
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಇಂದಿರಾ ನಗರದಲ್ಲಿ ಭೀಕರ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಶಿವಮೊಗ್ಗ ಗುಡ್ಡ ಕುಸಿತ ದುರಂತ; ಒಂದೇ ಕುಟುಂಬದ ಮೂವರು ಸಾವು ಶಂಕೆ
ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಮಣ್ಣಿನಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಇಂದಿರಾ ನಗರದಲ್ಲಿ ಭೀಕರ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದುರ್ಘಟನೆ ಭಾನುವಾರ ಮುಂಜಾನೆ ನಡೆದಿದೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (35), ಅವರ ಪತ್ನಿ ನಾಗವೇಣಿ (28) ಹಾಗೂ ಮೂರು ವರ್ಷದ ಪುತ್ರ ಸಂತೋಷ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಕುಟುಂಬವು ತಾತ್ಕಾಲಿಕ ಶೆಡ್ನಲ್ಲಿ ನಿದ್ರಿಸುತ್ತಿದ್ದ ವೇಳೆ ಮುಂಜಾನೆ ಸುಮಾರು 2.30ರ ಸುಮಾರಿಗೆ ನಿರಂತರ ಮಳೆಯಿಂದ ಗುಡ್ಡ ಕುಸಿದು ಶೆಡ್ ಮೇಲೆ ಬಿದ್ದಿದೆ. ಪರಿಣಾಮ ಮೂವರೂ ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗುಡ್ಡ ಕುಸಿತದ ವೇಳೆ ಪಕ್ಕದ ಶೆಡ್ನಲ್ಲಿ ವಾಸವಾಗಿದ್ದ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಜೆಸಿಬಿ ಸೇರಿದಂತೆ ಅಗತ್ಯ ಉಪಕರಣಗಳ ಸಹಾಯದಿಂದ ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದರು.
ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಗುಡ್ಡ ಕುಸಿತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಗುಡ್ಡ ಹಾಗೂ ನದಿ ತೀರದ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಪ್ರಕರಣ ದಾಖಲು
ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುಡ್ಡ ಕುಸಿತದ ನಿಖರ ಕಾರಣ ಹಾಗೂ ದುರಂತದ ಸಂಪೂರ್ಣ ವಿವರಗಳ ಕುರಿತು ತನಿಖೆ ಮುಂದುವರಿದಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಡಳಿತ ಸೂಚಿಸಿದೆ.

