ರಾಜ್ಯ ರಾಜಕೀಯದಲ್ಲಿ ಸಂಚಲನ: ಸಿದ್ದರಾಮಯ್ಯ ವರ್ಸಸ್ ಜಮೀರ್ ಅಹ್ಮದ್ ಜಿದ್ದಾಜಿದ್ದಿ
x

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ನಡುವಿನ ರಾಜಕೀಯ ಜಿದ್ದಾಜಿದ್ದಿ, ಡಾ. ಎಚ್.ಸಿ. ಮಹದೇವಪ್ಪ ಬೆಂಬಲಿಗರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ದಲಿತ ಪ್ರತಿಭಟನಾ ಸಮಾವೇಶ

ರಾಜ್ಯ ರಾಜಕೀಯದಲ್ಲಿ ಸಂಚಲನ: ಸಿದ್ದರಾಮಯ್ಯ ವರ್ಸಸ್ ಜಮೀರ್ ಅಹ್ಮದ್ ಜಿದ್ದಾಜಿದ್ದಿ

ದಾವಣಗೆರೆ ಉಪಚುನಾವಣೆ ಆಡಿಯೋ ವೈರಲ್ ಬೆನ್ನಲ್ಲೇ ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ; ಸಂಪುಟ ಪುನಾರಚನೆ ಲಾಬಿ ಮತ್ತು ಹೇಮಾವತಿ ಕೆನಾಲ್ ಯೋಜನೆ ವಿವಾದದ ಸಂಪೂರ್ಣ ರಾಜಕೀಯ ಚಿತ್ರಣ ಇಲ್ಲಿದೆ.


Click the Play button to hear this message in audio format

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪರಮಾಪ್ತ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿರುವುದು ಈಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಉಪಚುನಾವಣೆ ಸಂದರ್ಭದಲ್ಲಿ ಜಮೀರ್ ಅವರು ತಮ್ಮ ಬೆಂಬಲಿಗರೊಬ್ಬರ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಇದರಲ್ಲಿ ಮುಸ್ಲಿಂ ಮತಗಳು ಕಾಂಗ್ರೆಸ್ ಅಭ್ಯರ್ಥಿಗೆ ಹೋಗದಂತೆ ತಡೆದು, ಎಸ್‌ಡಿಪಿಐ ಅಥವಾ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಕೆಪಿಸಿಸಿ ಹಾಗೂ ಸಿದ್ದರಾಮಯ್ಯ ಅವರಿಗೆ ಅಧಿಕೃತ ದೂರು ನೀಡಿದ್ದು, ಸಿದ್ದರಾಮಯ್ಯ ಅವರ ಗರಂ ಆಗಿರುವುದು ಪಕ್ಷದ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಮಹದೇವಪ್ಪ ಪರ ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಹಿರಿಯ ದಲಿತ ನಾಯಕರಾದ ಡಾ. ಎಚ್.ಸಿ. ಮಹದೇವಪ್ಪ ಅವರಿಗೆ ಸೂಕ್ತ ಖಾತೆಯೊಂದಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಕಾಂಗ್ರೆಸ್ ಗೆಲುವಿಗೆ ದಲಿತ ಸಮುದಾಯ ಬೆನ್ನೆಲುಬಾಗಿದ್ದರೂ ಅಧಿಕಾರ ಹಂಚಿಕೆಯಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ. ಮತ್ತೊಂದೆಡೆ, ಮಹದೇವಪ್ಪ ಅವರ ಮಗ ಸುನೀಲ್ ಬೋಸ್ ಈಗಾಗಲೇ ಸಂಸದರಾಗಿರುವುದರಿಂದ ಒಂದೇ ಕುಟುಂಬಕ್ಕೆ ಎರಡು ಅಧಿಕಾರ ನೀಡಬಾರದು ಎಂಬ ಒಲವು ಹೈಕಮಾಂಡ್‌ನಲ್ಲಿದೆ ಎನ್ನಲಾಗಿದೆ. ಜೂನ್ 18ರ ರಾಜ್ಯಸಭೆ ಚುನಾವಣೆ ಬಳಿಕ ಎರಡನೇ ಹಂತದ ಸಂಪುಟ ಪುನಾರಚನೆ ನಡೆಯಲಿದ್ದು, ಎನ್.ಎಸ್. ಬೋಸರಾಜು, ಎಚ್.ಕೆ. ಪಾಟೀಲ್ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನಕ್ಕಾಗಿ ಭಾರಿ ಲಾಬಿ ಆರಂಭಿಸಿದ್ದಾರೆ.

ಮತ್ತೆ ಮುನ್ನೆಲೆಗೆ ಹೇಮಾವತಿ ವಿವಾದ: ಜಲಹೋರಾಟದ ಕಿಡಿ

ತುಮಕೂರು ಜಿಲ್ಲೆಯಲ್ಲಿ ತೀವ್ರ ವಿರೋಧದ ಕಾರಣ ಕಳೆದ ಹತ್ತು ತಿಂಗಳಿಂದ ಸ್ಥಗಿತಗೊಂಡಿದ್ದ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಯೋಜನೆಯ ಕಾಮಗಾರಿಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಸದ್ದಿಲ್ಲದೆ ಸಿದ್ಧತೆ ನಡೆಸುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಗುಬ್ಬಿ ತಾಲೂಕಿನಿಂದ ಆರಂಭವಾಗಿ ಕುಣಿಗಲ್ ಮಾರ್ಗವಾಗಿ ಮಾಗಡಿವರೆಗೆ ಹೇಮಾವತಿ ನೀರು ಸಾಗಿಸುವ ಈ ಯೋಜನೆಗೆ ಬಿಜೆಪಿ, ಜೆಡಿಎಸ್ ಹಾಗೂ ರೈತ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ತುಮಕೂರು ಜಿಲ್ಲೆಯ ನೀರನ್ನು ಗಡಿ ದಾಟಿಸಲು ಬಿಡುವುದಿಲ್ಲ ಎಂದು ಮೈತ್ರಿಕೂಟ ಸವಾಲು ಹಾಕಿದ್ದರೆ, ಕುಣಿಗಲ್ ಭಾಗಕ್ಕೆ ನ್ಯಾಯ ಒದಗಿಸಲು ಕಾಂಗ್ರೆಸ್ ಹಠಕ್ಕೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಜಿಲ್ಲೆಗೆ ನೀರು ಕೊಂಡೊಯ್ಯಲು ಈ ಯೋಜನೆ ರೂಪಿಸಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದು, ಜಿಲ್ಲೆಯಲ್ಲಿ ಮತ್ತೊಂದು ಸುತ್ತಿನ ಜಲಹೋರಾಟದ ಕಿಡಿ ಹೊತ್ತಿಕೊಳ್ಳುವ ಮುನ್ಸೂಚನೆ ಸಿಕ್ಕಿದೆ.

Read More
Next Story