x

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಹೈಕಮಾಂಡ್ ಸೂಚನೆ

ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ದೊರೆಯುವ ಮುನ್ನವೇ ಅಥವಾ ಇತರ ಕಾನೂನು ಬೆಳವಣಿಗೆಗಳು ಸಂಭವಿಸುವ ಮುನ್ನವೇ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯುವುದು ಸೂಕ್ತ ಎಂಬುದು ಹೈಕಮಾಂಡ್‌ ಅಭಿಪ್ರಾಯ


Click the Play button to hear this message in audio format

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಸಚಿವರಿಂದಲೇ ರಾಜೀನಾಮೆ ಕೊಡಿಸುವ ನಿರ್ಧಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್ ಬಂದಿದೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ವಿಧಾನಸಭೆಯ ಕಲಾಪಗಳು ಪ್ರತಿಪಕ್ಷಗಳ ಧರಣಿ ಮತ್ತು ಪ್ರತಿಭಟನೆಗಳಿಂದಾಗಿ ಅಸ್ತವ್ಯಸ್ತಗೊಂಡಿದ್ದವು. ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪಾದಯಾತ್ರೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಈ ಬೆಳವಣಿಗೆ ಕಾಂಗ್ರೆಸ್‌ ಸರ್ಕಾರದ ವರ್ಚಸ್ಸಿನ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಹೈಕಮಾಂಡ್‌ನಲ್ಲಿ ಮೂಡಿದೆ ಎನ್ನಲಾಗಿದೆ.

ದೆಹಲಿಯಲ್ಲಿ ಸಿಎಂ, ಡಿಸಿಎಂ ಜೊತೆ ಮಹತ್ವದ ಚರ್ಚೆ

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ. ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರೊಂದಿಗೆ ನಡೆದ ಸಭೆಯಲ್ಲಿ ವಾಲ್ಮೀಕಿ ನಿಗಮ ಹಗರಣದ ತನಿಖೆ, ಪ್ರತಿಪಕ್ಷಗಳ ಪ್ರತಿಭಟನೆ ಮತ್ತು ಸಚಿವ ನಾಗೇಂದ್ರ ಅವರ ಮುಂದಿನ ನಡೆ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚರ್ಚೆಯ ಭಾಗವಾಗಿ ಸಚಿವ ಬಿ. ನಾಗೇಂದ್ರ ಅವರನ್ನೂ ದೆಹಲಿಗೆ ಕರೆಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಕುರಿತು ಹೈಕಮಾಂಡ್‌ ನಾಯಕರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ತನಿಖೆ ತೀವ್ರ: ಮುನ್ನೆಚ್ಚರಿಕೆಯ ಕ್ರಮಕ್ಕೆ ನಿರ್ಧಾರ?

ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ತನಿಖೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಾನೂನು ಮತ್ತು ರಾಜಕೀಯ ಒತ್ತಡ ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ದೊರೆಯುವ ಮುನ್ನವೇ ಅಥವಾ ಇತರ ಕಾನೂನು ಬೆಳವಣಿಗೆಗಳು ಸಂಭವಿಸುವ ಮುನ್ನವೇ ಸಚಿವರಿಂದ ರಾಜೀನಾಮೆ ಪಡೆಯುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ.

ನಾಗೇಂದ್ರ ಅವರಿಂದಲೇ ರಾಜೀನಾಮೆ ಘೋಷಣೆ ಮಾಡಿಸುವ ತಂತ್ರ

ಸಚಿವರನ್ನು ನೇರವಾಗಿ ವಜಾಗೊಳಿಸಿದರೆ ಅವರ ಬೆಂಬಲಿಗರಲ್ಲಿ ಅಸಮಾಧಾನ ಉಂಟಾಗುವ ಸಾಧ್ಯತೆಯಿದೆ. ಇದರಿಂದ ರಾಜಕೀಯವಾಗಿ ಮತ್ತಷ್ಟು ಸಮಸ್ಯೆ ಎದುರಾಗಬಹುದು ಎಂಬ ಕಾರಣಕ್ಕೆ, ಸಚಿವ ಬಿ. ನಾಗೇಂದ್ರ ಅವರೇ ಸ್ವಯಂಪ್ರೇರಿತವಾಗಿ ರಾಜೀನಾಮೆ ಘೋಷಿಸುವಂತೆ ಮನವೊಲಿಸುವ ತಂತ್ರವನ್ನು ಕಾಂಗ್ರೆಸ್‌ ಹೈಕಮಾಂಡ್ ಅನುಸರಿಸಿದೆ ಎನ್ನಲಾಗಿದೆ.

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕಾಗಿ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ನಾಗೇಂದ್ರ ಅವರೇ ಪತ್ರಿಕಾಗೋಷ್ಠಿಯಲ್ಲಿ ಘೋಷಿಸುವ ಸಾಧ್ಯತೆಯಿದೆ. ಬಳಿಕ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿ, ಅದನ್ನು ಅಂಗೀಕಾರಕ್ಕಾಗಿ ರಾಜ್ಯಪಾಲರಿಗೆ ಕಳುಹಿಸುವ ನಿರೀಕ್ಷೆಯಿದೆ.

ಸಚಿವರ ಅಧಿಕೃತ ಘೋಷಣೆ ಹಾಗೂ ಪತ್ರಿಕಾಗೋಷ್ಠಿಯ ಬಳಿಕ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದ ರಾಜೀನಾಮೆ ವಿಚಾರದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ತೆರೆ ಬೀಳುವ ಸಾಧ್ಯತೆಯಿದೆ.

Read More
Next Story