B.Y. Vijayendra, Ashok receive high command; Bar license reserved for SC, ST category
x

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ

ಬಿ.ವೈ. ವಿಜಯೇಂದ್ರ, ಅಶೋಕ್‌ಗೆ ಹೈಕಮಾಂಡ್ ಬುಲಾವ್; ಎಸ್‌ಸಿ, ಎಸ್‌ಟಿ ವರ್ಗಕ್ಕೆ ಬಾರ್ ಲೈಸೆನ್ಸ್ ಮೀಸಲು

ಅಡ್ಡ ಮತದಾನ ಮಾಡಿದವರ ಪತ್ತೆಗಾಗಿ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸುವ ವಿಜಯೇಂದ್ರ ಅವರ ಪ್ರಸ್ತಾವನೆಗೆ ಸ್ವಪಕ್ಷದ ನಾಯಕರಿಂದಲೇ ವಿರೋಧ ವ್ಯಕ್ತವಾಗಿದೆ.


Click the Play button to hear this message in audio format

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಏಳು ಶಾಸಕರು ಅಡ್ಡ ಮತದಾನ ಮಾಡಿರುವ ವಿಚಾರವನ್ನು ಪಕ್ಷದ ಹೈಕಮಾಂಡ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಚರ್ಚಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರಿಗೆ ದೆಹಲಿಗೆ ಬರಲು ವರಿಷ್ಠರು ಬುಲಾವ್ ನೀಡಿದ್ದಾರೆ. ಈಗಾಗಲೇ ದೆಹಲಿ ತಲುಪಿರುವ ನಾಯಕರು, ನಾಳೆ ಮಧ್ಯಾಹ್ನ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲಿದ್ದಾರೆ. ಅಡ್ಡ ಮತದಾನಕ್ಕೆ ಕಾರಣವಾದ ಅಂಶಗಳು ಹಾಗೂ ಪಕ್ಷದಲ್ಲಿನ ಸಮನ್ವಯತೆಯ ಕೊರತೆಯ ಬಗ್ಗೆ ವರಿಷ್ಠರು ರಾಜ್ಯ ನಾಯಕರಿಗೆ ಚಾಟಿ ಬೀಸುವ ಸಾಧ್ಯತೆಯಿದೆ.

ಇದೇ ವೇಳೆ, ಅಡ್ಡ ಮತದಾನ ಮಾಡಿದವರ ಪತ್ತೆಗಾಗಿ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸುವ ವಿಜಯೇಂದ್ರ ಅವರ ಪ್ರಸ್ತಾವನೆಗೆ ಸ್ವಪಕ್ಷದ ನಾಯಕರಿಂದಲೇ ವಿರೋಧ ವ್ಯಕ್ತವಾಗಿದೆ. ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹಾಗೂ ಶಾಸಕ ಸುರೇಶ್ ಕುಮಾರ್ ಅವರಂತಹ ಹಿರಿಯ ನಾಯಕರು ರಾಜಕೀಯ ವಿಚಾರಕ್ಕೆ ದೇವರನ್ನು ಎಳೆದು ತರುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ಆಣೆ-ಪ್ರಮಾಣದ ಅಗತ್ಯವಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಎಸ್‌ಸಿ, ಎಸ್‌ಟಿ ವರ್ಗಕ್ಕೆ ಬಾರ್ ಲೈಸೆನ್ಸ್ ಮೀಸಲು

ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಇನ್ನು ಮುಂದೆ ಮದ್ಯ ಮಾರಾಟದ ಪರವಾನಗಿ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಲು ಅಬಕಾರಿ ಇಲಾಖೆ ಮುಂದಾಗಿದೆ. ಸಿಎಲ್-6 ಹಾಗೂ ಸಿಎಲ್-9 ಪರವಾನಗಿಗಳ ಹರಾಜಿನಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಆರ್ಥಿಕವಾಗಿ ಹಿಂದುಳಿದಿರುವ ಈ ಸಮುದಾಯದ ಜನರಿಗೆ ಆರ್ಥಿಕ ಸಬಲೀಕರಣ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಅಬಕಾರಿ ಕ್ಷೇತ್ರದಲ್ಲಿ ಮೀಸಲಾತಿ ತಂದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ.

ಬಿಡದಿ ಟೌನ್‌ಶಿಪ್ ವಿವಾದ: ಡಿಕೆಶಿಗೆ ಹೆಚ್‌ಡಿಕೆ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಯ 'ಪಿತಾಮಹ' ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ದಾಖಲೆಗಳ ಸಮೇತ ತಿರುಗೇಟು ನೀಡಿದ್ದಾರೆ. ಸೋಮವಾರ(ಜೂ.22) ಮಾಧ್ಯಮಗೋಷ್ಠಿ ನಡೆಸಿದ ಅವರು, "ನಾನು ಮುಖ್ಯಮಂತ್ರಿಯಾಗಿದ್ದಾಗ ಯೋಜನೆ ರೂಪಿಸಿದ್ದು ನಿಜ, ಆದರೆ ರೈತರ ವಿರೋಧ ವ್ಯಕ್ತವಾದ ತಕ್ಷಣ ಅದನ್ನು ಕೈಬಿಟ್ಟಿದ್ದೆ. ಅಂದು ಸದನದಲ್ಲಿ ಸಿದ್ದರಾಮಯ್ಯ ಅವರೇ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು" ಎಂದು ಹಳೆಯ ನಡಾವಳಿಗಳನ್ನು ಬಿಡುಗಡೆ ಮಾಡಿದರು.

ಮುಂದುವರಿದು ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೇರ ಸವಾಲು ಹಾಕಿದರು. "ಬನ್ನಿ, ರೈತರ ಸಮ್ಮುಖದಲ್ಲೇ ಬೈರಮಂಗಲದಲ್ಲಿ ಈ ಬಗ್ಗೆ ಬಹಿರಂಗ ಚರ್ಚೆ ಮಾಡೋಣ. ರೈತರಿಗೆ ಭೂಮಿ ನೀಡಲು ಇಷ್ಟವಿದೆಯೇ ಅಥವಾ ಇಲ್ಲವೇ ಎಂಬುದು ಅಲ್ಲೇ ತೀರ್ಮಾನವಾಗಲಿ" ಎಂದು ಗುಡುಗಿದ್ದಾರೆ. ಈ ಬೆಳವಣಿಗೆಯಿಂದಾಗಿ ಬಿಡದಿ ಭೂಸ್ವಾಧೀನ ವಿವಾದ ಈಗ ದೊಡ್ಡ ಮಟ್ಟದ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.

Read More
Next Story