ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಲ್ಲಿ ಶಾಲೆಗೆ ರಜೆ
x

ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಲ್ಲಿ ಶಾಲೆಗೆ ರಜೆ

ರಾಜ್ಯದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಲವು ಜಿಲ್ಲೆಗಳಿಗೆ ಐಎಂಡಿ ಭಾರಿ ಮಳೆ ಎಚ್ಚರಿಕೆ ನೀಡಿದೆ.


Click the Play button to hear this message in audio format

ವಿವಿಧ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಿಗೂ ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಮೇಲೆ ವಿಶೇಷ ನಿಗಾ ಇರಿಸಲಾಗಿದೆ.

ಕೊಡಗು, ಚಿಕ್ಕಮಗಳೂರಿನಲ್ಲಿ ಇಂದು ಶಾಲೆಗಳಿಗೆ ರಜೆ

ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿನ ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ. ಸ್ಥಳೀಯ ಆಡಳಿತ ಅಧಿಕಾರಿಗಳು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದಾರೆ.

ಇನ್ನೊಂದೆಡೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಸಹ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ನೀಡಲಾಗಿದೆ.

ಇಂದು ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ?

ಇಂದು ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೆಲವೆಡೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು.

ಆಗಸ್ಟ್ 2ಕ್ಕೂ ಮುಂದುವರಿಯಲಿದೆ ಮಳೆ

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಆಗಸ್ಟ್ 2ರಂದು ಕೂಡ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಉತ್ತಮ ಮಳೆಯ ನಿರೀಕ್ಷೆಯಿದ್ದು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆಯೂ ನೀಡಲಾಗಿದೆ.

ಕಳೆದ 24 ಗಂಟೆಯಲ್ಲಿ ಹೆಚ್ಚು ಮಳೆ ದಾಖಲಾದ ಪ್ರದೇಶಗಳು

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿ ಕಂಡುಬಂದಿದೆ.

ಅತಿ ಹೆಚ್ಚು ಮಳೆ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 9 ಸೆಂಟಿಮೀಟರ್ ದಾಖಲಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 7 ಸೆಂ.ಮೀ., ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 7 ಸೆಂ.ಮೀ. ಮಳೆಯಾಗಿದೆ.

ಇದರ ಜೊತೆಗೆ ಬೀದರ್ ಜಿಲ್ಲೆಯ ಔರಾದ್, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಡಗು ಜಿಲ್ಲೆಯ ವಿರಾಜಪೇಟೆ ಹಾಗೂ ಸೋಮವಾರಪೇಟೆ ಪ್ರದೇಶಗಳಲ್ಲಿ ತಲಾ 6 ಸೆಂಟಿಮೀಟರ್ ಮಳೆಯಾಗಿದೆ.

ಆಡಳಿತದ ಎಚ್ಚರಿಕೆ

ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ನದಿ, ಹಳ್ಳ ಹಾಗೂ ತಗ್ಗು ಪ್ರದೇಶಗಳ ಬಳಿ ಅನಗತ್ಯವಾಗಿ ತೆರಳದಂತೆ ಜಿಲ್ಲಾಡಳಿತಗಳು ಸಾರ್ವಜನಿಕರಿಗೆ ಸೂಚಿಸಿವೆ. ಗುಡ್ಡ ಕುಸಿತ ಸಂಭವಿಸುವ ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರಿಕೆ ವಹಿಸುವಂತೆ ಹಾಗೂ ಹವಾಮಾನ ಇಲಾಖೆಯ ಮುಂದಿನ ಪ್ರಕಟಣೆಗಳನ್ನು ಗಮನಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Read More
Next Story