
ರಸ್ತೆಗೆ ಮಾವು ಸುರಿದು ರೈತರು ಪ್ರತಿಭಟನೆ ನಡೆಸಿದರು.
ದರ ಕುಸಿತ: ಬೆಂಬಲ ಬೆಲೆಗೆ ಆಗ್ರಹಿಸಿ ರಸ್ತೆಗೆ ಮಾವಿನ ಹಣ್ಣು ಸುರಿದು ರೈತರ ಬೃಹತ್ ಪ್ರತಿಭಟನೆ!
ನೆರೆಯ ಆಂಧ್ರಪ್ರದೇಶ ಸರ್ಕಾರವು ಈಗಾಗಲೇ ತೋತಾಪುರಿ ತಳಿಯ ಮಾವಿಗೆ ಪ್ರತಿ ಕೆಜಿಗೆ 4 ರೂ. ರಂತೆ ಬೆಂಬಲ ಬೆಲೆ ಘೋಷಿಸಿದೆ. ಅದೇ ಮಾದರಿಯಲ್ಲಿ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಬರಬೇಕು ಎಂದು ಪ್ರತಿಭಟನಾಕಾರರು ಒತ್ತಾಯ ಮಾಡಿದರು.
ಮಾರುಕಟ್ಟೆಯಲ್ಲಿ ಮಾವಿನ ದರ ತೀವ್ರ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ, ಬೆಳೆಗಾರರ ರಕ್ಷಣೆಗೆ ಧಾವಿಸಿ ಕೂಡಲೇ ಬೆಂಬಲ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ಮಾವು ಬೆಳೆಗಾರರು ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು ಕೋಲಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಜಿಲ್ಲಾ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ ನೀಡಿದ್ದ 'ಕೋಲಾರ ಜಿಲ್ಲಾ ಬಂದ್' ಕರೆಗೆ ಜಿಲ್ಲೆಯ ಪ್ರಮುಖ ಮಾವು ಉತ್ಪಾದನಾ ಕೇಂದ್ರವಾದ ಶ್ರೀನಿವಾಸಪುರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಕೋಲಾರ ನಗರ ಸೇರಿದಂತೆ ಜಿಲ್ಲೆಯ ಇತರೆ ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆಯ ಕಾವು ಜೋರಾಗಿತ್ತು.
ರಸ್ತೆಗೆ ಮಾವು ಸುರಿದು ಆಕ್ರೋಶ
ಪ್ರತಿಭಟನೆಯ ಭಾಗವಾಗಿ ಆಕ್ರೋಶಿತ ರೈತರು ಮಾವಿನ ಕಾಯಿಗಳನ್ನು ಮುಖ್ಯ ರಸ್ತೆಗಳಿಗೆ ಸುರಿದು, ವಾಹನ ಸಂಚಾರ ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. "ಪ್ರಸ್ತುತ ಮಾರುಕಟ್ಟೆಯಲ್ಲಿ ದರ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದಾರೆ. ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಪ್ರತಿ ಟನ್ ಮಾವಿಗೆ ಕನಿಷ್ಠ 10 ಸಾವಿರ ರೂ. ಬೆಂಬಲ ಬೆಲೆ ಘೋಷಿಸಬೇಕು." ಎಂದು ಜಿಲ್ಲಾ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪ ರೆಡ್ಡಿ ಆಗ್ರಹಿಸದರು.
ಆಂಧ್ರ ಮಾದರಿ ಪರಿಹಾರಕ್ಕೆ ಪಟ್ಟು
ನೆರೆಯ ಆಂಧ್ರಪ್ರದೇಶ ಸರ್ಕಾರವು ಈಗಾಗಲೇ ತೋತಾಪುರಿ ತಳಿಯ ಮಾವಿಗೆ ಪ್ರತಿ ಕೆಜಿಗೆ 4 ರೂ. ರಂತೆ ಬೆಂಬಲ ಬೆಲೆ ಘೋಷಿಸಿದೆ. ಅದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಬರಬೇಕು ಎಂದು ಪ್ರತಿಭಟನಾಕಾರರು ಒತ್ತಾಯ ಮಾಡಿದರು.
ಕೇಂದ್ರದ ನಿರ್ಧಾರದ ನಿರೀಕ್ಷೆಯಲ್ಲಿ ಸಂಸದರು
ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು, "ಮಾವು ಬೆಳೆಗಾರರ ಸಂಕಷ್ಟದ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ನಾನು ಈಗಾಗಲೇ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದೇವೆ. ಶೀಘ್ರದಲ್ಲೇ ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆಯಾಗುವ ನಿರೀಕ್ಷೆಯಲ್ಲಿದ್ದೇವೆ," ಎಂದು ತಿಳಿಸಿದ್ದಾರೆ.

