ಆರೋಪವೂ ವ್ಯಕ್ತವಾಗಿದೆ.
ಏಳು ಜನರು ಅರೆಸ್ಟ್
ಇಂಜಿನಿಯರ್ ಮಾಧವ ರಾವ್ ಅವರ ಜೊತೆ ಫುಟ್ಪಾತ್ ತೆರವು ಕಾರ್ಯಕ್ಕೆ ಬಂದಿದ್ದ ಮಹಿಳಾ ಸಿಬ್ಬಂದಿ ಮೇಲೆ ಈ ವ್ಯಾಪಾರಿಗಳು ಪೆಪ್ಪರ್ ಸ್ಪ್ರೇ ಹಾಕಿದ್ದಾರೆ ಎನ್ನಲಾಗುತ್ತಿದೆ. ಅಧಿಕಾರಿಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಹಲ್ಲೆ ಯತ್ನಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಸಚಿವ ಕೃಷ್ಣ ಬೈರೇಗೌಡರಿಂದ ಕ್ರಮಕ್ಕೆ ಸೂಚನೆ
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಶಿವಾಜಿನಗರ ಹಲ್ಲೆ ಬಗ್ಗೆ ಮಾಹಿತಿ ನೀಡಲಾಗಿದ್ದು, ನಾನು ಪೊಲೀಸ್ ಆಯುಕ್ತರು ಹಾಗೂ ಜಿಬಿಎ (GBA) ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನದ ವೇಳೆ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಎಲ್ಲರನ್ನೂ ಬಂಧಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

