
ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯನೇ ನಮ್ಮ ಹೈಕಮಾಂಡ್, ಡಿಕೆಶಿ ಹೇಳಿಕೆಯ ಹಿಂದಿನ ಮರ್ಮವೇನು?
ಮಾರ್ಚ್ 10ಕ್ಕೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ಚರ್ಚೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯನೇ ನಮ್ಮ ಹೈಕಮಾಂಡ್, ಅವರು ಹೇಳುವುದನ್ನು ನಾವು ಗೌರವದಿಂದ ಸ್ವೀಕರಿಸುತ್ತೇವೆ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.
ಶುಕ್ರವಾರ (ಫೆ.6) ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೂರ್ಣ ಅವಧಿಗೆ ಸಿದ್ದರಾಮಯ್ಯನವರೇ ಸಿಎಂ ಎಂದು ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಯಾವುದೇ ಊಹಾಪೋಹ ಇಲ್ಲ ಎಂದು ಇತ್ತೀಚೆಗೆ ಯತೀಂದ್ರ ಹೇಳಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ,"ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೇಳಿಕೆ ನೀಡಿರುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಏನೇ ಹೇಳಿಕೆ ನೀಡುವುದಿದ್ದರೂ ದೆಹಲಿಯವರು ಪ್ರತಿಕ್ರಿಯೆ ನೀಡಬೇಕು" ಎಂದು ತಿಳಿಸಿದರು.
ಹೈಕಮಾಂಡ್ಗೆ ಪರೋಕ್ಷ ಎಚ್ಚರಿಕೆ
ಮಾರ್ಚ್ 10ಕ್ಕೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸುತ್ತಿದ್ದೇನೆ. ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ ಎಂದು ಹೇಳಿರುವುದು ಪರೋಕ್ಷವಾಗಿ ಹೈಕಮಾಂಡ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆಯೇ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.
ಧರ್ಮದಲ್ಲಿ ರಾಜಕಾರಣ ಬೇಡ
ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅಲ್ಪಸಂಖ್ಯಾತರನ್ನು ಆಹ್ವಾನಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಕಾಂಗ್ರೆಸ್ ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲಾ ಜಾತಿ, ಧರ್ಮದವರು ಬೇಕು. ನಾವು ಜಾತಿ ಹಾಗೂ ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಸಿದ್ಧಾಂತ. ಯಾರೋ ಅಸೂಯೆ ಇರುವವರು ಈ ರೀತಿ ಮಾಡುತ್ತಾರೆ" ಎಂದು ಹೇಳಿದರು.

