
Karnataka Weather: ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಿಗೆ ಅಲರ್ಟ್!
ಬಂಗಾಳಕೊಲ್ಲಿಯ ಪ್ರಭಾವದಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಮೇ 15-16ರಂದು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಾದ್ಯಂತ ಮಳೆಯ ಆರ್ಭಟ ಶುರುವಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ
ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಮೇ 15 ಮತ್ತು 16 ರಂದು ಈ ಭಾಗಗಳಲ್ಲಿ ಅತಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ಇರಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಬಿಸಿ ಹಾಗೂ ತೇವಾಂಶಭರಿತ ವಾತಾವರಣದ ಜೊತೆಗೆ ಸಾಧಾರಣ ಮಳೆಯಾಗುವ ಸೂಚನೆ ಇದೆ.
ಉತ್ತರ ಕರ್ನಾಟಕದಲ್ಲೂ ವರುಣನ ಸಿಂಚನ
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಹವಾಮಾನ ವರದಿ
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

