
ಸಾಂದರ್ಭಿಕ ಚಿತ್ರ
ಪ್ರಜಾಸೇವೆ ಇಲಾಖೆ ಆರಂಭಕ್ಕೆ ಸಂಪುಟ ಅಸ್ತು, ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಆರಂಭ
ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಮತ್ತು ಅಹವಾಲುಗಳನ್ನು ಸ್ವೀಕರಿಸಲು 'ಪ್ರಜಾಸೇವೆ' ಎಂಬ ಪ್ರತ್ಯೇಕ ಇಲಾಖೆಯನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ಜನಸ್ಪಂದನ ಮತ್ತು ಜನಹಿತ ಆಡಳಿತ ನೀಡುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ, 'ಪ್ರಜಾಸೇವೆ' ಹೆಸರಿನ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲು ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಸ್ತು ಎಂದಿದೆ. ಇದರೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಬಿಡದಿ ಟೌನ್ಶಿಪ್ ಯೋಜನೆಯ ಭೂಸಂತ್ರಸ್ತರಿಗೆ ಪರಿಹಾರ ವಿತರಣೆ ಪ್ರಕ್ರಿಯೆಗಳೂ ಚಾಲನೆ ಪಡೆದುಕೊಂಡಿವೆ.
'ಪ್ರಜಾಸೇವೆ' ಸಚಿವಾಲಯ ಸ್ಥಾಪನೆ
ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಮತ್ತು ಅಹವಾಲುಗಳನ್ನು ಸ್ವೀಕರಿಸಲು 'ಪ್ರಜಾಸೇವೆ' ಎಂಬ ಪ್ರತ್ಯೇಕ ಇಲಾಖೆಯನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಸಚಿವಾಲಯಕ್ಕೆ ಪ್ರತ್ಯೇಕ ಸಚಿವರು ಹಾಗೂ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೆ ಸಚಿವರು ಭೇಟಿ ನೀಡಬೇಕು ಮತ್ತು ಪ್ರತಿ ವಾರ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನ ಸಭೆಗಳನ್ನು ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಇದರ ಜೊತೆಗೆ, ಕಟ್ಟಡ ನಿರ್ಮಾಣದ ಓಸಿ ಮತ್ತು ಸಿಸಿ ಪಡೆಯುವ ಕಾಲಾವಕಾಶವನ್ನು ವಿಸ್ತರಿಸಲಾಗಿದ್ದು, 2026ರ ಮೇ 31ರೊಳಗೆ ಅರ್ಜಿ ಸಲ್ಲಿಸಿದವರಿಗೆ ರಿಯಾಯಿತಿ ನೀಡಿದ್ದು ಕಾಲಾವಕಾಶವನ್ನು ಮತ್ತಷ್ಟು ವಿಸ್ತರಿಸಲು ನಿರ್ಧರಿಸಲಾಗಿದೆ. ಜಿಪಿಎಸ್ ಆಧಾರಿತ ಫೋಟೋ ಸಲ್ಲಿಕೆಯನ್ನು ಈ ಪ್ರಕ್ರಿಯೆಯಲ್ಲಿ ಕಡ್ಡಾಯಗೊಳಿಸಲಾಗಿದೆ.
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ
ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಇಂದಿನಿಂದ 'ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ಆರಂಭಿಸಿದೆ. 18 ವರ್ಷ ತುಂಬಿದ ಯುವಕರು ಸೇರಿದಂತೆ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸುವುದು ಮತ್ತು ಲೋಪದೋಷಗಳನ್ನು ಸರಿಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಜೂ. 30ರಿಂದ ಜು. 29ರವರೆಗೆ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಆ. 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಅ. 7ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬಿಡದಿ ಟೌನ್ಶಿಪ್ ವಿವಾದ ಮತ್ತು ಪರಿಹಾರ ವಿತರಣೆ
ಬಿಡದಿ ಟೌನ್ಶಿಪ್ ಯೋಜನೆಗಾಗಿ ಭೂಮಿ ನೀಡಿರುವ ರೈತರಿಗೆ ಪರಿಹಾರದ ಚೆಕ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ರಾಮನಗರದ ಕಂದಾಯ ಭವನದಲ್ಲಿ ಸಾಂಕೇತಿಕವಾಗಿ ರೈತರಿಗೆ ಚೆಕ್ ವಿತರಿಸಿದರು. ವಿವಿಧ ವಾಣಿಜ್ಯ ಬೆಳೆಗಳಿಗೆ ಬಂಪರ್ ಪರಿಹಾರ ಘೋಷಿಸಲಾಗಿದ್ದು, ಮಾವಿನ ಮರಕ್ಕೆ 62 ಸಾವಿರ ರೂ., ತೆಂಗಿನ ಮರಕ್ಕೆ 40 ಸಾವಿರ ರೂ. ಹಾಗೂ ರೇಷ್ಮೆ ಬೆಳೆಗಾರರಿಗೆ ಪ್ರತಿ ಎಕರೆಗೆ 14 ಲಕ್ಷ ರೂ.ಗಳವರೆಗೆ ಪರಿಹಾರ ನಿಗದಿಪಡಿಸಲಾಗಿದೆ.
ಬೃಹತ್ ಪಾದಯಾತ್ರೆಗೆ ಸಜ್ಜು
ಆದರೆ, ಈ ಯೋಜನೆಯನ್ನು ವಿರೋಧಿಸಿರುವ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಇದರಲ್ಲಿ ರಿಯಲ್ ಎಸ್ಟೇಟ್ ದಂದೆ ನಡೆದಿದೆ ಎಂದು ಆರೋಪಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಜೆಡಿಎಸ್ ಶಾಸಕರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ವಿವಾದದ ಹಿನ್ನೆಲೆಯಲ್ಲಿ ನಾಳೆ (ಭಾನುವಾರ) ಜೆಡಿಎಸ್ ಮತ್ತು ರೈತ ಸಂಘಟನೆಗಳು ಬಿಡದಿಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿವೆ.

