
ಶಾಸಕ ಸತೀಶ್ ಜಾರಕಿಹೊಳಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಫೈನಲ್? ಸತೀಶ್ ಜಾರಕಿಹೊಳಿ ಬೇಡಿಕೆಗೆ ಹೈಕಮಾಂಡ್ ಬ್ರೇಕ್!
ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಗಳಾಗುತ್ತಿದ್ದು, ಈ ರೇಸ್ನಲ್ಲಿ ಅನಿರೀಕ್ಷಿತವಾಗಿ ಬಿ.ಕೆ. ಹರಿಪ್ರಸಾದ್ ಹೆಸರು ಮುಂಚೂಣಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಡಿಸಿಎಂ, ಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷಗಿರಿಯ ಪೈಪೋಟಿಗೆ ಕೊನೆಗೂ ತೆರೆಬಿದ್ದಂತೆ ಕಾಣುತ್ತಿದೆ. ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದು ನಿಶ್ಚಿತವಾಗುತ್ತಿದ್ದಂತೆ ತೆರವಾಗಲಿರುವ ಪಕ್ಷದ ಅತ್ಯುನ್ನತ ಹುದ್ದೆಗೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಫೈನಲ್ ಆಗಿದೆ ಎಂದು ಮೂಲಗಳು ತಿಳಿಸಿವೆ. ಮಂತ್ರಿ ಸ್ಥಾನದ ಜೊತೆಗೆ ಪಕ್ಷದ ಜವಾಬ್ದಾರಿಯನ್ನೂ ನಿಭಾಯಿಸಲು ಮುಂದಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಈ ಬೆಳವಣಿಗೆಯಿಂದ ಭಾರಿ ನಿರಾಸೆಯಾಗಿದೆ.
ಹೈಕಮಾಂಡ್ನಿಂದಲೇ ಬಂತು ಕರೆ!
ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಖುದ್ದಾಗಿ ಬಿ.ಕೆ. ಹರಿಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಸೂಚಿಸಿದ್ದು, ಎಂಎಲ್ಸಿ ಸ್ಥಾನದ ಜೊತೆಗೆ ಪಕ್ಷದ ಸಾರಥ್ಯವನ್ನು ಹರಿಪ್ರಸಾದ್ ಅವರಿಗೆ ನೀಡಲು ಹೈಕಮಾಂಡ್ ಒಲವು ತೋರಿದೆ. ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಗಳಾಗುತ್ತಿದ್ದು, ಈ ರೇಸ್ನಲ್ಲಿ ಅನಿರೀಕ್ಷಿತವಾಗಿ ಅವರ ಹೆಸರು ಮುಂಚೂಣಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಸತೀಶ್ ಜಾರಕಿಹೊಳಿ ಬೇಡಿಕೆಗೆ ಹೈಕಮಾಂಡ್ ಬ್ರೇಕ್?
ಆರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ನಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರು ಬಲವಾಗಿ ಕೇಳಿಬಂದಿತ್ತು. ಆದರೆ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷಗಿರಿಯನ್ನೂ ಅವರು ಕೇಳಿದ್ದು ಹೈಕಮಾಂಡ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿತ್ತು. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಡಿ ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದ್ದು, ಸತೀಶ್ ಜಾರಕಿಹೊಳಿ ಅವರ ಆಸೆಗೆ ತಣ್ಣೀರೆರಚಿದಂತಾಗಿದೆ.
ಎಐಸಿಸಿ ನಿರ್ಧಾರಕ್ಕೆ ಬದ್ಧ
ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, "ಪಕ್ಷ ನನಗೆ ಯಾವ ಜವಾಬ್ದಾರಿ ನೀಡುತ್ತದೆ ಎಂಬ ಬಗ್ಗೆ ನನಗಿನ್ನೂ ನಿಖರ ಮಾಹಿತಿ ಇಲ್ಲ. ಅಧಿಕೃತ ಘೋಷಣೆ ಹೊರಬೀಳುವವರೆಗೂ ಕಾಯೋಣ. ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡರೂ ನಾನೂ ಸೇರಿದಂತೆ ಎಲ್ಲರೂ ಅದಕ್ಕೆ ತಲೆಬಾಗಲೇಬೇಕು". ಹಿರಿಯ ದಲಿತ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನ ಸಿಕ್ಕರೆ ಅದು ಸ್ವಾಗತಾರ್ಹ ಮತ್ತು ಒಳ್ಳೆಯ ನಿರ್ಧಾರ ಎಂದು ತಿಳಿಸಿದ್ದಾರೆ.

