
ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಸ್ಥಳೀಯ ಮೀನುಗಾರರು ರಕ್ಷಣಾ ಕಾರ್ಯ ನಡೆಸಿದರು.
ಮಂತ್ರಾಲಯ; ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ಸೇರಿ ಐವರು ನೀರುಪಾಲು
ಮಂತ್ರಾಲಯದ ಸಂಬಂಧಿಕರ ಮನೆಯಲ್ಲಿ ಆಯೋಜಿಸಿದ್ದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಇವರೆಲ್ಲರೂ ಆಗಮಿಸಿದ್ದರು. ಪೂಜೆ ಮುಗಿದ ಬಳಿಕ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದರು.
ರಾಜ್ಯದಲ್ಲಿ ಘೋರ ದುರಂತಗಳ ಸರಮಾಲೆ ಮುಂದುವರಿದಿದೆ. ಭಟ್ಕಳದಲ್ಲಿ ಕಪ್ಪೆಚಿಪ್ಪು ಹೆಕ್ಕಲು ನೀರಿಗಿಳಿದ 11 ಮಂದಿ ಜಲಸಮಾಧಿಯಾದ ಘಟನೆ ಮಾಸುವ ಮುನ್ನವೇ ಮಂತ್ರಾಲಯದ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಬಾಲಕ ಸೇರಿ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರಂತ ನಡೆದಿದೆ.
ಮಂತ್ರಾಲಯದ ಸಂಬಂಧಿಕರ ಮನೆಯಲ್ಲಿ ಆಯೋಜಿಸಿದ್ದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಇವರೆಲ್ಲರೂ ಆಗಮಿಸಿದ್ದರು. ಪೂಜೆ ಮುಗಿದ ಬಳಿಕ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದಾರೆ. ಆದರೆ, ನದಿಯ ನೀರಿನ ಆಳ ಮತ್ತು ಪ್ರವಾಹದ ತೀವ್ರತೆಯ ಅರಿವಿಲ್ಲದೆ ನೀರಿಗೆ ಇಳಿದಾಗ ಈ ದುರಂತ ಸಂಭವಿಸಿದೆ.
ಮೃತರನ್ನು ಹೈದರಾಬಾದ್ ಮೂಲದ ಯುವನ ಚಂದ್ರ (5), ಸತೀಶ್ (35 ), ಮಂತ್ರಾಲಯ ಗ್ರಾಮದ ರಾಘವೇಂದ್ರ (25),ಧನುಷ್ (23), ಉರವಕೊಂಡ ನಿವಾಸಿ ಸಂಧ್ಯಾ (22) ಎಂದು ಗುರುತಿಸಲಾಗಿದ್ದು, ಅದೃಷ್ಟವಶಾತ್ ಅಪರ್ಣಾ ಎಂಬ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪೊಲೀಸ್ ಅಧಿಕಾರಿಗಳು ಸ್ಥಳೀಯರಿಂದ ಮಾಹಿತಿ ಪಡೆದರು.
ಸ್ಥಳದಲ್ಲಿ ಮುಂದುವರಿದ ಶೋಧ ಕಾರ್ಯ
ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮೀನುಗಾರರು ಮತ್ತು ರಕ್ಷಣಾ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಪ್ರಸ್ತುತ ರಾಘವೇಂದ್ರ ಮತ್ತು ಸಂಧ್ಯಾ ಅವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನುಳಿದ ಮೂವರ ಮೃತದೇಹಗಳಿಗಾಗಿ ನದಿಯಲ್ಲಿ ತೀವ್ರ ಹುಡುಕಾಟ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಎಮ್ಮಿಗನೂರು ಡಿವೈಎಸ್ಪಿ ಭಾರ್ಗವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮಂತ್ರಾಲಯದ ಬಳಿಯೇ ಮೇ 8 ರಂದು ಹಾಸನ ಮೂಲದ ಮೂವರು ಯುವಕರು ಈಜಲು ನೀರಿಗೆ ಇಳಿದು ನಾಪತ್ತೆಯಾಗಿದ್ದರು. ಎರಡು ದಿನಗಳ ಬಳಿಕ ಮೃತದೇಹಗಳು ಪತ್ತೆಯಾಗಿದ್ದವು.
ರಾಜ್ಯದಲ್ಲಿ ಮುಂದುವರಿದ ಜಲ ದುರಂತಗಳು
ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ಜಲ ಮೂಲಗಳಲ್ಲಿ ಸಾರ್ವಜನಿಕರು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಆತಂಕ ಮೂಡಿಸಿವೆ. ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಮೀಪ ಮೊನ್ನೆ ಮೊನ್ನೆಯಷ್ಟೇ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಕಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರು ಹೆಚ್ಚಾದ ಪರಿಣಾಮ ಮಹಿಳೆಯರೂ ಸೇರಿ ಹಲವರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ದುರಂತ ಸಂಭವಿಸಿತ್ತು. ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಲ್ಲಿ ಮುಳುಗಿ ನಿನ್ನೆಯಷ್ಟೇ ಪ್ರಾಣ ಬಿಟ್ಟಿದ್ದರು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.

