Monitoring of illegal Bangladeshi immigrants in every district: Home Minister Dr. G. Parameshwar
x

ಗೃಹ ಸಚಿವ ಡಾ.ಜಿ. ಪರಮೇಶ್ವರ್‌

150 ವರ್ಷಗಳಲ್ಲಿ ಕಾಣದ ಬರ ಎದುರಾಗುವ ಸಾಧ್ಯತೆ- ಡಿಸಿಎಂ ಪರಮೇಶ್ವರ್ ಎಚ್ಚರಿಕೆ, 7 ಜಿಲ್ಲೆಗಳಲ್ಲಿ ಆತಂಕ

ಕರ್ನಾಟಕದಲ್ಲಿ 150 ವರ್ಷಗಳಲ್ಲಿ ಕಾಣದ ಬರ ಎದುರಾಗುವ ಸಾಧ್ಯತೆ ಇದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. 7 ಜಿಲ್ಲೆಗಳಲ್ಲಿ ಮಳೆ ಕೊರತೆ ಹಿನ್ನೆಲೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.


ರಾಜ್ಯದಲ್ಲಿ ಈ ವರ್ಷ ತೀವ್ರ ಬರಗಾಲ ಎದುರಾಗುವ ಸಾಧ್ಯತೆ ಇದ್ದು, ಕಳೆದ 150 ವರ್ಷಗಳಲ್ಲಿ ಕಂಡುಬರದಷ್ಟು ಗಂಭೀರ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಡಿಸಿಎಂ, ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಮಳೆಯ ತೀವ್ರ ಕೊರತೆಯಿಂದ ಬೆಳಗಾವಿ ಕಂದಾಯ ವಿಭಾಗದ ಏಳು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದ್ದು, ಕುಡಿಯುವ ನೀರು ಹಾಗೂ ಬೆಳೆ ರಕ್ಷಣೆಗೆ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಜೂನ್‌ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಬುಧವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಪರಮೇಶ್ವರ್, ಜೂನ್ ತಿಂಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ವಾಡಿಕೆ ಮಳೆಯ ಕೇವಲ ಶೇ.25ರಿಂದ 30ರಷ್ಟು ಮಾತ್ರ ಮಳೆಯಾಗಿದೆ ಎಂದು ಮಾಹಿತಿ ನೀಡಿದರು. ಈ ಮಳೆ ಕೊರತೆಯ ಪರಿಣಾಮವಾಗಿ ಬೆಳಗಾವಿ ಕಂದಾಯ ವಿಭಾಗದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಇದೇ ಪರಿಸ್ಥಿತಿ ಮುಂದುವರಿದರೆ ರಾಜ್ಯವು ಗಂಭೀರ ಬರಗಾಲವನ್ನು ಎದುರಿಸಬೇಕಾಗಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಬರ ಘೋಷಣೆಗೆ ಮಾನದಂಡಗಳೇ ಆಧಾರ

ಬರ ಘೋಷಣೆ ಕುರಿತು ಸ್ಪಷ್ಟನೆ ನೀಡಿದ ಡಿಸಿಎಂ, ಯಾವುದೇ ತಾಲೂಕು ಅಥವಾ ಜಿಲ್ಲೆಯನ್ನು ಮನಬಂದಂತೆ ಬರಪೀಡಿತ ಪ್ರದೇಶವೆಂದು ಘೋಷಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಳೆಯ ಪ್ರಮಾಣ, ಬೆಳೆ ನಷ್ಟ, ಜಲಾಶಯಗಳಲ್ಲಿನ ನೀರಿನ ಮಟ್ಟ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳ ಆಧಾರದ ಮೇಲೆ ಮಾತ್ರ ಬರ ಘೋಷಣೆ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಕ್ರಮ

ಬರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸರ್ಕಾರ ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಆರಂಭಿಸಿದೆ. ಪ್ರತಿ ಜಿಲ್ಲಾಧಿಕಾರಿಗಳ ಪಿಡಿ (PD) ಖಾತೆಗೆ ತುರ್ತು ಕಾಮಗಾರಿಗಳಿಗಾಗಿ ತಲಾ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳು ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಲಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.

ಈ ಏಳು ಜಿಲ್ಲೆಗಳಲ್ಲಿ ಹೆಚ್ಚಿದ ಆತಂಕ

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು, ರೈತರು ಹಾಗೂ ಸಾರ್ವಜನಿಕರು ನೀರಿನ ಕೊರತೆಯ ಆತಂಕ ಎದುರಿಸುತ್ತಿದ್ದಾರೆ.

ಸರ್ಕಾರದ ಕಾರ್ಯಯೋಜನೆ

ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕುಡಿಯುವ ನೀರಿನ ಲಭ್ಯತೆ ಖಚಿತಪಡಿಸುವುದು, ಬೆಳೆ ನಷ್ಟವನ್ನು ಕಡಿಮೆ ಮಾಡುವುದು ಹಾಗೂ ಅಗತ್ಯವಿರುವ ಪ್ರದೇಶಗಳಲ್ಲಿ ತುರ್ತು ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಸಮಗ್ರ ಕಾರ್ಯಯೋಜನೆ ರೂಪಿಸುತ್ತಿದೆ.

ಮುಂದಿನ ದಿನಗಳಲ್ಲಿ ಮಳೆಯ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ, ಅಗತ್ಯವಿದ್ದರೆ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.

Read More
Next Story