
ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್, ಹಂಗಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕ ಡಾ.ಜಿ. ಪರಮೇಶ್ವರ್
ಹೊಸ ಡಿಸಿಎಂ ಹುದ್ದೆ ಸೃಷ್ಟಿ? ಜಿ. ಪರಮೇಶ್ವರ್ ಪರ ಸಿದ್ದರಾಮಯ್ಯ ಬ್ಯಾಟಿಂಗ್!
ರಾಜ್ಯಸಭಾ ಚುನಾವಣೆಯ ನಂತರದ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯ ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ಒಂದೇ ಒಂದು ಡಿಸಿಎಂ ಹುದ್ದೆಯನ್ನು ಹೆಚ್ಚುವರಿಯಾಗಿ ಸೃಷ್ಟಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ಎನ್ನಲಾಗಿದೆ.
ರಾಜ್ಯ ರಾಜಕಾರಣದಲ್ಲಿ ಮತ್ತೆ ಉಪಮುಖ್ಯಮಂತ್ರಿ ಹುದ್ದೆಯ ಸೃಷ್ಟಿ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿದ್ದು, ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಈ ಮಹತ್ವದ ಜವಾಬ್ದಾರಿ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ರಾಜ್ಯದಲ್ಲಿ ಕೇವಲ 'ಒಂದೇ ಉಪಮುಖ್ಯಮಂತ್ರಿ' ಹುದ್ದೆಯನ್ನು ಸೃಷ್ಟಿಸುವ ಸಂಬಂಧ ಹೈಕಮಾಂಡ್ ಮಟ್ಟದಲ್ಲಿ ಅತ್ಯಂತ ಮಹತ್ವದ ಮಾತುಕತೆಗಳು ಜರುಗಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಂಗಳವಾರ (ಜೂ.3) ದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಗಿದ್ದು, ರಾಜ್ಯಸಭಾ ಚುನಾವಣೆಯ ನಂತರದ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯ ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ಒಂದೇ ಒಂದು ಡಿಸಿಎಂ ಹುದ್ದೆಯನ್ನು ಹೆಚ್ಚುವರಿಯಾಗಿ ಸೃಷ್ಟಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ಎನ್ನಲಾಗಿದೆ.
ಪರಮೇಶ್ವರ್ ಪರ ಸಿದ್ದರಾಮಯ್ಯ ಬ್ಯಾಟಿಂಗ್!
ಈ ಬಾರಿಯ ಚರ್ಚೆಯಲ್ಲಿ ಅತ್ಯಂತ ಗಮನಾರ್ಹ ಅಂಶವೆಂದರೆ ಸಿದ್ದರಾಮಯ್ಯ ಅವರು ಡಾ. ಜಿ. ಪರಮೇಶ್ವರ್ ಅವರ ಪರವಾಗಿ ಗಟ್ಟಿಯಾಗಿ ನಿಂತಿರುವುದು. ಸಭೆಯಲ್ಲಿ ಪರಮೇಶ್ವರ್ ಪರ ಭರ್ಜರಿ ಬ್ಯಾಟಿಂಗ್ ಮಾಡಿರುವ ಸಿದ್ದರಾಮಯ್ಯ, ಅವರ ಹಿರಿತನ, ಪಕ್ಷಕ್ಕೆ ನೀಡಿರುವ ಕೊಡುಗೆ ಮತ್ತು ದಲಿತ ಸಮುದಾಯದ ಪ್ರಾತಿನಿಧ್ಯವನ್ನು ಉಲ್ಲೇಖಿಸಿ, ಅವರಿಗೆ ಡಿಸಿಎಂ ಸ್ಥಾನವನ್ನು ನೀಡಲೇಬೇಕು ಎಂದು ಹೈಕಮಾಂಡ್ ನಾಯಕರ ಮುಂದೆ ಬಲವಾಗಿ ಒತ್ತಾಯಿಸಿದ್ದಾರೆ.
ಬದಲಾಗುತ್ತಾ ರಾಜ್ಯ ರಾಜಕೀಯ ಸಮೀಕರಣ?
ಪ್ರಸ್ತುತ ಡಿ.ಕೆ. ಶಿವಕುಮಾರ್ ಅವರು ಮಾತ್ರ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈಗ ಪರಮೇಶ್ವರ್ ಅವರಿಗೂ ಡಿಸಿಎಂ ಪಟ್ಟ ನೀಡಲು ಸಿಎಂ ಸಿದ್ದರಾಮಯ್ಯ ಅವರೇ ಉತ್ಸುಕರಾಗಿರುವುದು ಕೈ ಪಾಳಯದಲ್ಲಿ ಹೊಸ ರಾಜಕೀಯ ಸಮೀಕರಣಗಳಿಗೆ ನಾಂದಿ ಹಾಡಿದೆ. ಸಿಎಂ ಅವರ ಈ ನಡೆಗೆ ಹೈಕಮಾಂಡ್ ಹಸಿರು ನಿಶಾನೆ ತೋರುತ್ತಾ? ಅಥವಾ ಪಕ್ಷದಲ್ಲಿ ಭಿನ್ನಮತ ಭುಗಿಲೇಳುತ್ತಾ? ಎಂಬ ಕುತೂಹಲ ರಾಜಕೀಯ ವಲಯದಲ್ಲಿದೆ.

