
ಸಾಂದರ್ಭಿಕ ಚಿತ್ರ
SSLC Result: ಗೊಂದಲಗಳ ಮಧ್ಯೆ ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ
ಮೇಲ್ಮನವಿಯಿಂದ ಫಲಿತಾಂಶ ಮತ್ತಷ್ಟು ವಿಳಂಬವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಈ ವರ್ಷ ಹೈಕೋರ್ಟ್ ಆದೇಶ ಪಾಲಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದ ಲಕ್ಷಾಂತರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿದ್ದ ಫಲಿತಾಂಶಕ್ಕೆ ಅಂತಿಮವಾಗಿ ಮುಹೂರ್ತ ನಿಗದಿಯಾಗಿದೆ. ತೃತೀಯ ಭಾಷೆ (ಹಿಂದಿ) ಅಂಕಗಳ ಹಂಚಿಕೆ ವಿಚಾರವಾಗಿ ಸೃಷ್ಟಿಯಾಗಿದ್ದ ಕಾನೂನು ಗೊಂದಲಗಳಿಗೆ ತೆರೆಬಿದ್ದಿದ್ದು, ಗುರುವಾರ ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ.
ಈ ಕುರಿತು ಬುಧವಾರ (ಏ.22) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕೃತ ಮಾಹಿತಿ ನೀಡಿದ್ದು, "ತೃತೀಯ ಭಾಷೆಗೆ ಕೇವಲ ಗ್ರೇಡ್ ನೀಡುವ ಬದಲು ಅಂಕಗಳನ್ನೇ ನೀಡಬೇಕು ಎಂಬ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಸರ್ಕಾರ ಗಂಭೀರವಾಗಿ ಚರ್ಚಿಸಿತ್ತು" ಎಂದು ತಿಳಿಸಿದರು.
ಆದರೆ, ಮೇಲ್ಮನವಿಯಿಂದ ಫಲಿತಾಂಶ ಮತ್ತಷ್ಟು ವಿಳಂಬವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ, ಈ ವರ್ಷ ಹೈಕೋರ್ಟ್ನ ಆದೇಶವನ್ನು ಪಾಲಿಸಲು ಸರ್ಕಾರ ತೀರ್ಮಾನಿಸಿದೆ. ಅದರಂತೆ, ಈ ಬಾರಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ತೃತೀಯ ಭಾಷೆಗೆ ಸಂಬಂಧಿಸಿದಂತೆ ಅಂಕಗಳನ್ನೇ ನಮೂದಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಒಂದು ದಿನ ಮುಂಚಿತವಾಗಿ ಫಲಿತಾಂಶ
ಎಸ್ಎಸ್ಎಲ್ಸಿ ಫಲಿತಾಂಶವನ್ನು ಏ. 24ರಂದು ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿತ್ತು. ಆದರೆ, ಕಾನೂನು ತೊಡಕುಗಳು ನಿವಾರಣೆಯಾಗಿರುವುದರಿಂದ, ಒಂದು ದಿನ ಮುಂಚಿತವಾಗಿಯೇ ಫಲಿತಾಂಶವನ್ನು ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲು ಇಲಾಖೆ ನಿರ್ಧರಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ವೀಕ್ಷಿಸಬಹುದಾಗಿದೆ.

