ವಿಕ್ಟೋರಿಯಾ ಆಸ್ಪತ್ರೆ ಸುತ್ತಮುತ್ತ ಅತಿಕ್ರಮಣ ತೆರವು; ಬೀದಿ ವ್ಯಾಪಾರಿಗಳ ಆಕ್ರೋಶ
x

ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ ಕೆಆರ್ ಮಾರ್ಕೆಟ್ ಹಾಗೂ ವಿಕ್ಟೋರಿಯಾ ಆಸ್ಪತ್ರೆ ಸುತ್ತಮುತ್ತ 233 ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ವಿಕ್ಟೋರಿಯಾ ಆಸ್ಪತ್ರೆ ಸುತ್ತಮುತ್ತ ಅತಿಕ್ರಮಣ ತೆರವು; ಬೀದಿ ವ್ಯಾಪಾರಿಗಳ ಆಕ್ರೋಶ

ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ ಕೆಆರ್ ಮಾರ್ಕೆಟ್ ಹಾಗೂ ವಿಕ್ಟೋರಿಯಾ ಆಸ್ಪತ್ರೆ ಸುತ್ತಮುತ್ತ 233 ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಯಿತು. ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Click the Play button to hear this message in audio format

ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಬುಧವಾರ ಕೆಆರ್ ಮಾರ್ಕೆಟ್ ಸಮೀಪದ ಮೈಸೂರು ರಸ್ತೆ ಹಾಗೂ ವಿಕ್ಟೋರಿಯಾ ಆಸ್ಪತ್ರೆ ಆವರಣ ಗೋಡೆಯ ಬಳಿಯ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿತು. ಹಲವು ವರ್ಷಗಳಿಂದ ಅತಿಕ್ರಮಣಕ್ಕೊಳಗಾಗಿದ್ದ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವ ಉದ್ದೇಶದಿಂದ ಒಟ್ಟು 233 ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ತೆರವು ಕಾರ್ಯಾಚರಣೆಯಿಂದ ಅನೇಕ ಬೀದಿ ವ್ಯಾಪಾರಿಗಳು ಸಂಕಷ್ಟಕ್ಕೊಳಗಾದರು. ಹಲವು ವರ್ಷಗಳಿಂದ ಇದೇ ಸ್ಥಳದಲ್ಲಿ ವ್ಯಾಪಾರ ನಡೆಸುತ್ತಿದ್ದೇವೆ. 2002ರವರೆಗೆ ಬಿಬಿಎಂಪಿಗೆ ಬಾಡಿಗೆಯನ್ನೂ ಪಾವತಿಸಿದ್ದೇವೆ. ನಮ್ಮ ಅಂಗಡಿಗಳಿಗೆ ವಿದ್ಯುತ್ ಸಂಪರ್ಕವೂ ಇತ್ತು ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿರುವುದರಿಂದ ಜೀವನೋಪಾಯ ಕಳೆದುಕೊಂಡಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾನೂನು ಉಲ್ಲಂಘನೆಯ ಆರೋಪ

ಬೀದಿ ವ್ಯಾಪಾರಿಗಳ ಸಂಘಟನೆಗಳು ಈ ಕ್ರಮವನ್ನು ವಿರೋಧಿಸಿದ್ದು, ಬೀದಿ ವ್ಯಾಪಾರಿಗಳ (ಜೀವನೋಪಾಯ ರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಕಾಯ್ದೆ-2014 ಪ್ರಕಾರ ಮೊದಲು ಸಮಗ್ರ ಸಮೀಕ್ಷೆ ನಡೆಸಿ, ಪರ್ಯಾಯ ವ್ಯಾಪಾರ ವಲಯಗಳನ್ನು ಗುರುತಿಸಿ ಬಳಿಕವೇ ತೆರವು ಕಾರ್ಯಾಚರಣೆ ನಡೆಸಬೇಕು ಎಂದು ಒತ್ತಾಯಿಸಿವೆ.

ಹೈಕೋರ್ಟ್ ಏನು ಹೇಳಿತ್ತು?

ಸಾರ್ವಜನಿಕ ಮಾರ್ಗಗಳು, ಪ್ರಮುಖ ಆಸ್ಪತ್ರೆಗಳ ಸುತ್ತಮುತ್ತ ಹಾಗೂ ಮಾರುಕಟ್ಟೆ ಪ್ರದೇಶಗಳ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣಮುಕ್ತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಈ ಹಿಂದೆ ಸೂಚಿಸಿತ್ತು. ತೆರವು ಕಾರ್ಯಾಚರಣೆಗೆ ತಡೆ ಕೋರಿ ಆರು ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದರೂ, ನ್ಯಾಯಾಲಯ ತಡೆಯಾಜ್ಞೆ ನೀಡಲಿಲ್ಲ. ಅಂಗಡಿಗಳನ್ನು ತೆರವುಗೊಳಿಸಲು 15 ದಿನಗಳ ಕಾಲಾವಕಾಶ ನೀಡಿದ ನ್ಯಾಯಾಲಯ, ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಲು ಆಡಳಿತಕ್ಕೆ ಅನುಮತಿ ನೀಡಿತ್ತು.

ಮುಂದುವರಿಯಲಿದೆ ವಿಶೇಷ ಕಾರ್ಯಾಚರಣೆ

ಬೆಂಗಳೂರು ಕೇಂದ್ರ ನಗರ ಆಯುಕ್ತ ಜಗದೀಶ್ ಜಿ ಮಾತನಾಡಿ, ನಗರದ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣಮುಕ್ತವಾಗಿಡಲು ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ವಿಶೇಷ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು. ಸಾರ್ವಜನಿಕರಿಗೆ ಸುರಕ್ಷಿತ, ಸುಗಮ ಹಾಗೂ ನಿರಂತರ ಪಾದಚಾರಿ ಸಂಚಾರ ವ್ಯವಸ್ಥೆ ಕಲ್ಪಿಸುವುದು ಪಾಲಿಕೆಯ ಆದ್ಯತೆಯಾಗಿದೆ ಎಂದು ತಿಳಿಸಿದರು.

Read More
Next Story